ನವದೆಹಲಿ: ಕಾಲ್ತುಳಿತ ಆಗಿರುವುದು ವಿಧಾನಸೌಧದ ಮುಂದೆ ಅಲ್ಲ, ಅದಕ್ಕೂ ತಮಗೂ ಸಂಬಂಧವಿಲ್ಲ ಎನ್ನುವಂತೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಖಾರವಾಗಿ ಪೋಸ್ಟ್ ಮಾಡಿರುವ ಅವರು; ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಎಂದಿರುವ ಸಿಎಂ ಹೇಳಿಕೆಯನ್ನು ಸಿಎಂ ಖಂಡಿಸಿದ್ದಾರೆ.
ಸನ್ಮಾನ್ಯ ಸಿದ್ದರಾಮಯ್ಯನವರೇ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ದಯವಿಟ್ಟು ಹೇಳುವಿರಾ? ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಅವರನ್ನು ‘ಮೆಟ್ಟಿಲು ಮುಖ್ಯಮಂತ್ರಿ’ ಎಂದು ಕೇಂದ್ರ ಸಚಿವರು ಟೀಕಿಸಿದ್ದಾರೆ.