ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಅರಸಾಳು ಸೂಡೂರು ಬಳಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ನಿಟ್ಟೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಬೆಂಕಿಗಾಹುತಿಯಾಗಿದ್ದು, ಬಸ್ನಲ್ಲಿದ್ದ 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ವಿವರ:
ನಿಟ್ಟೂರಿನಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊರಟಿದ್ದ ‘ಅನ್ನಪೂರ್ಣೇಶ್ವರಿ’ ಹೆಸರಿನ ಖಾಸಗಿ ಸ್ಲೀಪರ್ ಕೋಚ್ ಬಸ್, ಅರಸಾಳು ಸೂಡೂರು ಎಂಬಲ್ಲಿ ಚಲಿಸುತ್ತಿದ್ದಾಗ ಏಕಾಏಕಿ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಬಸ್ಗೆ ವ್ಯಾಪಿಸಲು ಆರಂಭಿಸಿದೆ. ಈ ಸಂದರ್ಭದಲ್ಲಿ ಬಸ್ನಲ್ಲಿದ್ದ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು ಎನ್ನಲಾಗಿದೆ.
ಚಾಲಕನ ಸಮಯಪ್ರಜ್ಞೆ:
ಬಸ್ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಚಾಲಕ, ಕೂಡಲೇ ಬಸ್ ಅನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ತಕ್ಷಣವೇ ಬಸ್ನ ಮುಖ್ಯ ದ್ವಾರ ಮತ್ತು ತುರ್ತು ನಿರ್ಗಮನ ಬಾಗಿಲುಗಳನ್ನು (Emergency Exit) ತೆರೆದ ಚಾಲಕ ಮತ್ತು ನಿರ್ವಾಹಕ, ಕಿರುಚಾಡುತ್ತಾ ಪ್ರಯಾಣಿಕರನ್ನು ಎಚ್ಚರಿಸಿದ್ದಾರೆ. ಇದರ ಅರಿವಾಗುತ್ತಿದ್ದಂತೆ ಪ್ರಯಾಣಿಕರು ಬಸ್ನಿಂದ ಹೊರಹೋಗಿದ್ದಾರೆ.
ಇದೇ ವೇಳೆ, ಬೆಂಕಿ ಅತ್ಯಂತ ವೇಗವಾಗಿ ಹರಡಿದ ಕಾರಣ ಹೆಚ್ಚಿನ ಪ್ರಯಾಣಿಕರಿಗೆ ತಮ್ಮ ಲಗೇಜ್ಗಳನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ. ಬಸ್ನ ಡಿಕ್ಕಿಯಲ್ಲಿದ್ದ ಬಟ್ಟೆ, ಬೆಲೆಬಾಳುವ ವಸ್ತುಗಳು ಮತ್ತು ದಾಖಲೆಗಳು ಬೆಂಕಿಯಲ್ಲಿ ಸುಟ್ಟುಹೋಗಿವೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ ಆದರೆ ಅಷ್ಟರಲ್ಲೇ ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಈ ದುರಂತದಲ್ಲಿ ಬಸ್ ಚಾಲಕ ಸೇರಿದಂತೆ ಒಟ್ಟು 4 ರಿಂದ 5 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಸ್ಥಳಕ್ಕೆ ರಿಪ್ಪನ್ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ಈ ಅಗ್ನಿ ಅವಘಡಕ್ಕೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.





