ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ

Untitled design 2026 06 17T164329.604

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಇಂದು ನಡೆಯುತ್ತಿರುವ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಅಡ್ಡ ಮತದಾನದ ಭೀತಿ ನಡುವೆ ಬಿಡದಿಯ ವಂಡರ್‌ಲಾ ರೆಸಾರ್ಟ್‌ನಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರನ್ನು ವಿಧಾನಸೌಧಕ್ಕೆ ಕರೆತರಲು ಪಕ್ಷದ ವತಿಯಿಂದ ಐದು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಕಾಂಗ್ರೆಸ್ ಶಾಸಕರ ಮೊದಲ ತಂಡ ರೆಸಾರ್ಟ್‌ನಿಂದ ಹೊರಟು ವಿಧಾನಸೌಧಕ್ಕೆ ಆಗಮಿಸಿದೆ.

ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಮತದಾನದ ದಿನವಾದ ಇಂದು ಶಾಸಕರು ನೇರವಾಗಿ ರೆಸಾರ್ಟ್‌ನಿಂದ ವಿಧಾನಸೌಧಕ್ಕೆ ತೆರಳಿ ತಮ್ಮ ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಬೆಂಗಳೂರಿನ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಿದ್ದಾರೆ.

ವಿಧಾನಸಭೆಯ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಸಂಜೆ 5 ಗಂಟೆಯ ನಂತರ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಪ್ರತಿ ಅಭ್ಯರ್ಥಿಗೆ ಒಬ್ಬ ಏಜೆಂಟ್‌ರನ್ನು ನೇಮಕ ಮಾಡಲಾಗಿದ್ದು, ಮತದಾನದ ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡುವಂತೆ ಸೂಚನೆ ನೀಡಲಾಗಿದೆ.

ಈ ಬಾರಿ ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಒಟ್ಟು ಎಂಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಐವರು ಅಭ್ಯರ್ಥಿಗಳು ಸ್ಪರ್ಧಿಸಿದ್ದು, ನಾಲ್ವರು ಅಭ್ಯರ್ಥಿಗಳ ಗೆಲುವಿನ ದಾರಿ ಬಹುತೇಕ ಸುಗಮವಾಗಿದೆ. ಆದರೆ ಐದನೇ ಅಭ್ಯರ್ಥಿಯ ಗೆಲುವಿನ ಲೆಕ್ಕಾಚಾರ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇದೇ ವೇಳೆ ಜೆಡಿಎಸ್ ಪಕ್ಷ ಗೋವಿಂದರಾಜು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಪೈಪೋಟಿ ಮತ್ತಷ್ಟು ತೀವ್ರಗೊಂಡಿದೆ.

ಒಬ್ಬ ಅಭ್ಯರ್ಥಿಯ ಗೆಲುವಿಗೆ ಕನಿಷ್ಠ 28 ಮತಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ನಾಲ್ವರು ಅಭ್ಯರ್ಥಿಗಳಿಗೆ ತಲಾ 29 ಮತಗಳನ್ನು ನೀಡುವ ತಂತ್ರ ರೂಪಿಸಿದೆ. ಈ ಲೆಕ್ಕಾಚಾರದ ಪ್ರಕಾರ ನಾಲ್ವರು ಅಭ್ಯರ್ಥಿಗಳಿಗೆ ಒಟ್ಟು 116 ಮತಗಳನ್ನು ಹಂಚಿಕೆ ಮಾಡಲಾಗುತ್ತದೆ. ಉಳಿದ ಮತಗಳಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿಗೆ 19 ಮತಗಳನ್ನು ಮೀಸಲಿಡುವ ನಿರ್ಧಾರ ಕೈಗೊಳ್ಳಲಾಗಿದೆ.

ಬಿಜೆಪಿಯಿಂದ ಉಚ್ಚಾಟಿತ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಸೇರಿದಂತೆ ಒಟ್ಟು 140 ಶಾಸಕರ ಬೆಂಬಲ ಕಾಂಗ್ರೆಸ್ ಪರವಾಗಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ. ಹೀಗಾಗಿ ಐದನೇ ಅಭ್ಯರ್ಥಿಯ ಗೆಲುವು ಹಾಗೂ ಅಡ್ಡ ಮತದಾನದ ಸಾಧ್ಯತೆಗಳು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿವೆ.

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಶಾಸಕರಿಗೆ ಅಣಕು ಮತದಾನದ ಮೂಲಕ ನಿನ್ನೆ ತರಬೇತಿ ನೀಡಿತ್ತು. ಬಿಡದಿಯ ಖಾಸಗಿ ವಂಡರ್‌ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರು ಬುಧವಾರ ನಡೆದ ಈ ವಿಶೇಷ ಶಿಬಿರದಲ್ಲಿ ಭಾಗವಹಿಸಿದರು.

Exit mobile version