ಬೆಂಗಳೂರು: ಕರ್ನಾಟಕದ ಅತಿದೊಡ್ಡ ಕೇಬಲ್ ಸೇತುವೆಯಾದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ಸೇತುವೆಯ ಉದ್ಘಾಟನೆ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಸೇತುವೆಯ ಉದ್ಘಾಟನಾ ಕಾರ್ಯಕ್ರಮವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಶಿಷ್ಟಾಚಾರ ಉಲ್ಲಂಘನೆಯ ಆರೋಪಗಳಿಗೆ ದಾರಿಮಾಡಿಕೊಟ್ಟಿದೆ. ಕೊನೆ ಕ್ಷಣದಲ್ಲಿ ಮಾಹಿತಿ ನೀಡಿದ್ದರಿಂದ ತಮ್ಮ ಪೂರ್ವನಿಗದಿತ ಕಾರ್ಯಕ್ರಮಗಳಿಂದಾಗಿ ಉದ್ಘಾಟನೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ವಿಷಯವನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ತಂದು ಕಾರ್ಯಕ್ರಮವನ್ನು ಮುಂದೂಡುವಂತೆ ಮನವಿ ಮಾಡಿದ್ದರೂ, ರಾಜ್ಯ ಬಿಜೆಪಿ ನಾಯಕರ ಒತ್ತಾಯಕ್ಕೆ ಮಣಿದು ತಮ್ಮ ಅನುಪಸ್ಥಿತಿಯಲ್ಲೇ ಕಾರ್ಯಕ್ರಮ ನಡೆಸಲಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಗಮನಕ್ಕೆ ತಾರದೆ ಶಿಷ್ಟಾಚಾರವನ್ನು ಉಲ್ಲಂಘಿಸಿದೆ ಎಂದು ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ತಮ್ಮ ಎಕ್ಸ್ ಖಾತೆಯಲ್ಲಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ಪತ್ರವನ್ನು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಜುಲೈ 11ರಂದು ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ ನೀಡಲಾಗಿತ್ತು ಮತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವಂತೆ ಕೋರಲಾಗಿತ್ತು. ಒಂದು ವೇಳೆ ಭೌತಿಕವಾಗಿ ಹಾಜರಾಗಲು ಸಾಧ್ಯವಾಗದಿದ್ದರೆ, ವರ್ಚುವಲ್ ಮೂಲಕವಾದರೂ ಭಾಗವಹಿಸುವಂತೆ ಜುಲೈ 12ರಂದು ಮತ್ತೊಮ್ಮೆ ಆಹ್ವಾನಿಸಲಾಗಿತ್ತು ಎಂದು ಗಡ್ಕರಿ ತಿಳಿಸಿದ್ದಾರೆ.
ಈ ವಿವಾದವು ಈಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರತ್ತ ತಿರುಗಿದೆ. ಸಿಗಂದೂರು ಸೇತುವೆ ಉದ್ಘಾಟನೆಯ ಆಹ್ವಾನ ವಿಷಯದಲ್ಲಿ ರಾಜ್ಯ ಸರ್ಕಾರವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ, ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರವು ರಾಜ್ಯದಲ್ಲಿ ಯಾವುದೇ ಕಾರ್ಯಕ್ರಮವನ್ನು ಆಯೋಜಿಸಿದಾಗ, ರಾಜ್ಯ ಸರ್ಕಾರದ ಗಮನಕ್ಕೆ ತಂದು, ಶಿಷ್ಟಾಚಾರದಂತೆ ನಡೆದುಕೊಳ್ಳಬೇಕು. ಆದರೆ, ಈ ಸಂದರ್ಭದಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ. ಕಾರ್ಯಕ್ರಮವನ್ನು ಮುಂದೂಡುವಂತೆ ಮಾಡಿದ ಮನವಿಯನ್ನೂ ಕೇಂದ್ರ ಸರ್ಕಾರ ಪರಿಗಣಿಸಿಲ್ಲ ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Karnataka CM Siddaramaiah has written to PM Narendra Modi, regarding the Ministry of Road Transport and Highways for scheduling a foundation stone-laying event for 9 National Highway projects without state consultation pic.twitter.com/DjKLymsReL
— IANS (@ians_india) July 14, 2025
ರಾಜ್ಯದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಜಾರಿಗೊಳಿಸುವಾಗ ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಬೇಕು ಎಂಬುದು ಸಿದ್ದರಾಮಯ್ಯ ಅವರ ವಾದವಾಗಿದೆ. ಸಿಗಂದೂರು ಸೇತುವೆಯಂತಹ ಪ್ರಮುಖ ಯೋಜನೆಯ ಉದ್ಘಾಟನೆಯಂತಹ ಕಾರ್ಯಕ್ರಮಗಳು ರಾಜಕೀಯ ಒಡಕುಗಳಿಗೆ ಕಾರಣವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ಪ್ರಧಾನಮಂತ್ರಿಗೆ ಮನವಿ ಮಾಡಿದ್ದಾರೆ.





