ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆದ ಪ್ರಕರಣ: ಕೇಶವರೆಡ್ಡಿ ವಿರುದ್ಧ ದೂರು ದಾಖಲು

Untitled design (7)

ಚಿಕ್ಕಬಳ್ಳಾಪುರ, ಜುಲೈ 1: ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ನಡೆದ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಚಪ್ಪಲಿ ಎಸೆದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಒಕ್ಕಲಿಗ ಸಂಘದ ಜಿಲ್ಲಾಧ್ಯಕ್ಷ ಪಿ.ಎನ್. ಕೇಶವರೆಡ್ಡಿ ಹಾಗೂ ಸಂಸದ ಡಾ. ಕೆ. ಸುಧಾಕರ್ ವಿರುದ್ಧ ದೂರು ದಾಖಲಾಗಿದೆ.

ಯುವ ಬಲಿಜ ಸಂಘದ ಕಾರ್ಯಕರ್ತರು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರಿಗೆ ದೂರು ಸಲ್ಲಿಸಿದ್ದು, ಕಾರ್ಯಕ್ರಮದ ವೇಳೆ ನಡೆದ ಗಲಾಟೆಗೆ ಪಿ.ಎನ್. ಕೇಶವರೆಡ್ಡಿಯೇ ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ.

ದೂರಿನಲ್ಲಿ, ಗಲಬೆ ನಡೆಸಿದ ವ್ಯಕ್ತಿಗಳನ್ನು ಕಾರ್ಯಕ್ರಮದ ಒಳಗೆ ಕರೆಸಿಕೊಂಡಿದ್ದು ಪಿ.ಎನ್. ಕೇಶವರೆಡ್ಡಿಯೇ ಎಂದು ಆರೋಪಿಸಲಾಗಿದೆ. ಈ ಬೆಳವಣಿಗೆಯಿಂದಲೇ ಪರಿಸ್ಥಿತಿ ಉದ್ವಿಗ್ನಗೊಂಡು ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ಚಪ್ಪಲಿ ಎಸೆಯುವ ಘಟನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪಿ.ಎನ್. ಕೇಶವರೆಡ್ಡಿ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿದ್ದು, ಸಂಸದ ಡಾ. ಕೆ. ಸುಧಾಕರ್ ಅವರ ತಂದೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದ ಡಾ. ಕೆ. ಸುಧಾಕರ್ ಅವರ ವಿರುದ್ಧವೂ ಸೂಕ್ತ ತನಿಖೆ ನಡೆಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಗಲಾಟೆಗೆ ಕಾರಣರಾದವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಬಲಿಜ ಯುವಕರ ಬಳಗ ಆಗ್ರಹಿಸಿದೆ.

ಕನ್ನಡ ಭವನದಲ್ಲಿ ನಡೆದ ಈ ಘಟನೆ ಜಿಲ್ಲೆಯಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಈಗಾಗಲೇ ಹಲವು ಸಂಘಟನೆಗಳು ಹಾಗೂ ರಾಜಕೀಯ ಮುಖಂಡರು ಘಟನೆಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪೊಲೀಸ್ ಇಲಾಖೆ ದೂರು ಸ್ವೀಕರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು ಎಂದು ತಿಳಿದುಬಂದಿದೆ.

ಈ ಪ್ರಕರಣದ ತನಿಖೆಯ ನಂತರವೇ ಗಲಾಟೆಯ ಹಿಂದಿನ ನಿಜವಾದ ಕಾರಣ ಹಾಗೂ ಹೊಣೆಗಾರರ ಬಗ್ಗೆ ಸ್ಪಷ್ಟ ಚಿತ್ರಣ ಹೊರಬರುವ ಸಾಧ್ಯತೆ ಇದೆ. ಸದ್ಯ ಪ್ರಕರಣ ಚಿಕ್ಕಬಳ್ಳಾಪುರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Exit mobile version