ರಾಯಚೂರು, ಹಾಸನದಲ್ಲಿ ಆಲಿಕಲ್ಲು ಮಳೆ: ಚಿಕ್ಕಮಗಳೂರಿನಲ್ಲೂ ಮುಂದುವರೆದ ವರುಣನ ಅಬ್ಬರ

Untitled design 2026 03 16T191732.540

ರಾಯಚೂರು: ಹಲವು ದಿನಗಳಿಂದ ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ರಾಯಚೂರು ಜಿಲ್ಲೆಯ ಜನತೆಗೆ ಏಕಾಏಕಿ ಸುರಿದ ಮಳೆ ಬಂದು ತಂಪೆರೆದಿದೆ. ಜಿಲ್ಲೆಯ ಹಲವೆಡೆ ಗುಡುಗು-ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಕೆಲವು ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಆಗಿದೆ.

ಜಿಲ್ಲೆಯ ಹಲವು ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಮಧ್ಯಾಹ್ನ ಸಮಯದಲ್ಲಿ ಆರಂಭವಾದ ಮಳೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮುಂದುವರಿದಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ನೀರಿನಿಂದ ತುಂಬಿ ಹೋಗಿದ್ದವು.

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿ ಆಲಿಕಲ್ಲು ಮಳೆ ದಾಖಲಾಗಿದೆ. ಇಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಆಲಿಕಲ್ಲು ಮಳೆ ಸುರಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಏಕಾಏಕಿ ಸುರಿದ ಮಳೆಯಿಂದ ಸಾರ್ವಜನಿಕರು ಬಸ್ ನಿಲ್ದಾಣಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಗಂಟೆಗಟ್ಟಲೆ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ..

ರಾಯಚೂರು ಜಿಲ್ಲೆಯಲ್ಲಿನ ತೀವ್ರ ಬಿಸಿಲಿನ ನಡುವೆಯೇ ಈ ಮಳೆ ಬಂದಿರುವುದರಿಂದ ಸಾಮಾನ್ಯ ಜನತೆ ಮಾತ್ರ ಸ್ವಲ್ಪ ನೆಮ್ಮದಿ ತಂದಿದೆ. ಕಳೆದ ಕೆಲವು ವಾರಗಳಿಂದ ತಾಪಮಾನ ಹೆಚ್ಚಾಗಿದ್ದು, ಮಧ್ಯಾಹ್ನ ಸಮಯದಲ್ಲಿ ಹೊರಗೆ ಓಡಾಡುವುದು ಕಷ್ಟವಾಗಿತ್ತು. ಈಗ ಸುರಿದ ಮಳೆಯು ತಾತ್ಕಾಲಿಕವಾಗಿ ವಾತಾವರಣ ತಂಪಾಗಿಸಿದೆ.

ಇದರ ಜೊತೆಗೆ ರಾಜ್ಯದ ಇನ್ನೂ ಕೆಲವು ಜಿಲ್ಲೆಗಳಲ್ಲಿಯೂ ಮಳೆಯ ಆರ್ಭಟ ಕಂಡುಬಂದಿದೆ. ಹಾಸನ ಜಿಲ್ಲೆಯಲ್ಲಿಯೂ ಈ ವರ್ಷದ ಮೊದಲ ಭಾರೀ ಮಳೆ ಸುರಿದಿದ್ದು, ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ. ಹಲವೆಡೆ ರಸ್ತೆಗಳ ಮೇಲೆ ಆಲಿಕಲ್ಲುಗಳು ಬಿದ್ದಿರುವುದು ಕಂಡುಬಂದಿದ್ದು, ಕೆಲವು ರಸ್ತೆಗಳು ನೀರಿನಿಂದ ಜಲಾವೃತವಾಗಿವೆ.

ಹಾಸನ ನಗರದಲ್ಲಿ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. ಮಳೆಯ ನೀರು ರಸ್ತೆಗಳಲ್ಲಿ ಹರಿದು ಹೋಗಿದ್ದು, ಜನರು ಆಶ್ರಯಕ್ಕಾಗಿ ಅಂಗಡಿಗಳ ಬಳಿ ನಿಂತುಕೊಂಡಿರುವ ದೃಶ್ಯಗಳು ಕಂಡುಬಂದವು. ಆದರೆ ಬೇಸಿಗೆಯ ತಾಪಕ್ಕೆ ಬೇಸತ್ತಿದ್ದ ಜನರಿಗೆ ಈ ಮಳೆ ಸಂತಸ ತಂದಿದೆ.

ಇದೇ ವೇಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಮಳೆ ಮುಂದುವರಿದಿದೆ. ಕಾಫಿನಾಡು ಎಂದು ಪ್ರಸಿದ್ಧಿ ಪಡೆದಿರುವ ಈ ಭಾಗದಲ್ಲಿ ಎರಡನೇ ದಿನವೂ ವರುಣನ ಅಬ್ಬರ ಕಂಡುಬಂದಿದೆ. ಚಿಕ್ಕಮಗಳೂರು ಹಾಗೂ ಶೃಂಗೇರಿ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಕೆಲವೆಡೆ ಒಂದು ಇಂಚಿಗೂ ಹೆಚ್ಚು ಮಳೆಯಾಗಿದೆ ಎಂದು ತಿಳಿದುಬಂದಿದೆ.

Exit mobile version