ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ಜೈಲಿನಲ್ಲಿರುವ ಸಜಾ ಬಂಧಿಗಳಿಗೆ ಪೆರೋಲ್ ಮಂಜೂರು ಮಾಡುವ ಅಧಿಕಾರ ಕಾರಾಗೃಹ ಇಲಾಖೆಗೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚೆನ್ನಮ್ಮ ಪುಣ್ಯ ತಿಥಿ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ತಾತ್ಕಾಲಿಕವಾಗಿ ಹೊರಗೆ ಕರೆತಂದು ಪೂಜೆ ನೆರವೇರಿಸಲು ಅವಕಾಶ ನೀಡುವಂತೆ ಕುಟುಂಬಸ್ಥರು ಪ್ರಯತ್ನಿಸಿದ್ದರು. ಆದರೆ, ಕಾರಾಗೃಹ ಇಲಾಖೆಯು ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಇಂತಹ ಪೆರೋಲ್ ಮಂಜೂರು ಮಾಡಲು ಅವಕಾಶವಿಲ್ಲ ಎಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಸುಮಾರು 15 ದಿನಗಳ ಪೆರೋಲ್ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಜುಲೈ 30ರಂದು ನಡೆಯಲಿರುವ ಪುಣ್ಯತಿಥಿ ಕಾರ್ಯಕ್ರಮಕ್ಕೆ ಹಾಜರಾಗಲು ಅವಕಾಶ ಸಿಗದಿದ್ದರೆ, ನ್ಯಾಯಾಲಯ ಅನುಮತಿ ನೀಡುವ ದಿನಾಂಕದಂತೆ ಸಮಾಧಿಗೆ ತೆರಳಿ ಪೂಜೆ ಸಲ್ಲಿಸುವ ಯೋಜನೆಯನ್ನೂ ಕುಟುಂಬ ರೂಪಿಸಿದೆ ಎಂದು ತಿಳಿದುಬಂದಿದೆ.
ಇದರ ನಡುವೆ, ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಒಳ ಸಂದರ್ಶನ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈಗಾಗಲೇ ಅನುಮತಿ ನೀಡಿದೆ.
ನ್ಯಾಯಾಲಯದ ಆದೇಶದಂತೆ, ಕಾರಾಗೃಹ ನಿಯಮಾವಳಿಗೆ ಅನುಗುಣವಾಗಿ ಜೈಲು ಮುಖ್ಯ ಅಧೀಕ್ಷಕರು ಕುಟುಂಬ ಸದಸ್ಯರು, ಸಂಬಂಧಿಕರು ಹಾಗೂ ಸ್ನೇಹಿತರಿಗೆ ಭೇಟಿ ನೀಡಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ. ಭೇಟಿ ವೇಳೆ ಜೈಲು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.
ಇದೇ ವೇಳೆ, ಯಾವುದೇ ಕಾರಣದಿಂದ ಭೇಟಿ ನೀಡಲು ಅವಕಾಶ ನಿರಾಕರಿಸಿದರೆ, ಅದರ ಸ್ಪಷ್ಟ ಕಾರಣವನ್ನು ಲಿಖಿತ ರೂಪದಲ್ಲಿ ಬಂಧಿತರಿಗೆ ತಿಳಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಈ ಮೂಲಕ ಪೆರೋಲ್ಗೆ ಅವಕಾಶವಿಲ್ಲದಿದ್ದರೂ, ಕಾನೂನುಬದ್ಧವಾಗಿ ಕುಟುಂಬ ಸದಸ್ಯರ ಭೇಟಿಗೆ ಅವಕಾಶ ಕಲ್ಪಿಸುವಂತೆ ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡಿದೆ.
