ಬೆಳಗಾವಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ!

Film 2025 04 05t232709.154

ಬೆಳಗಾವಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿರುವವರ ಮೇಲೆ ಲಾಠಿ ಚಾರ್ಜ್ ಪ್ರಕರಣವನ್ನು ಧಾರವಾಡ ಹೈಕೋರ್ಟ್ ಪೀಠ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, ಸರ್ಕಾರ ಈ ಕೂಡಲೇ ತ್ವರಿತಗತಿಯಲ್ಲಿ ತನಿಖೆ ನಡೆಸಿ ವರದಿ ನೀಡಬೇಕು ಎಂದು ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ. 10 ರಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಅಧಿವೇಶನದ ಸಂದರ್ಭದಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ಘಟನೆಯನ್ನು ತನಿಖಾ ಆಯೋಗಕ್ಕೆ ವಹಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ ಎಂದು ಹೇಳಿದರು.

ರಾಜ್ಯ ಸರ್ಕಾರವು ಕೂಡಲೇ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಬೇಕು. ಆಯೋಗವು ಕಾಲಮಿತಿಯಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದೂ ಹೈಕೋರ್ಟ್ ಆದೇಶದಲ್ಲಿ ನಿರ್ದೇಶಿಸಲಾಗಿದೆ. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಪ್ರಕಟವಾಗಬೇಕಾಗಿದೆ ಎಂದು ತಿಳಿಸಿದರು.

ಕಳೆದ 4 ವರ್ಷಗಳಿಂದ ಪಂಚಮಸಾಲಿ ಹೋರಾಟ ನಡೆಯುತ್ತಿದೆ, ಬೊಮ್ಮಾಯಿ ಸರ್ಕಾರ 2ಡಿ ಮೀಸಲಾತಿ ನೀಡಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರ ಇದುವರೆಗೂ ಅನುಷ್ಠಾನ ಮಾಡಲಿಲ್ಲ. ಅದಾದ ಬಳಿಕ ಮತ್ತೊಂದು ಸುತ್ತಿನ ಹೋರಾಟ 2ಎ ಮೀಸಲಾತಿಗಾಗಿ ಸುವರ್ಣ ಸೌಧ ಮುತ್ತಿಗೆಗೆ ಯತ್ನಿಸಿದ್ದ ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ನಂತರ ಪಂಚಮಸಾಲಿ ಹೋರಾಟಗಾರರರಿಗೆ ಪೊಲೀಸ್ ಇಲಾಖೆಯಿಂದ ನಿರಂತರವಾಗಿ ಬೆದರಿಕೆ ಹಾಕಲಾಗಿದ್ದು, ರ‍್ಯಾಲಿಗೆ ಬರುವ ಟ್ರ್ಯಾಕ್ಟರ್ ಕೂಡ ವಶಪಡಿಸಿಕೊಳ್ಳಲಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಇತಿಹಾಸದಲ್ಲಿ ಲಿಂಗಾಯತ ಸಮಾಜದವರ ಮೇಲೆ ಯಾರೂ ಕೂಡ ಈ ರೀತಿಯ ಹಲ್ಲೆ ಮಾಡಿರಲಿಲ್ಲ. ಹಾಗಾಗಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೇಳಲು ಸರ್ಕಾರದ ಮುಂದೆ ಹೋಗುವುದಿಲ್ಲ. ಬದಲಿಗೆ ಜನರ ಮುಂದೆ ಹೋಗುತ್ತೇವೆ. ಪಂಚಮಸಾಲಿಗಳಿಗೆ ಮೀಸಲಾತಿ ಸಿಗಬೇಕು ಎಂದು ಆಗ್ರಹಿಸಿ ಮೇ.18 ರಂದು ಕೂಡಲ ಸಂಗಮದಲ್ಲಿ ಬೃಹತ್ ಪ್ರತಿಭಟನಾ ಹೋರಾಟ ನಡೆಸಲಾಗುವುದು. ಮುಂದಿನ ಮೂರು ವರ್ಷ ಹೋರಾಟ ಜಾರಿಯಲ್ಲಿರಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತೆರಳಲಿದ್ದೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಹಿರಿಯ ವಕೀಲರಾದ ಪ್ರಭುಲಿಂಗ ನಾವದಗಿ ಹಾಗೂ ಪೂಜಾ ಸವದತ್ತಿ, ವಕೀಲರ ಸಂಘದ ಕಾರ್ಯಾಧ್ಯಕ್ಷ ಆರ್ ಬಿ ಪಾಟೀಲ್, ದೀಪಕ್ ವಿಜಯವಾಡ, ಎಸ್ ಪಾಟೀಲ್, ಆನಂದ್ ಬಿರಾದಾರ, ನಿಂಗನಗೌಡ ಸೇರಿದಂತೆ ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.

ಯತ್ನಾಳ ಉಚ್ಛಾಟನೆ ಖಂಡಿಸಿ ಬೃಹತ್ ಸಮಾವೇಶ:

ಬಸನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆಯನ್ನು ಖಂಡಿಸಿ ಏ. 7 ರಂದು ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಲಾಗುವುದು. ಅಲ್ಲದೇ ಏ. 10ರ ಒಳಗಾಗಿ ಉಚ್ಚಾಟನೆಯ ತೀರ್ಮಾನವನ್ನು ಬಿಜೆಪಿ ಹಿಂಪಡೆಯದಿದ್ದರೆ ಮೇ 11ಕ್ಕೆ ವಿಜಯಪುರದಲ್ಲಿ ಬೃಹತ್ ಹೋರಾಟ ನಡೆಸಲಾಗುವುದು. ರಾಜ್ಯಾದ್ಯಂತ ಇನ್ನಷ್ಟು ಹೋರಾಟ ಸಂಘಟಿಸುವ ಕುರಿತು ಚರ್ಚೆಗಳು ನಡೆದಿವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version