ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೆಗೆದುಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಇಂದು ಪರಿಶೀಲಿಸಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಗೆ ಬರುವ ಜಿಲ್ಲೆಗಳಿಂದ ಸಭೆಗೆ ಬಂದಿದ್ದ ಕೆ.ಆರ್.ಐ.ಡಿ.ಎಲ್ ಇಂಜಿನಿಯರಗಳೊಂದಿಗೆ ಚರ್ಚಿಸಿದ ಸಚಿವರು ಕಾಮಗಾರಿಗಳಲ್ಲಿ ಆಗುತ್ತಿರುವ ವಿಳಂಬ ಹಾಗೂ ಲೋಪಗಳನ್ನು ಗಂಭೀರವಾಗಿ ಪರಿಗಣಿಸಿ ಬೇಸರ ವ್ಯಕ್ತಪಡಿಸಿದರಲ್ಲದೆ ಕೆ.ಆರ್.ಐ.ಡಿ.ಎಲ್ ಎಂಜಿನಿಯರುಗಳು ಎಚ್ಚೆತ್ತುಕೊಳ್ಳದಿದ್ದಲ್ಲಿ ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇಂಜನಿಯರುಗಳು ವೃತ್ತಿಯಲ್ಲಿ ಬದ್ಧತೆ ಇಡಿಸಿಕೊಂಡು ಜವಾಬ್ದಾರಿಗಳನ್ನು ನಿರ್ವಹಿಸದಿದ್ದಲ್ಲಿ ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಚಿವರು ಸೂಚಿಸಿದರು.
ಗ್ರಾಮೀಣ ನೀರು ಸರಬರಾಜು ಇಲಾಖೆ ಮೂಲಕ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರದೇಶದ ವ್ಯಾಪ್ತಿಗೆ ಬರುವ ಜಿಲ್ಲೆಗಳಲ್ಲಿ ಸಾಮೂಹಿಕ ಶೌಚಾಲಯಗಳನ್ನು ನಿರ್ಮಾಣ ಮಾಡುವಲ್ಲಿ ಆಗಿರುವ ವಿಳಂಬದ ಬಗ್ಗೆ ಸಚಿವರು ಪ್ರಸ್ತಾಪ ಮಾಡಿ ಮೇ ಮೊದಲ ವಾರದಲ್ಲಿ ಶೌಚಗೃಹಗಳನ್ನು ನಿರ್ಮಾಣ ಮಾಡಿ ಬಳಕೆಗೆ ಸಿದ್ಧಪಡಿಸದಿದ್ದಲ್ಲಿ ಸಂಬಂಧಿಸಿದ ಇಂಜಿನಿಯರ್ ಗಳನ್ನು ಅಮಾನತ್ತು ಮಾಡಲಾಗುವುದು ಎಂದು ಕಟ್ಟೆಚ್ಚರ ನೀಡಿದರು.
ರಸ್ತೆ ಹಾಗೂ ಕಟ್ಟಡ ನಿರ್ಮಾಣದಲ್ಲಿ ಬದಲಾಗಿರುವ ತಾಂತ್ರಿಕ ನೈಪುಣ್ಯತೆಗಳನ್ನು ಬಳಸಿಕೊಂಡು ಪರಿಸರಸ್ನೇಹಿ ಸಾಮಗ್ರಿಗಳನ್ನು ಬಳಸಿಕೊಳ್ಳುವಲ್ಲಿ ಕೆ.ಆರ್.ಐ.ಡಿ.ಎಲ್ ಚಿಂತಿಸಬೇಕು ಎಂದು ತಿಳಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಅಗತ್ಯಬಿದ್ದಲ್ಲಿ ತಜ್ಞರ ಸಮಿತಿಯನ್ನು ರಚಿಸಿ ಮಾರ್ಗದರ್ಶನ ಪಡೆಯುವಂತೆ ಸೂಚಿಸಿದರು.
ವಿಡಿಯೊ ಸಂವಾದದ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಮೀರ್ ಶುಕ್ಲಾ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ನಳಿನ್ ಅತುಲ್ ಪಾಲ್ಗೊಂಡಿದ್ದರು. ಸಭೆಯಲ್ಲಿ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ ಎಂ.ಬಿ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.
