ಬೆಂಗಳೂರು, ಏಪ್ರಿಲ್ 14: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮತ್ತು ಜೈಲು ಸಿಬ್ಬಂದಿ ನಡುವೆ ಗಲಾಟೆ ನಡೆದಿದೆ. ಜೈಲಿನೊಳಗೆ ನಿಷೇಧಿತ ವಸ್ತುಗಳ ಪೂರೈಕೆ ತಡೆಗೆ ಅಧಿಕಾರಿಗಳು ಕೈಗೊಂಡ ಶೋಧ ಕಾರ್ಯಾಚರಣೆಯ ವೇಳೆ ಈ ಘಟನೆ ಸಂಭವಿಸಿದೆ. ಪರಿಸ್ಥಿತಿ ಕೈಮೀರಿದ ಹಿನ್ನೆಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಯಾವಾಗ, ಎಲ್ಲಿ ನಡೆಯಿತು?
ಮಾರ್ಚ್ 29ರಂದು ರಾತ್ರಿ ಸುಮಾರು 11:45 ರ ಸುಮಾರಿಗೆ ಪರಪ್ಪನ ಅಗ್ರಹಾರ ಜೈಲಿನ ‘ಟವರ್-1’ ವಿಚಾರಣಾ ಬಂಧಿಗಳ ವಿಭಾಗದ 5ನೇ ಕೊಠಡಿಯಲ್ಲಿ ಈ ಘಟನೆ ನಡೆದಿದೆ. ಜೈಲು ಅಧೀಕ್ಷಕ ಕರ್ಣ ಕ್ಷತ್ರಿ ಅವರ ನೇತೃತ್ವದಲ್ಲಿ ಸಿಬ್ಬಂದಿ ಬ್ಯಾರಕ್ ತಪಾಸಣೆಗೆ ತೆರಳಿದಾಗ ಕೈದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಹೇಗೆ ಆರಂಭವಾಯಿತು ಸಂಘರ್ಷ?
ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರೇ ಕೈದಿಗಳಿಗೆ ಮೊಬೈಲ್ ಪೂರೈಕೆ ಮಾಡಿದ್ದಾರೆ ಎಂದು ಆರೋಪಿಸಿ, ಕೈದಿಗಳು ಜೈಲಿನಿಂದ ವಿಡಿಯೋ ಬಿಡುಗಡೆ ಮಾಡಿದ ಪ್ರಕರಣದ ಬೆನ್ನಲ್ಲೇ ಈ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಎಲ್ಲಾ ಬ್ಯಾರಕ್ಗಳಲ್ಲಿ ಶೋಧ ಕಾರ್ಯ ಕೈಗೊಂಡರು. ಈ ವೇಳೆ 10ಕ್ಕೂ ಹೆಚ್ಚು ಮೊಬೈಲ್ ಫೋನ್ಗಳು ಪತ್ತೆಯಾದವು.
ತಪಾಸಣೆಗೆ ಅಡ್ಡಿಯಾಗಿ, ಕೈದಿಗಳು ಗುಂಪುಗೂಡಿ ಜೈಲು ಸಿಬ್ಬಂದಿ ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಲು ಮುಂದಾದರು. ಅವರು ಗದ್ದಲ ಎಬ್ಬಿಸಿ, ಜೈಲಿನ ಭದ್ರತಾ ವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದರು.
ಪೊಲೀಸರಿಂದ ಲಘು ಲಾಠಿ ಪ್ರಹಾರ
ಪರಿಸ್ಥಿತಿ ವಿಕೋಪಕ್ಕೆ ತಿರುಗುವುದನ್ನು ಗಮನಿಸಿದ ಅಧಿಕಾರಿಗಳು ತಕ್ಷಣ ಹೆಚ್ಚಿನ ಪೊಲೀಸ್ ಪಡೆಯನ್ನು ಕರೆಸಿದರು. ಉದ್ವಿಗ್ನ ಸ್ಥಿತಿಯನ್ನು ಹತೋಟಿಗೆ ತರಲು ಮತ್ತು ಕೈದಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಈ ಘಟನೆಯಲ್ಲಿ ಯಾವುದೇ ಕೈದಿ ಅಥವಾ ಸಿಬ್ಬಂದಿಗೆ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಯಾರ ಮೇಲೆ ಆರೋಪ?
ಈ ಹಲ್ಲೆ ಪ್ರಕರಣದಲ್ಲಿ ನಾಲ್ವರು ಕೈದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇನಾಯ್ ಜಾಯ್, ವೋಕು ಆರೆಂಜಿ ಪ್ಯಾಟ್ರಿಕ್ , ಕೋರಿಲ್ ಡೇನಿಯಲ್ , ಥಾಮಸ್ ಈ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.
ಕೆಲವು ದಿನಗಳ ಹಿಂದೆಯೇ, ಕೈದಿಗಳು ಜೈಲಿನೊಳಗಿನಿಂದ ವಿಡಿಯೋಗಳನ್ನು ಹೊರಗೆ ಬಿಡುಗಡೆ ಮಾಡಿದ್ದರು. ಅದರಲ್ಲಿ ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳು ಮತ್ತು ಮೊಬೈಲ್ ಬಳಕೆಯನ್ನು ದಾಖಲಿಸಲಾಗಿತ್ತು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜೈಲು ಇಲಾಖೆ ಸೂಕ್ಷ್ಮ ವಿಚಾರಣೆಗೆ ಆದೇಶಿಸಿತ್ತು.
ಜೈಲಿನಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಕೈದಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಹೆಚ್ಚುವರಿಯಾಗಿ, ಜೈಲಿನ ಎಲ್ಲಾ ವಿಭಾಗಗಳಲ್ಲಿ ಸಿಸಿ ಕ್ಯಾಮೆರಾಗಳ ಪರಿಶೀಲನೆ ಮತ್ತು ಅನಿರೀಕ್ಷಿತ ತಪಾಸಣೆಗಳನ್ನು ಹೆಚ್ಚಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.





