ಮೈಸೂರು: “ನನ್ನ ರಾಜಕೀಯ ಜೀವನ ಬಹುತೇಕ ಮುಗಿದಿದೆ. ಆದರೆ ನಿಮ್ಮ ರಾಜಕೀಯ ಭವಿಷ್ಯ ಸುರಕ್ಷಿತವಾಗಿರಬೇಕಾದರೆ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಒಂದು ತಿಂಗಳು ನಿರ್ಲಕ್ಷ್ಯ ಮಾಡಿದರೂ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು, ಶಾಸಕರು ಮತ್ತು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದರು.
ಮೈಸೂರಿನಲ್ಲಿ ನಡೆದ Special Intensive Revision (SIR) ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗ ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಅಪಾಯದಲ್ಲಿವೆ ಎಂದು ಅವರು ಟೀಕಿಸಿದರು.
ಬಿಜೆಪಿ ದೇಶದಲ್ಲಿ ಸರ್ವಾಧಿಕಾರ ಸ್ಥಾಪಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, “ಸುಳ್ಳನ್ನು ವ್ಯವಸ್ಥಿತವಾಗಿ ಹರಡುವ ಸುಳ್ಳಿನ ಕಾರ್ಖಾನೆಯಾಗಿ ಬಿಜೆಪಿ ಕೆಲಸ ಮಾಡುತ್ತಿದೆ. ಅಧಿಕಾರಕ್ಕಾಗಿ ಯಾವುದೇ ಮಟ್ಟಕ್ಕೂ ಇಳಿಯಲು ಅವರು ಸಿದ್ಧರಾಗಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.
ಮತದಾರರ ಪಟ್ಟಿ ಪರಿಷ್ಕರಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಬೆಂಬಲಿಗರಾದ ಬಡವರು, ರೈತರು, ಕಾರ್ಮಿಕರು ಹಾಗೂ ಅಲ್ಪಸಂಖ್ಯಾತರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು. “2014ರ ನಂತರ ದೇಶದಲ್ಲಿ ಮತದ್ರೋಹ ನಡೆಯುತ್ತಿದೆ. ಚುನಾವಣಾ ಆಯೋಗಕ್ಕೆ ಅರ್ಹ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕುವ ಅಧಿಕಾರವೇ ಇಲ್ಲ. ಆದರೂ ಈ ರೀತಿಯ ಬೆಳವಣಿಗೆಗಳು ನಡೆಯುತ್ತಿರುವುದು ಆತಂಕಕಾರಿ” ಎಂದರು.
ದೇಶದಲ್ಲಿ ಬಿಜೆಪಿ ಕೇವಲ ಶೇ.36ರಷ್ಟು ಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆ. ಉಳಿದ ಶೇ.64ರಷ್ಟು ಜನರು ಬಿಜೆಪಿ ವಿರುದ್ಧ ಮತ ಚಲಾಯಿಸಿದ್ದಾರೆ. ಈಗ ಆ ಮತದಾರರನ್ನೇ ಗುರಿಯಾಗಿಸಿ ಮತದಾರರ ಪಟ್ಟಿಯಿಂದ ಹೊರಗಿಡುವ ಸಂಚು ನಡೆಯುತ್ತಿದೆ ಎಂದು ಅವರು ಆರೋಪಿಸಿದರು.
ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ನ ಪ್ರತಿಯೊಬ್ಬ ನಾಯಕ ಮತ್ತು ಕಾರ್ಯಕರ್ತರೂ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದ ಅವರು, ಪ್ರತಿಯೊಂದು ಬೂತ್ನಲ್ಲಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರನ್ನು ನೇಮಿಸಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.
ಬೂತ್ ಲೆವೆಲ್ ಅಧಿಕಾರಿಗಳ (BLO) ಜೊತೆ ಸಮನ್ವಯ ಸಾಧಿಸಿ, ಎನ್ಯೂಮರೇಷನ್ ಫಾರ್ಮ್ಗಳನ್ನು ಸರಿಯಾಗಿ ಭರ್ತಿ ಮಾಡಿಸಿ, ಸಲ್ಲಿಕೆಯ ಸ್ವೀಕೃತಿ ಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಒಬ್ಬ ಅರ್ಹ ಮತದಾರನ ಹೆಸರೂ ಪಟ್ಟಿಯಿಂದ ಕೈಬಿಡದಂತೆ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆ ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ ಸಿದ್ದರಾಮಯ್ಯ, “ದೇಶದ ಪ್ರಜಾಪ್ರಭುತ್ವವನ್ನು ಉಳಿಸುವ ಹೊಣೆಗಾರಿಕೆ ಪ್ರತಿಯೊಬ್ಬ ನಾಗರಿಕನ ಮೇಲಿದೆ. ಮುಂದಿನ ಒಂದು ತಿಂಗಳು ಬೇರೆ ಎಲ್ಲ ಕೆಲಸಗಳಿಗಿಂತ ಮತದಾರರ ಪಟ್ಟಿ ಪರಿಷ್ಕರಣೆಗೆ ಹೆಚ್ಚಿನ ಆದ್ಯತೆ ನೀಡಿ. ಪ್ರತಿಯೊಬ್ಬ ಅರ್ಹ ಮತದಾರನ ಹೆಸರೂ ಪಟ್ಟಿಯಲ್ಲಿ ಉಳಿಯುವಂತೆ ಕಾರ್ಯಕರ್ತರು ಶ್ರಮಿಸಬೇಕು” ಎಂದು ಮನವಿ ಮಾಡಿದರು.





