ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಪರಾರಿಯಾಗಿದ್ದ ರಾಜೀವ್‌ ಗೌಡ ಅರೆಸ್ಟ್

Untitled design 2026 01 27T075433.460

ಬೆಂಗಳೂರು: ಸರ್ಕಾರಿ ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿ, ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಶಿಡ್ಲಘಟ್ಟದ ಕಾಂಗ್ರೆಸ್‌ ನಾಯಕ ರಾಜೀವ್‌ ಗೌಡನ ಆಟ ಕೊನೆಗೂ ಅಂತ್ಯವಾಗಿದೆ. ಕಳೆದ 13 ದಿನಗಳಿಂದ ತಲೆಮರೆಸಿಕೊಂಡಿದ್ದ ಈತನನ್ನು ಚಿಕ್ಕಬಳ್ಳಾಪುರ ಪೊಲೀಸರು ಕೇರಳದ ಗಡಿ ಭಾಗದಲ್ಲಿ ಯಶಸ್ವಿಯಾಗಿ ಬಂಧಿಸಿದ್ದಾರೆ.

ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ರಾಜೀವ್‌ ಗೌಡ ಅಸಭ್ಯವಾಗಿ ವರ್ತಿಸಿ, ಕೆಲಸಕ್ಕೆ ಅಡ್ಡಿಪಡಿಸಿ, ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಬೆದರಿಕೆಯ ಆಡಿಯೋ ತುಣುಕುಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ರಾಜೀವ್‌ ಗೌಡ ತಲೆಮರೆಸಿಕೊಂಡಿದ್ದನು.

ಪೌರಾಯುಕ್ತೆ ಅಮೃತಾ ಗೌಡ ಮತ್ತು ಜೆಡಿಎಸ್ ತಾಲೂಕು ಅಧ್ಯಕ್ಷ ಶ್ರೀನಿವಾಸಗೌಡ ಅವರು ನೀಡಿದ ಪ್ರತ್ಯೇಕ ದೂರುಗಳ ಆಧಾರದ ಮೇಲೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಅಧಿಕಾರಿಗೆ ಬೆದರಿಕೆ  ಮತ್ತು ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚುವಂತಹ ಗಂಭೀರ ಬೆದರಿಕೆಗಳನ್ನು ರಾಜೀವ್ ಹಾಕಿದ್ದ ಎಂಬ ಆರೋಪ ಕೇಳಿಬಂದಿದೆ.

ಪ್ರಕರಣ ದಾಖಲಾದ ಕೂಡಲೇ ರಾಜೀವ್‌ ಗೌಡ ತನ್ನ ಎರಡೂ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕುಶಾಲ್ ಚೌಕ್ಸಿ ಅವರು ಎರಡು ವಿಶೇಷ ತಂಡಗಳನ್ನು ರಚಿಸಿದ್ದರು. ತಾಂತ್ರಿಕ ಸಾಕ್ಷ್ಯಗಳು ಮತ್ತು ಮೊಬೈಲ್ ಲೊಕೇಶನ್ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಂತಿಮವಾಗಿ ಕೇರಳ-ಕರ್ನಾಟಕ ಗಡಿ ಭಾಗದಲ್ಲಿ ರಾಜೀವ್‌ನನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಮೀನು ಅರ್ಜಿ ವಜಾಗೊಳಿಸಿದ್ದ ಕೋರ್ಟ್‌

ಬಂಧನದಿಂದ ತಪ್ಪಿಸಿಕೊಳ್ಳಲು ರಾಜೀವ್ ಗೌಡ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದನು. ಆದರೆ, ಆಡಿಯೋ ಸಾಕ್ಷ್ಯಗಳು ಮತ್ತು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಲಯವು ಈತನ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ವಜಾಗೊಂಡ ಬೆನ್ನಲ್ಲೇ ಮಾಧ್ಯಮಗಳು ಮತ್ತು ಸಾರ್ವಜನಿಕರು ಸರ್ಕಾರದ ಮೇಲೆ ಒತ್ತಡ ಹೇರಿದ್ದರು.

ದಾಖಲಾದ ಪ್ರಕರಣಗಳು (BNS/IPC ಸೆಕ್ಷನ್‌ಗಳು):

ರಾಜೀವ್ ಗೌಡ ವಿರುದ್ಧ ಅತ್ಯಂತ ಗಂಭೀರವಾದ ಕಲಂ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ:

ಬಂಧಿತ ಆರೋಪಿಯನ್ನು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ. ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆ ನೀಡುವುದು ಮತ್ತು ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಈ ಬಂಧನದ ಮೂಲಕ ಸಾಬೀತಾಗಿದೆ.

Exit mobile version