ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕ್ತಿರೋ ಶಾಸಕಿ ಕರೆಮ್ಮಗೆ ದಂಧೆಕೋರರಿಂದ ಬೆದರಿಕೆ

Untitled design 2026 01 20T120532.271

ರಾಯಚೂರು: ಕೃಷ್ಣಾ ನದಿ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕಿ ಕರೆಮ್ಮ ನಾಯಕ್ ಅವರಿಗೆ ದಂಧೆಕೋರರಿಂದ ಜೀವ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪ ಬೆಳಕಿಗೆ ಬಂದಿದೆ. ಅಕ್ರಮ ಮರಳು ಸಾಗಾಟದ ವಿರುದ್ಧ ಕ್ರಮ ಕೈಗೊಳ್ಳದಂತೆ ಒತ್ತಡ ಹೇರಲು ದಂಧೆಕೋರರು ಶಾಸಕಿ ನಿವಾಸಕ್ಕೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.

ಈ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದ್ದು, ಇತ್ತೀಚಿನ ದಿನಗಳಲ್ಲಿ ಪೊಲೀಸ್ ಇಲಾಖೆ ಅಕ್ರಮ ಮರಳು ದಂಧೆ ವಿರುದ್ಧ ಕೈಗೊಂಡ ಕಠಿಣ ಕ್ರಮವೇ ಈ ಬೆಳವಣಿಗೆಗೆ ಕಾರಣ ಎನ್ನಲಾಗಿದೆ. ಜ.18ರಂದು ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಿಸಿದಂತೆ ಏಳು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಜೆಸಿಬಿ, ಟಿಪ್ಪರ್ ಹಾಗೂ ಟ್ರಾಕ್ಟರ್‌ಗಳು ಸೇರಿದಂತೆ ಒಟ್ಟು ಏಳು ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಪೊಲೀಸರ ಈ ದಾಳಿಯಿಂದ ಅಕ್ರಮ ಮರಳು ದಂಧೆ ನಡೆಸುತ್ತಿದ್ದವರಲ್ಲಿ ಆತಂಕ ಮೂಡಿದ್ದು, ಅದೇ ಕೋಪವನ್ನು ಶಾಸಕಿ ಕರೆಮ್ಮ ನಾಯಕ್ ಅವರ ಮೇಲೆ ತೋರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಕ್ರಮ ಮರಳು ದಂಧೆ ವಿರುದ್ಧ ಧ್ವನಿ ಎತ್ತುತ್ತಿರುವುದಕ್ಕೆ ಅಸಮಾಧಾನಗೊಂಡ ದಂಧೆಕೋರರು, ಶಾಸಕಿ ಮನೆಗೆ ನುಗ್ಗಿ ‘ನೀವು ಮೌನವಾಗಿರಿ, ಇಲ್ಲವಾದರೆ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಶಾಸಕಿ ಕರೆಮ್ಮ ನಾಯಕ್ ಅವರು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗುಗಿರಿಗೆ ಲಿಖಿತ ದೂರು ಸಲ್ಲಿಸಿದ್ದು, ತಮ್ಮ ಹಾಗೂ ಕುಟುಂಬದ ಭದ್ರತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅಕ್ರಮ ಮರಳು ದಂಧೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕಿ ಕರೆಮ್ಮ ನಾಯಕ್, “ಕೃಷ್ಣಾ ನದಿ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿರಂತರವಾಗಿ ನಡೆಯುತ್ತಿರುವ ಬಗ್ಗೆ ನನಗೆ ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಕ್ರಮ ಮರಳು ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಜಿಲ್ಲಾಧಿಕಾರಿಗಳ ಸಭೆಯಲ್ಲಿಯೂ ಈ ವಿಷಯವನ್ನು ಗಂಭೀರವಾಗಿ ಪ್ರಸ್ತಾಪಿಸಿದ್ದೇನೆ” ಎಂದು ತಿಳಿಸಿದ್ದಾರೆ.

“ಪೊಲೀಸರು ಕ್ರಮ ಕೈಗೊಂಡಿರುವುದಕ್ಕೆ ಅಕ್ರಮ ದಂಧೆಕೋರರು ಅಸಮಾಧಾನಗೊಂಡಿದ್ದಾರೆ. ಅದೇ ಕಾರಣಕ್ಕೆ ನನ್ನ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ. ಆದರೆ ನಾನು ಯಾವುದೇ ಬೆದರಿಕೆಗೆ ಹೆದರದೇ ಅಕ್ರಮ ಮರಳು ದಂಧೆ ವಿರುದ್ಧ ಹೋರಾಟ ಮುಂದುವರಿಸುತ್ತೇನೆ” ಎಂದು ಶಾಸಕಿ ಸ್ಪಷ್ಟಪಡಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಶಾಸಕಿ ಬೆಂಬಲಿಗ ಹನುಮಂತರಾಯ ಅವರು ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಸುಮಾರು 60ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆ ಆರಂಭವಾಗಿದ್ದು, ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.

Exit mobile version