“ನನಗೆ ಕನ್ನಡ ಬರಿ ಭಾಷೆಯಲ್ಲ, ಬದುಕು”: ಉರ್ದು ವಿವಾದಕ್ಕೆ ದಾಖಲೆಗಳ ಮೂಲಕ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

Untitled design 2026 02 26T183553.144

ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯು ಉರ್ದು ಭಾಷೆಯಲ್ಲಿ ನೀಡಿದ ಜಾಹೀರಾತು ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಈ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದ ಬೆನ್ನಲ್ಲೇ, ಗುರುವಾರ ಮೌನ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿಗೆ ತೀಕ್ಷ್ಣವಾಗಿ ಉತ್ತರಿಸಿದ್ದಾರೆ.

ಸರ್ಕಾರದ ಯೋಜನೆಯೊಂದರ ಮಾಹಿತಿಯನ್ನು ಉರ್ದು ಪತ್ರಿಕೆಯಲ್ಲಿ ಉರ್ದು ಭಾಷೆಯಲ್ಲೇ ಪ್ರಕಟಿಸಿದ್ದನ್ನು ವಿರೋಧಿಸಿ ಬಿಜೆಪಿ ನಾಯಕರು ಆಡುತ್ತಿರುವ ಮಾತುಗಳನ್ನು ಸಿಎಂ ಲೇವಡಿ ಮಾಡಿದ್ದು, ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತು ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಇದು ಅವರ ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವುದೇ ಜಾಹೀರಾತಿನ ಮೂಲ ಉದ್ದೇಶ. ಯಾವ ಭಾಷೆಯ ಪತ್ರಿಕೆಯ ಓದುಗರು ಹೆಚ್ಚಿರುತ್ತಾರೋ, ಅವರಿಗೆ ಆಯಾ ಭಾಷೆಯಲ್ಲೇ ಮಾಹಿತಿ ನೀಡಿದರೆ ಅದು ಸುಲಭವಾಗಿ ಅರ್ಥವಾಗುತ್ತದೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ. ಇದರಿಂದ ಸರ್ಕಾರದ ಉದ್ದೇಶ ಈಡೇರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಕನ್ನಡ ಪ್ರೇಮದ ಬಗ್ಗೆ ಪ್ರಶ್ನಿಸುವವರಿಗೆ ಉತ್ತರ ನೀಡಿರುವ ಸಿಎಂ, ನೆಲ, ಜಲ ಮತ್ತು ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಕಲಿಯುವ ದರಿದ್ರ ಸ್ಥಿತಿ ನಮಗೆ ಬಂದಿಲ್ಲ. ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ರಾಜಕೀಯ ಜೀವನ ಆರಂಭಿಸಿದವನು ನಾನು. ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಚಾರದಲ್ಲಿ ನಾನು ಯಾವಾಗಲೂ ಮೊದಲ ಸಾಲಿನಲ್ಲಿ ಇರುತ್ತೇನೆ. ನನಗೆ ಕನ್ನಡ ಬರಿ ಭಾಷೆಯಲ್ಲ, ಅದು ನನ್ನ ಬದುಕು ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ಈ ಮೂಲಕ ಉರ್ದು ಜಾಹೀರಾತು ವಿವಾದಕ್ಕೆ ರಾಜಕೀಯ ಬಣ್ಣ ಬಳಿಯುತ್ತಿರುವವರಿಗೆ ಸಿದ್ದರಾಮಯ್ಯ ಅವರು ಅಂಕಿ-ಅಂಶ ಮತ್ತು ಹಳೆಯ ದಾಖಲೆಗಳ ಮೂಲಕ ತಕ್ಕ ಉತ್ತರ ನೀಡಿದ್ದಾರೆ.

Exit mobile version