ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಕೈಗೊಂಡ “ಆಪರೇಷನ್ ಸಿಂಧೂರ್” ಕಾರ್ಯಾಚರಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಧ್ವಂಸಗೊಳಿಸಿದ ಸೈನಿಕರ ಪರಾಕ್ರಮವನ್ನು ಕೊಂಡಾಡಿದ ಅವರು, ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ಸಂಪೂರ್ಣ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ, ರಾಯಚೂರಿನಲ್ಲಿ ಯೋಜಿಸಲಾಗಿದ್ದ ಪ್ರತಿಭಟನೆಯನ್ನು ಸೈನಿಕರಿಗೆ ಗೌರವವಾಗಿ ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಇಂದು ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕುಂಕುಮ ಧರಿಸಿ ಆಗಮಿಸಿದ ಸಿಎಂ ಸಿದ್ದರಾಮಯ್ಯ, “ಆಪರೇಷನ್ ಸಿಂಧೂರ್ ಅಭಿನಂದನಾರ್ಹ ಕಾರ್ಯಾಚರಣೆಯಾಗಿದೆ. ಭಾರತೀಯ ಸೇನೆಯು ಉಗ್ರರ ನೆಲೆಗಳ ಮೇಲೆ ನಿಖರವಾಗಿ ದಾಳಿ ನಡೆಸಿ, ದೇಶದ ರಕ್ಷಣೆಯಲ್ಲಿ ತನ್ನ ಶೌರ್ಯವನ್ನು ಮೆರೆದಿದೆ. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರವು ಈ ಕಾರ್ಯಾಚರಣೆಗೆ ಸಂಪೂರ್ಣ ಬೆಂಬಲ ನೀಡುತ್ತದೆ,” ಎಂದು ಹೇಳಿದ್ದಾರೆ.