ಡಿ. 17 ರಂದು ಶಿವರಾತ್ರಿಶ್ವರ ಶಿವಯೋಗಿಗಳ ಜಯಂತ್ಯೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

Untitled design 2025 12 09T104145.744

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸುತ್ತೂರಿನ ಶಿವರಾತ್ರಿ ಶಿವಯೋಗಿಗಳರವರ (Suttur Shivaratri Shivayogi) 1066ನೇ ಜಯಂತಿ ಮಹೋತ್ಸವವನ್ನು ಉದ್ಘಾಟಿಸಲು ಡಿಸೆಂಬರ್ 17 ರಂದು ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಆಗಮಿಸಲಿದ್ದಾರೆ. ರಾಷ್ಟ್ರಪತಿಗಳ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯು ಭದ್ರತೆ ಮತ್ತು ಸಿದ್ಧತೆಗಳ ಕುರಿತು ಅಂತಿಮ ಹಂತದ ಪರಿಶೀಲನೆ ನಡೆಸಿದೆ.

ಮೈಸೂರು ದಕ್ಷಿಣ ವಲಯದ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ. ಕುಮಾರ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಮಳವಳ್ಳಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಅಧಿಕಾರಿಗಳ ತಂಡವು ಮೊದಲು ಮಳವಳ್ಳಿಯ ಹೊರ ಭಾಗದ ಮಾರೇಹಳ್ಳಿ ಬಳಿ ನಿರ್ಮಿಸಲಾಗುತ್ತಿರುವ ತಾತ್ಕಾಲಿಕ ಹೆಲಿಪ್ಯಾಡ್‌ಗೆ ಭೇಟಿ ನೀಡಿತು. ಇಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು

ರಾಷ್ಟ್ರಪತಿಗಳ ಹೆಲಿಕಾಪ್ಟರ್ ಸುರಕ್ಷಿತವಾಗಿ ಇಳಿಯಲು ಮತ್ತು ಹಾರಲು ಅನುವಾಗುವಂತೆ ಸುತ್ತಮುತ್ತಲಿನ ವಿದ್ಯುತ್ ಕಂಬಗಳು ಮತ್ತು ತಂತಿಗಳನ್ನು ತೆರವುಗೊಳಿಸುವ ಬಗ್ಗೆ ಚರ್ಚಿಸಲಾಯಿತು.

ಗಣ್ಯರ ಭೇಟಿ ಹಿನ್ನೆಲೆಯಲ್ಲಿ ವೈದ್ಯಕೀಯ ತುರ್ತು ಸೇವೆಗಳ ಕುರಿತು ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ವಿಶೇಷ ಗಮನ ಹರಿಸಿ, ಪ್ರವಾಸಿ ಮಂದಿರ ಮತ್ತು ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಆಡಳಿತಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ತಾಲೂಕು ಆಸ್ಪತ್ರೆಯಲ್ಲಿ 24 ಗಂಟೆಯೂ ಆರೋಗ್ಯ ಸಿಬ್ಬಂದಿಗಳು ಲಭ್ಯವಿರಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು. ತುರ್ತು ಚಿಕಿತ್ಸೆಗೆ ಬೇಕಾದ ಎಲ್ಲಾ ಅಗತ್ಯ ವೈದ್ಯಕೀಯ ಉಪಕರಣಗಳು ಮತ್ತು ಔಷಧಿಗಳನ್ನು ಸಿದ್ಧವಾಗಿ ಇರಿಸಲು ಡಾ. ಸಂಜಯ್ ಮತ್ತು ತಾಲೂಕು ವೈದ್ಯಾಧಿಕಾರಿ ಡಾ. ವೀರಭದ್ರಪ್ಪ ಅವರಿಗೆ ನಿರ್ದೇಶನ ನೀಡಲಾಯಿತು. ಯಾವುದೇ ರೀತಿಯ ಅಹಿತಕರ ಅಥವಾ ಆರೋಗ್ಯ ಸಂಬಂಧಿ ತುರ್ತು ಪರಿಸ್ಥಿತಿಯನ್ನು ಎದುರಿಸಲು ಆಸ್ಪತ್ರೆಯು ಸನ್ನದ್ಧವಾಗಿರಬೇಕು ಎಂದು ತಿಳಿಸಲಾಯಿತು.

ಸುತ್ತೂರು ಜಯಂತ್ಯೋತ್ಸವವು ಡಿಸೆಂಬರ್ 17 ರಿಂದ 22 ರವರೆಗೆ ನಡೆಯಲಿದ್ದು, ರಾಷ್ಟ್ರಪತಿಗಳ ಜೊತೆಗೆ ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಲವು ಸಚಿವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಈ ಕಾರಣದಿಂದಾಗಿ, ಆಡಳಿತಾಧಿಕಾರಿಗಳು ಸಮಗ್ರ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ ಸಾರ್ವಜನಿಕರ ವಾಹನಗಳ ಸುಗಮ ಪಾರ್ಕಿಂಗ್‌ಗಾಗಿ ಸೂಕ್ತ ಸ್ಥಳಗಳನ್ನು ಗುರುತಿಸಿ ವ್ಯವಸ್ಥೆ ಮಾಡಲು ಸೂಚಿಸಲಾಯಿತು. ಗಣ್ಯ ವ್ಯಕ್ತಿಗಳು ಮತ್ತು ಭದ್ರತಾ ಸಿಬ್ಬಂದಿಯ ವಾಸ್ತವ್ಯಕ್ಕಾಗಿ ತಾಲೂಕು ವ್ಯಾಪ್ತಿಯ ಎಲ್ಲಾ ಲಾಡ್ಜ್‌ಗಳು, ಕಲ್ಯಾಣ ಮಂಟಪಗಳು, ರೆಸಾರ್ಟ್‌ಗಳು ಮತ್ತು ರೂಮುಗಳನ್ನು ಕಾಯ್ದಿರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಯಾವುದೇ ತೊಂದರೆ ಆಗದಂತೆ, ಅನಧಿಕೃತ ಫ್ಲೆಕ್ಸ್ ಬ್ಯಾನರ್‌ಗಳ ಅಳವಡಿಕೆಯನ್ನು ನಿಯಂತ್ರಿಸಿ, ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲು ಪೊಲೀಸ್ ಅಧಿಕಾರಿಗಳಿಗೆ ಸಲಹೆ ನೀಡಿದರು.

ವೇದಿಕೆಯ ಬಳಿಯೂ ಪರಿಶೀಲನೆ ನಡೆಸಿದ ಅಧಿಕಾರಿಗಳು, ವೇದಿಕೆಯ ಅಳತೆ, ಗಣ್ಯರ ಆಗಮನದ ಮುಖ್ಯದ್ವಾರದ ನಿರ್ವಹಣೆ, ಊಟದ ವ್ಯವಸ್ಥೆ, ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಒಟ್ಟಾರೆಯಾಗಿ, ಮಂಡ್ಯ ಜಿಲ್ಲಾಡಳಿತವು ರಾಷ್ಟ್ರಪತಿಗಳ ಐತಿಹಾಸಿಕ ಭೇಟಿಯನ್ನು ಯಶಸ್ವಿಗೊಳಿಸಲು ಬಿಡುವಿಲ್ಲದ ಸಿದ್ಧತೆಗಳಲ್ಲಿ ತೊಡಗಿದೆ.

Exit mobile version