4,500 ಕೋಟಿ ವಂಚನೆ ಕೇಸ್‌: ಶಿವಂ ಅಸೋಸಿಯೇಟ್ಸ್‌ ಮಾಲೀಕ ಶಿವಾನಂದ ನೀಲಣ್ಣವರ್‌ ಅರೆಸ್ಟ್‌

ಬೆಳಗಾವಿ: ಬೆಳಗಾವಿಯಲ್ಲಿ ಭಾರೀ ಹಣಕಾಸು ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಶಿವಂ ಅಸೋಸಿಯೇಟ್ಸ್ (Shivam Associates) 4,500 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವು ಸಹಕಾರ ಇಲಾಖೆ ಮತ್ತು ಜಿಲ್ಲಾಡಳಿತದ ದಾಳಿಯ ಬಳಿಕ ಬೆಳಕಿಗೆ ಬಂದಿದೆ. 

ಹೆಚ್ಚಿನ ಬಡ್ಡಿ ನೀಡುವುದಾಗಿ ಭರವಸೆ ನೀಡಿ ಸಾರ್ವಜನಿಕರಿಂದ ಹಾಗೂ ಮಾಜಿ ಸೈನಿಕರು ಸೇರಿದಂತೆ ಹಲವಾರು ಹೂಡಿಕೆದಾರರಿಂದ ಸಂಸ್ಥೆ ದೊಡ್ಡ ಪ್ರಮಾಣದಲ್ಲಿ ಹಣ ಸಂಗ್ರಹಿಸಿದೆ ಎಂದು ಆರೋಪಿಸಲಾಗಿದೆ. ಆದರೆ ಹೂಡಿಕೆಯ ಹಣವನ್ನು ಉದ್ದೇಶಿತ ಯೋಜನೆಗಳಿಗೆ ಬಳಸದೆ ದುರುಪಯೋಗ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಗುರುವಾರ ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ್ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ಶಿವಂ ಅಸೋಸಿಯೇಟ್ಸ್‌ ಕಚೇರಿ ಮತ್ತು ಮಾಲೀಕರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಸುಮಾರು 8 ಗಂಟೆಗಳ ಕಾಲ ದಾಖಲೆಗಳ ಪರಿಶೀಲನೆ ನಡೆಸಲಾಗಿದ್ದು, ಹಲವು ಪ್ರಮುಖ ಹಣಕಾಸು ದಾಖಲೆಗಳು ಹಾಗೂ ವ್ಯವಹಾರ ವಿವರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ತನಿಖೆಯ ವೇಳೆ ಸುಮಾರು 400 ಕೋಟಿ ರೂಪಾಯಿ ಮೌಲ್ಯದ ಬಾಂಡ್ ಪೇಪರ್‌ಗಳು ಪತ್ತೆಯಾಗಿವೆ. ಜೊತೆಗೆ ಸ್ಟಾಕ್ ಮಾರುಕಟ್ಟೆ, ರಿಯಲ್ ಎಸ್ಟೇಟ್ ಮತ್ತು ರೆಸಾರ್ಟ್ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿರುವ ಮಾಹಿತಿ ಹೊರಬಂದಿದೆ. ಕೆಲವು ಹಣಕಾಸು ವ್ಯವಹಾರಗಳು ಆನ್‌ಲೈನ್ ಮೂಲಕ ನಡೆದಿರುವುದು ಕೂಡ ದಾಖಲೆಗಳಿಂದ ತಿಳಿದುಬಂದಿದೆ.

ಆರಂಭಿಕ ತನಿಖೆಯಲ್ಲಿ ಸಂಸ್ಥೆಯು ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿರುವ ಸಾಧ್ಯತೆ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಇನ್ನೂ ಠೇವಣಿದಾರರಿಂದ ಅಧಿಕೃತವಾಗಿ ಯಾವುದೇ ದೊಡ್ಡ ಪ್ರಮಾಣದ ದೂರುಗಳು ದಾಖಲಾಗಿಲ್ಲ ಎಂಬುದೂ ಸ್ಪಷ್ಟವಾಗಿದೆ. ಕೆಲವು ಹೂಡಿಕೆದಾರರು ಮಾತ್ರ ಮೌಖಿಕವಾಗಿ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಮಧ್ಯೆ, ಮುಂದಿನ ಅನಾಹುತವನ್ನು ತಡೆಯುವ ನಿಟ್ಟಿನಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ನಾಲ್ಕು ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ ಮತ್ತು ಹಣಕಾಸು ವಾಹಿವಾಟುಗಳ ಮೇಲೆ ನಿಗಾ ವಹಿಸಲಾಗಿದೆ.

ಅಧಿಕೃತ ಅಂದಾಜು ಪ್ರಕಾರ, ಸುಮಾರು 45,000 ಜನರು ಶಿವಂ ಅಸೋಸಿಯೇಟ್ಸ್‌ನಲ್ಲಿ ಹಣ ಹೂಡಿಕೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಪ್ರಕರಣದ ವ್ಯಾಪ್ತಿ ಇನ್ನಷ್ಟು ದೊಡ್ಡದಾಗಿರುವ ಶಂಕೆ ವ್ಯಕ್ತವಾಗಿದೆ. ಮಹಾರಾಷ್ಟ್ರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳ ಜನರು ಕೂಡ ಈ ಸಂಸ್ಥೆಯಲ್ಲಿ ಹೂಡಿಕೆ ಮಾಡಿರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಶಿವಂ ಅಸೋಸಿಯೇಟ್ಸ್‌ ಸಂಸ್ಥೆಯು ರಿಯಲ್ ಎಸ್ಟೇಟ್, ಬಾಂಡ್ ಹೂಡಿಕೆ ಹಾಗೂ ಇತರ ಹಣಕಾಸು ಯೋಜನೆಗಳ ಹೆಸರಿನಲ್ಲಿ ಜನರಿಂದ ಹಣ ಸಂಗ್ರಹಿಸುತ್ತಿತ್ತು ಎಂದು ಆರೋಪಿಸಲಾಗಿದೆ. ಆದರೆ ಹೂಡಿಕೆದಾರರಿಗೆ ನೀಡಬೇಕಿದ್ದ ಲಾಭ ಮತ್ತು ಮೂಲ ಹಣದ ನಿರ್ವಹಣೆಯಲ್ಲಿ ಅಸಮರ್ಪಕತೆ ಕಂಡುಬಂದಿದೆ ಎಂದು ತನಿಖಾ ಅಧಿಕಾರಿಗಳು ತಿಳಿಸಿದ್ದಾರೆ.

ಈಗ ಶಿವಾನಂದ ನೀಲಣ್ಣವರ್ ಅವರನ್ನು ಬಂಧಿಸಿ ಬೆಳಗಾವಿಯ ಮಾಳ ಮಾರುತಿ ಠಾಣೆಗೆ ಕರೆದೊಯ್ಯಲಾಗಿದೆ. ಮುಂದಿನ ತನಿಖೆಗಾಗಿ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತದ ಪ್ರಕಾರ, ಈ ಪ್ರಕರಣದ ಸಂಪೂರ್ಣ ವಿವರಗಳನ್ನು ನಾಳೆ ಅಧಿಕೃತವಾಗಿ ಬಹಿರಂಗಪಡಿಸಲಾಗುವುದು. ಹೂಡಿಕೆದಾರರ ಹಿತಾಸಕ್ತಿಯನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

https://youtu.be/4sqkANz6LZ0?si=4974RgJVYPc2njTC

Exit mobile version