2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಮೂರು ವರ್ಷಗಳ ಕಾಲ ಶಾಸಕರಾಗಿದ್ದ ಕಾಂಗ್ರೆಸ್ನ ಟಿ.ಡಿ. ರಾಜೇಗೌಡ, ಅಂಚೆ ಮತಗಳ ಮರು ಎಣಿಕೆಯಿಂದಾಗಿ ಕೆಲವೇ ದಿನಗಳಲ್ಲಿ ಅಧಿಕಾರ ಕಳೆದುಕೊಂಡು ಮತ್ತೆ ಶಾಸಕ ಸ್ಥಾನ ಉಳಿಸಿಕೊಂಡ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಇಂದು ಮತ್ತೊಂದು ತಿರುವು ಸಿಗಲಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣದ ವಿಚಾರಣೆ ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ವಿರುದ್ಧ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮವಾಗಿದೆ ಎಂಬ ಆರೋಪ ಮಾಡಿದ್ದ ಜೀವರಾಜ್, ಮರು ಎಣಿಕೆಗೆ ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆ ಸುಮಾರು ಮೂರು ವರ್ಷಗಳ ಕಾಲ ನಡೆದ ಬಳಿಕ ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸುವಂತೆ ಆದೇಶಿಸಿತ್ತು. ಈ ಆದೇಶದ ಹಿನ್ನೆಲೆಯಲ್ಲಿ ಮೇ 2ರಂದು ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. ಕಾಲೇಜು ಆವರಣದಲ್ಲಿ ಅಂಚೆ ಮತಗಳ ಮರು ಎಣಿಕೆ ನಡೆಯಿತು.
ಮರು ಎಣಿಕೆಯ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ 52 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದರಿಂದ ಮೂರು ವರ್ಷಗಳ ಕಾಲ ಶಾಸಕರಾಗಿದ್ದ ರಾಜೇಗೌಡ ಅವರು 255 ಮತಗಳ ಅಂತರದಿಂದ ಸೋತಂತಾಯಿತು. ಜೀವರಾಜ್ ಅವರು ಶಾಸಕರಾಗಿ ಪ್ರಮಾಣ ವಚನವನ್ನೂ ಸ್ವೀಕರಿಸಿದ್ದರು.
ಮರು ಎಣಿಕೆಯ ದಿನ ಐ.ಡಿ.ಎಸ್.ಜಿ. ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಕುತೂಹಲ ಮನೆ ಮಾಡಿತ್ತು. ಸಂಜೆ ವೇಳೆಗೆ ರಾಜೇಗೌಡ ಬೆಂಬಲಿಗರು ಗೆಲುವಿನ ಸಂಭ್ರಮಾಚರಣೆ ನಡೆಸಿದ್ದರೆ, ಮಧ್ಯರಾತ್ರಿ ವೇಳೆಗೆ ಜೀವರಾಜ್ ಪರವಾಗಿ ವಿಜಯೋತ್ಸವದ ವಾತಾವರಣ ನಿರ್ಮಾಣವಾಗಿತ್ತು.
ಆದರೆ ಹೈಕೋರ್ಟ್ ಆದೇಶದಂತೆ ನಡೆದ ಮರು ಎಣಿಕೆ ಫಲಿತಾಂಶವನ್ನು ಪ್ರಶ್ನಿಸಿ ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರು. ಪ್ರಕರಣದ ತುರ್ತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದ್ದು, ಟಿ.ಡಿ. ರಾಜೇಗೌಡ ಅವರು ಶಾಸಕ ಸ್ಥಾನದಲ್ಲಿ ಮುಂದುವರಿಯುವಂತೆ ಆದೇಶಿಸಿತು. ಪರಿಣಾಮವಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಡಿ.ಎನ್. ಜೀವರಾಜ್ ಅವರು ಕೇವಲ ಮೂರು ದಿನಗಳಲ್ಲೇ ಶಾಸಕ ಸ್ಥಾನದಿಂದ ಹಿಂದೆ ಸರಿಯಬೇಕಾಯಿತು.
ಇದೀಗ ಇದೇ ಪ್ರಕರಣ ಮತ್ತೆ ಸುಪ್ರೀಂ ಕೋರ್ಟ್ನ ಮುಂದೆ ಬಂದಿದೆ. ಇಂದಿನ ವಿಚಾರಣೆಯಲ್ಲಿ 2023ರ ಮೂಲ ಚುನಾವಣಾ ಫಲಿತಾಂಶ ಹಾಗೂ 2026ರಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯ ದಾಖಲೆಗಳನ್ನು ಚುನಾವಣಾ ಆಯೋಗ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ. ಈ ದಾಖಲೆಗಳನ್ನು ಪರಿಶೀಲಿಸುವ ಸಾಧ್ಯತೆ ಇದ್ದು, ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ಕುರಿತು ಮಹತ್ವದ ಬೆಳವಣಿಗೆ ನಿರೀಕ್ಷಿಸಲಾಗಿದೆ.





