ಸಚಿವ ಸಂಪುಟ ವಿಸ್ತರಣೆ, ಕಾಂಗ್ರೆಸ್ ಪಕ್ಷದ ಆಂತರಿಕ ಬೆಳವಣಿಗೆಗಳು ಹಾಗೂ ವಿಧಾನ ಪರಿಷತ್ ಚುನಾವಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ , ಯಾವುದೇ ಸಂದರ್ಭದಲ್ಲಿ ಸಚಿವ ಸ್ಥಾನಕ್ಕಾಗಿ ಒತ್ತಾಯ ಮಾಡಿಲ್ಲ. ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
“ನಾನು ಯಾವತ್ತೂ ನನಗೆ ಸಚಿವ ಸ್ಥಾನ ನೀಡಬೇಕು ಎಂದು ಕೇಳಿಲ್ಲ. ಪಕ್ಷದ ನಾಯಕತ್ವ ಯಾರಿಗೆ ಸಚಿವ ಸ್ಥಾನ ನೀಡಿದರೂ ಅದು ಪಕ್ಷಕ್ಕೂ ಮತ್ತು ರಾಜ್ಯದ ಜನರಿಗೂ ಒಳಿತಾಗಬೇಕು. ನಮ್ಮೆಲ್ಲರ ಗುರಿ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದು. ಅದಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ” ಎಂದು ಮಲ್ಲಿಕಾರ್ಜುನ್ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ತಮ್ಮ ಬೆಂಬಲಿಗರು ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಅಭಿಮಾನಿಗಳಿಗೆ ಯಾವುದೇ ರೀತಿಯ ಪ್ರತಿಭಟನೆ ಅಥವಾ ಒತ್ತಾಯದ ರಾಜಕಾರಣ ಮಾಡಬಾರದು ಎಂದು ಸೂಚನೆ ನೀಡಿದ್ದೇನೆ ಎಂದರು. “ಸಚಿವ ಸ್ಥಾನ ಪಡೆಯಬೇಕು ಎಂಬ ಆಸೆ ಎಲ್ಲರಲ್ಲೂ ಇರುವುದು ಸಹಜ. ಹೊಸದಾಗಿ ಆಯ್ಕೆಯಾದ ಶಾಸಕರೂ ಸಚಿವ ಸ್ಥಾನಕ್ಕಾಗಿ ತಮ್ಮ ನಿರೀಕ್ಷೆ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲಿ ವಿಶೇಷವೇನೂ ಇಲ್ಲ” ಎಂದು ಅವರು ಹೇಳಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷಗಳು ಮಾಡುತ್ತಿರುವ ಟೀಕೆಗಳಿಗೆ ಉತ್ತರಿಸಿದ ಮಲ್ಲಿಕಾರ್ಜುನ್, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. “ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿಲ್ಲ. ಬದಲಿಗೆ ಸರ್ಕಾರ ಸಮೃದ್ಧಿಯತ್ತ ಸಾಗುತ್ತಿದೆ. ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಕೆಲಸವನ್ನು ಸರ್ಕಾರ ಯಶಸ್ವಿಯಾಗಿ ಮಾಡುತ್ತಿದೆ” ಎಂದು ಹೇಳಿದರು.
ಇನ್ನು ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿದೆ ಎಂಬ ಆರೋಪದ ಬಗ್ಗೆ ಮಾತನಾಡಿದ ಅವರು, ಚುನಾವಣೆ ಮುಗಿದ ಬಳಿಕ ಎಲ್ಲವೂ ಸ್ಪಷ್ಟವಾಗಲಿದೆ ಎಂದರು. ನಾಳೆ ಚುನಾವಣೆ ನಡೆಯಲಿದೆ. ಅದರ ನಂತರ ಯಾರು ಯಾರಿಗೆ ಗಾಳ ಹಾಕಿದ್ದಾರೆ ಎಂಬುದು ಗೊತ್ತಾಗುತ್ತದೆ. ನಮ್ಮವರು ನೋಡಿದರೆ ಅವರು ಗಾಳ ಹಾಕಿದ್ದಾರೆ ಎನ್ನುತ್ತಾರೆ. ಅವರು ನೋಡಿದರೆ ನಮ್ಮವರು ಗಾಳ ಹಾಕಿದ್ದಾರೆ ಎಂದು ಆರೋಪ ಮಾಡುತ್ತಾರೆ. ರಾಜಕೀಯದಲ್ಲಿ ಇಂತಹ ಆರೋಪ-ಪ್ರತ್ಯಾರೋಪಗಳು ಸಹಜ. ಚುನಾವಣೆ ಬಳಿಕ ನಿಜಾಂಶ ಹೊರಬೀಳಲಿದೆ” ಎಂದು ಹೇಳಿದರು.
ಸಚಿವ ಸ್ಥಾನಕ್ಕಾಗಿ ಯಾವುದೇ ರೀತಿಯ ಒತ್ತಾಯ ಮಾಡದೇ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುವುದಾಗಿ ಎಸ್.ಎಸ್. ಮಲ್ಲಿಕಾರ್ಜುನ್ ಪುನರುಚ್ಚರಿಸಿದ್ದು, ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಎಲ್ಲ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂಬ ಸಂದೇಶವನ್ನು ನೀಡಿದ್ದಾರೆ.





