ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್: 6 ಪೊಲೀಸರು ಸಸ್ಪೆಂಡ್

Untitled design 2026 05 24T150151.805

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಸಂಚರಿಸುವ ಮಾರ್ಗದಲ್ಲೇ ಸ್ಫೋಟಕಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ ಆರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಮೇ 10ರಂದು ಪ್ರಧಾನಿ ಮೋದಿ ಅವರು ಬೆಂಗಳೂರಿನ ಹೊರವಲಯದಲ್ಲಿರುವ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಪ್ರಸಿದ್ಧ ಶ್ರೀಶ್ರೀ ರವಿಶಂಕರ್ ಅವರ ಆಶ್ರಮದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಪ್ರಧಾನಿಯವರು ಭಾಗವಹಿಸಿದ್ದರು. ಆದರೆ ಅವರು ತೆರಳಬೇಕಿದ್ದ ಮಾರ್ಗದಲ್ಲಿ ಕಗ್ಗಲಿಪುರ ಬಳಿ ವಡೇರಹಳ್ಳಿ ಗೇಟ್ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು. 

ಪ್ರಧಾನಿಯವರ ಆಗಮನದ ಹಿನ್ನೆಲೆ ಪೊಲೀಸ್ ಇಲಾಖೆ ಭಾರಿ ಭದ್ರತಾ ವ್ಯವಸ್ಥೆ ಮಾಡಿತ್ತು. ಹಲವಾರು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆದರೂ ಕೂಡ ಮಾರ್ಗದಲ್ಲಿ ಜಿಲೆಟಿನ್ ನಂತಹ ಅಪಾಯಕಾರಿ ಸ್ಫೋಟಕಗಳು ಪತ್ತೆಯಾಗಿದ್ದವು.

ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ತಕ್ಷಣ ತನಿಖೆ ಪ್ರಾರಂಭಿಸಿತು. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಯಿತು. ಅಲ್ಲದೆ, ಪ್ರಕರಣದ ಗಂಭೀರತೆಯನ್ನು ಗಮನಿಸಿದ ರಾಷ್ಟ್ರೀಯ ತನಿಖಾ ಸಂಸ್ಥೆಯಾದ ಎನ್ಐಎ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಈ ನಡುವೆಯೇ, ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ಅವರು ಭದ್ರತಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಒಬ್ಬ ಪಿಎಸ್ಐ (ಪೊಲೀಸ್ ಸಬ್ ಇನ್ಸ್ಪೆಕ್ಟರ್), ಒಬ್ಬ ಎಎಸ್ಐ (ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್) ಮತ್ತು ನಾಲ್ವರು ಪೇದೆಗಳು  ಹೀಗೆ ಒಟ್ಟು 6 ಮಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಅಮಾನತಿಗೆ ಒಳಗಾದ ಎಲ್ಲಾ ಪೊಲೀಸ್ ಸಿಬ್ಬಂದಿಗಳನ್ನು ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಹೆಚ್ಚಿನ ಭದ್ರತೆಗಾಗಿ ನಿರ್ದಿಷ್ಟ ಮಾರ್ಗಗಳಲ್ಲಿ ನಿಯೋಜಿಸಲಾಗಿತ್ತು. ವಡೇರಹಳ್ಳಿ ಗೇಟ್ ಪ್ರದೇಶದಲ್ಲಿ ತಪಾಸಣೆ ಮತ್ತು ನಿಗಾವಹಿಸುವ ಕರ್ತವ್ಯವನ್ನು ಅವರಿಗೆ ವಹಿಸಲಾಗಿತ್ತು. ಆದರೆ ಅವರು ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸದೇ ಸ್ಫೋಟಕಗಳು ಆ ಪ್ರದೇಶದಲ್ಲಿರುವುದನ್ನು ಪತ್ತೆ ಮಾಡಲು ವಿಫಲರಾದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಈ ಕರ್ತವ್ಯಲೋಪವು ಪ್ರಧಾನಿಯವರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇತ್ತು ಎಂಬ ಗಂಭೀರ ಕಾರಣದಿಂದಲೇ ಇಷ್ಟೊಂದು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅಮಾನತುಗೊಂಡವರ ವಿರುದ್ಧ ಇಲಾಖಾ ದೂರು ಸಹ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Exit mobile version