ಸಿದ್ದರಾಮಯ್ಯಗೆ ಹೊಸ ಹುದ್ದೆ ನೀಡಿದ ಹೈಕಮಾಂಡ್‌: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕ

Untitled design 2026 06 02T231308.390

ದೆಹಲಿ (ಜೂನ್ 02): ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಹೊಸ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಚರ್ಚೆಗಳು ತಾರಕಕ್ಕೇರಿರುವ ನಡುವೆಯೇ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (Congress Working Committee – CWC) ಸದಸ್ಯರಾಗಿ ನೇಮಕ ಮಾಡಲಾಗಿದೆ.

ಸಿದ್ದರಾಮಯ್ಯಗೆ ಹೊಸ ಜವಾಬ್ದಾರಿ
ಸಿಎಂ ಸ್ಥಾನ ತ್ಯಜಿಸಿದ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಈ ಮೂಲಕ ಮಹತ್ವದ ಗೌರವ ನೀಡಿದೆ. ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರನ್ನು CWC ಸದಸ್ಯರಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿರುವ ಸಿದ್ದರಾಮಯ್ಯ ಅವರಿಗೆ ಈಗ ರಾಷ್ಟ್ರೀಯ ಮಟ್ಟದಲ್ಲಿ ಹೊಸ ಜವಾಬ್ದಾರಿ ಸಂದಿದೆ.

ಕೋರ್ ಕಮಿಟಿ ಕನಸು ಕಂಡಿದ್ದ ಸಿದ್ದರಾಮಯ್ಯ
ಅಧಿಕಾರ ಹಂಚಿಕೆ ಕುರಿತು ಕಾಂಗ್ರೆಸ್ ವಲಯದಲ್ಲೇ ಕಳೆದ ಎರಡು ವರ್ಷದಿಂದ ಭಾರಿ ಚರ್ಚೆಯಾಗುತ್ತಿತ್ತು. ಕೊನೆಗೆ ಸರ್ಕಾರಕ್ಕೆ ಮೂರು ವರ್ಷ ಪೂರೈಸಿದ ಬಳಿಕ ಸ್ವತಃ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಬಳಿಕ ನಡೆದ ಚರ್ಚೆಯಲ್ಲಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಮುಂದೆ ಮಹತ್ವದ ಬೇಡಿಕೆಯೊಂದನ್ನು ಮುಂದಿಟ್ಟಿದ್ದರು. ರಾಜ್ಯದಲ್ಲಿ ಕೋರ್ ಕಮಿಟಿ ರಚನೆ ಮತ್ತು ಅದರ ನೇತೃತ್ವ ವಹಿಸಿಕೊಳ್ಳಬೇಕೆಂಬುದೇ ಅವರ ಬೇಡಿಕೆಯಾಗಿತ್ತು. ಆದರೆ ಹೈಕಮಾಂಡ್ ರಾಜ್ಯದಲ್ಲಿ ಕೋರ್ ಕಮಿಟಿ ರಚನೆಯ ಬಗ್ಗೆ ನಿರಾಸಕ್ತಿ ತೋರಿಸಿದೆ. ಬದಲಿಗೆ, ಸಿದ್ದರಾಮಯ್ಯ ಅವರಿಗೆ ಸಿ.ಡಬ್ಲ್ಯೂ.ಸಿ ಸದಸ್ಯತ್ವದ ರಾಷ್ಟ್ರೀಯ ಜವಾಬ್ದಾರಿಯನ್ನು ನೀಡಲಾಗಿದೆ.

ಸಂಪುಟ ಸೇರ್ಪಡೆ ಚರ್ಚೆ ಅಂತಿಮ
ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಸತತ ಸಭೆ ನಡೆಸಿದ್ದಾರೆ. ಸಂಪುಟ ಸೇರ್ಪಡೆ ಕುರಿತು ಉಭಯ ನಾಯಕರು ತಮ್ಮದೇ ಆದ ಪಟ್ಟಿಯನ್ನು ನೀಡಿದ್ದರು. ಹಲವು ಸುತ್ತಿನ ಮಾತುಕತೆ ನಡೆದ ಬಳಿಕ, 14 ಸಚಿವರು ಡಿ.ಕೆ. ಶಿವಕುಮಾರ್ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ.

CWC ಸದಸ್ಯತ್ವದ ಮಹತ್ವ
ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಪಕ್ಷದ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಸಂಸ್ಥೆಯಾಗಿದೆ. ಪಕ್ಷದ ಪ್ರಮುಖ ನೀತಿಗಳು, ತಂತ್ರಗಳು, ಚುನಾವಣಾ ವಿಷಯಗಳು ಇಲ್ಲಿಯೇ ನಿರ್ಧಾರವಾಗುತ್ತವೆ. ಸಿದ್ದರಾಮಯ್ಯ ಅವರು CWC ಸದಸ್ಯರಾಗುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್‌ನ ಪ್ರಮುಖ ನಾಯಕರ ಸಾಲಿಗೆ ಸೇರ್ಪಡೆಯಾಗಿದ್ದಾರೆ. ಕರ್ನಾಟಕದಿಂದ ಸಿ.ಡಬ್ಲ್ಯೂ.ಸಿ ಸದಸ್ಯರಾಗಿ ಅವರು ನೇಮಕಗೊಂಡಿರುವುದು ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಮ್ಮೆಯ ವಿಚಾರವಾಗಿದೆ.

 ಡಿಕೆಶಿ ಸಂಪುಟಕ್ಕೆ ಗ್ರೀನ್ ಸಿಗ್ನಲ್
ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ CWC ಸದಸ್ಯತ್ವ ನೀಡುವ ಮೂಲಕ ಒಂದೆಡೆ ಅವರನ್ನು ಗೌರವಿಸಿದೆ. ಮತ್ತೊಂದೆಡೆ, ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸಂಪುಟ ರಚನೆಗೂ ಅನುಮೋದನೆ ನೀಡಿದೆ. 14 ಸಚಿವರೊಂದಿಗೆ ನಾಳೆ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದು, ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್‌ನ ಅಂತಿಮ ಸೂಚನೆಗಳನ್ನು ಎರಡೂ ನಾಯಕರು ಸ್ವೀಕರಿಸಿ ಬೆಂಗಳೂರಿಗೆ ಮರಳಿದ್ದಾರೆ.

Exit mobile version