ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆಯ ಕಿನ್ನಿಪದವು ಎಂಬಲ್ಲಿ ಗುರುವಾರ ರಾತ್ರಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಅವರನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ರಾಜ್ಯಾದ್ಯಂತ ಆಘಾತ ಮೂಡಿಸಿದೆ. ಈ ದಾರುಣ ಘಟನೆಯನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ಖಂಡಿಸಿದ್ದು, ಕಾಂಗ್ರೆಸ್ ಸರ್ಕಾರದ ಕಾನೂನು ಸುವ್ಯವಸ್ಥೆಯ ವೈಫಲ್ಯವೇ ಇಂತಹ ಕೃತ್ಯಗಳಿಗೆ ಕಾರಣ ಎಂದು ಆರೋಪಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಗ್ಯಾರಂಟಿ ನ್ಯೂಸ್ ವರದಿ ಪ್ರಸ್ತಾಪಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಕ್ಸ್ ಖಾತೆಯಲ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಸುಹಾಸ್ ಶೆಟ್ಟಿ ಅವರ ಚಲನವಲನಗಳನ್ನು ದುಷ್ಕರ್ಮಿಗಳು ಸೂಕ್ಷ್ಮವಾಗಿ ಗಮನಿಸಿ, ಪೂರ್ವಯೋಜಿತವಾಗಿ ಈ ಹತ್ಯೆಯನ್ನು ನಡೆಸಿರುವುದು ತಿಳಿದುಬಂದಿದೆ. ಈ ಘಟನೆಯಿಂದ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಹಿಂದುತ್ವವನ್ನು ಪ್ರತಿಪಾದಿಸುವವರಿಗೆ ಭದ್ರತೆ ಇಲ್ಲದಂತಾಗಿದೆ ಎಂದು ಯತ್ನಾಳ್ ಆತಂಕ ವ್ಯಕ್ತಪಡಿಸಿದ್ದಾರೆ. “ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣವೇ ಇಂತಹ ಘಟನೆಗಳಿಗೆ ಕಾರಣವಾಗಿದೆ,” ಎಂದು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿರುವುದು ಆಘಾತ ಹಾಗೂ ದಿಗ್ಭ್ರಮೆ ತಂದಿದೆ.
ಸುಹಾಸ್ ಅವರ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಿ ಆತನನ ಮೇಲೆ ಹಲ್ಲೆ ಮಾಡಿರುವುದು ಧೃಡಪಟ್ಟಿದೆ. ಹಿಂದೂ ಕಾರ್ಯಕರ್ತರು, ಹಿಂದುತ್ವವನ್ನು ಪ್ರತಿಪಾದಿಸುವವರಿಗೆ ಕರ್ನಾಟಕ… pic.twitter.com/ROAJaBO70U
— Basanagouda R Patil (Yatnal) (@BasanagoudaBJP) May 1, 2025
ಘಟನೆಯ ವಿವರ
ಸುಹಾಸ್ ಶೆಟ್ಟಿ ಅವರು ತಮ್ಮ ಸ್ನೇಹಿತರೊಂದಿಗೆ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಮೀನಿನ ಟೆಂಪೋವೊಂದು ಅವರ ಕಾರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ರಸ್ತೆ ಬದಿಯ ಸಲೂನ್ಗೆ ನುಗ್ಗಿದೆ. ಈ ಸಂದರ್ಭವನ್ನು ಬಳಸಿಕೊಂಡ ಸ್ವಿಫ್ಟ್ ಕಾರಿನಲ್ಲಿದ್ದ 5-6 ಜನ ದುಷ್ಕರ್ಮಿಗಳ ತಂಡವು ಸುಹಾಸ್ ಶೆಟ್ಟಿಯ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಈ ದಾಳಿಯ ರಭಸಕ್ಕೆ ಸುಹಾಸ್ ಶೆಟ್ಟಿ ಅವರ ತಲೆ, ಕೈ, ಕಾಲು ಮತ್ತು ದೇಹದಾದ್ಯಂತ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಸುಹಾಸ್ ಶೆಟ್ಟಿ ಸಾವನ್ನಪ್ಪಿದ್ದಾನೆ.
ಸುಹಾಸ್ ಶೆಟ್ಟಿ ಅವರು ಹಿಂದೂ ಸಂಘಟನೆಗಳಲ್ಲಿ ಪ್ರಮುಖ ಕಾರ್ಯಕರ್ತರಾಗಿದ್ದರು ಮತ್ತು ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯರಾಗಿದ್ದರು. 2022ರಲ್ಲಿ ಸುರತ್ಕಲ್ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಅವರು ಪ್ರಮುಖ ಆರೋಪಿಯಾಗಿದ್ದು, ಒಂದು ವರ್ಷದ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಹತ್ಯೆಯನ್ನು ಫಾಝಿಲ್ ಕೊಲೆಗೆ ಪ್ರತೀಕಾರವಾಗಿ ನಡೆಸಲಾಗಿದೆ ಎಂದು ಶಂಕಿಸಲಾಗಿದೆ.
ಬಿಜೆಪಿಯ ಆಕ್ರೋಶ ಮತ್ತು ಬಂದ್ ಕರೆ
ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 2ರಂದು ಬಂದ್ಗೆ ಕರೆ ನೀಡಿತ್ತು. ಈ ಕರೆಗೆ ಸ್ಪಂದಿಸಿ ಮಂಗಳೂರಿನಲ್ಲಿ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ಬಸ್ ಸಂಚಾರ ಸ್ಥಗಿತಗೊಂಡಿತು. ಕೆಲವೆಡೆ ಉದ್ರಿಕ್ತ ಗುಂಪುಗಳು ಬಸ್ಗಳಿಗೆ ಕಲ್ಲು ತೂರಾಟ ನಡೆಸಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸುಹಾಸ್ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಬಿಜೆಪಿ ನಾಯಕರು, ಶಾಸಕರಾದ ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ಮತ್ತು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಚರ್ಚೆ
ಸುಹಾಸ್ ಶೆಟ್ಟಿ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ “ಫಿನೀಶ್” ಎಂಬ ಪೋಸ್ಟ್ ವೈರಲ್ ಆಗಿದ್ದು, ಈ ಕೊಲೆಯ ಹಿಂದೆ ಕೋಮು ದ್ವೇಷದ ಕಾರಣವಿರಬಹುದು ಎಂಬ ಚರ್ಚೆಗೆ ಕಾರಣವಾಗಿದೆ.