ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

99

ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ವ್ಯಕ್ತವಾಗಿರುವ ಅಸಮಾಧಾನದ ಬಗ್ಗೆ ಸಿದ್ದರಾಮಯ್ಯ ಅವರಿಗೆ ಯಾವುದೇ ಬೇಸರ ಅಥವಾ ಅಸಮಾಧಾನ ಇಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೀದರ್‌ನಲ್ಲಿ ಮಾತನಾಡಿದ ಅವರು, ಯಾವುದೇ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾದಾಗ ಎಲ್ಲ ಸಚಿವಾಕಾಂಕ್ಷಿಗಳಿಗೂ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಅವಕಾಶ ವಂಚಿತರಾದವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುವುದು ಸಹಜ ಪ್ರಕ್ರಿಯೆ ಎಂದು ಹೇಳಿದರು.

ಸಚಿವ ಸಂಪುಟದ ಅಂತಿಮ ತೀರ್ಮಾನವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಆ ತೀರ್ಮಾನವನ್ನು ಎಲ್ಲರೂ ಗೌರವಿಸಿ ಒಪ್ಪಿಕೊಳ್ಳಬೇಕಾಗುತ್ತದೆ ಎಂದು ಯತೀಂದ್ರ ಹೇಳಿದರು. ಸಚಿವ ಸಂಪುಟ ರಚನೆಯಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಹಿರಿಯರು, ಕಿರಿಯರು, ಅನುಭವಿಗಳು ಹಾಗೂ ಹೊಸ ಮುಖಗಳಿಗೆ ಸಮಾನ ಅವಕಾಶ ಕಲ್ಪಿಸುವ ಪ್ರಯತ್ನ ಮಾಡಲಾಗುತ್ತದೆ. ಆದರೆ ಸಚಿವ ಸ್ಥಾನಗಳ ಸಂಖ್ಯೆ ಸೀಮಿತವಾಗಿರುವುದರಿಂದ ಕೆಲವರನ್ನು ಕೈಬಿಡುವುದು ಅನಿವಾರ್ಯವಾಗುತ್ತದೆ. ಇದರಿಂದ ಕೆಲ ಮಟ್ಟಿನ ಅಸಮಾಧಾನ ಉಂಟಾಗುವುದು ಸಹಜ ಎಂದರು.

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಹಿಳೆಯರಿಗೂ ಸಚಿವ ಸ್ಥಾನ ನೀಡುವ ಉದ್ದೇಶ ಸರ್ಕಾರಕ್ಕಿದೆ. ಕೊನೆಯ ಕ್ಷಣದಲ್ಲಿ ಒಂದು ಸಚಿವ ಸ್ಥಾನವನ್ನು ಖಾಲಿ ಇರಿಸಲಾಗಿದ್ದು, ಆ ಸ್ಥಾನವನ್ನು ಮಹಿಳಾ ಪ್ರತಿನಿಧಿಗೆ ನೀಡುವ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಮಹಿಳಾ ನಾಯಕಿಯರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

ಗಾಯತ್ರಿ ಶಾಂತೇಗೌಡ ಅವರ ಅಸಮಾಧಾನದ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ, ಅವರು ಯಾವುದೇ ರೀತಿಯ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು. ತಮ್ಮ ಹೆಸರು ಕೊನೆಯ ಕ್ಷಣದಲ್ಲಿ ಪಟ್ಟಿಯಿಂದ ಯಾಕೆ ಕೈಬಿಡಲಾಯಿತು ಎಂಬುದು ತಿಳಿದಿಲ್ಲ ಎಂದು ಮಾತ್ರ ಅವರು ಹೇಳಿದ್ದು, ಅದನ್ನು ಬೇರೆ ರೀತಿಯಲ್ಲಿ ಅರ್ಥೈಸುವ ಅಗತ್ಯವಿಲ್ಲ ಎಂದರು.

 ರಾಜ್ಯದಲ್ಲಿ ಒಟ್ಟು 34 ಸಚಿವ ಸ್ಥಾನಗಳ ಮಿತಿಯಿರುವುದರಿಂದ ಪ್ರಾದೇಶಿಕ ಸಮತೋಲನ, ಜಾತಿ ಸಮೀಕರಣ, ಅನುಭವ ಹಾಗೂ ಹೊಸಬರಿಗೆ ಅವಕಾಶ ನೀಡುವ ಎಲ್ಲ ಅಂಶಗಳನ್ನು ಪರಿಗಣಿಸಿ ಸಚಿವ ಸಂಪುಟ ರಚನೆ ಮಾಡಬೇಕಾಗುತ್ತದೆ. ಯಾವುದೇ ಸರ್ಕಾರವು ಶೇ.100ರಷ್ಟು ಪ್ರತಿನಿಧಿತ್ವವನ್ನು ಎಲ್ಲ ವರ್ಗಗಳಿಗೂ ನೀಡಲು ಸಾಧ್ಯವಿಲ್ಲ. ಕೆಲವರನ್ನು ಕೈಬಿಡುವುದು ಅನಿವಾರ್ಯವಾಗುತ್ತದೆ ಎಂದರು.

ಇದೇ ವೇಳೆ, ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಹೊಂದಿದರೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ರೀತಿಯ ಹೊಡೆತ ಬೀಳುವುದಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಒಂದು ಸಂಘಟಿತ ಪಕ್ಷವಾಗಿದ್ದು, ವೈಯಕ್ತಿಕ ನಾಯಕರಿಗಿಂತ ಪಕ್ಷದ ತತ್ವ, ಸಂಘಟನೆ ಮತ್ತು ಕಾರ್ಯಕರ್ತರ ಶಕ್ತಿಯೇ ದೊಡ್ಡದು. ಪಕ್ಷದ ಬೆಳವಣಿಗೆ ನಿರಂತರವಾಗಿ ಮುಂದುವರಿಯಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Exit mobile version