ಬರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ್ ಮನವಿ

ಕೃಷ್ಣ (25)

ತುಮಕೂರು, ಜುಲೈ 17: ರಾಜ್ಯದಲ್ಲಿ ಬರದ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ವಿಶೇಷವಾಗಿ ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವುದು ದೊಡ್ಡ ಸವಾಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣೆ ಮತ್ತು ಬರ ನಿರ್ವಹಣೆಯ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ವಾಡಿಕೆಗಿಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ತುಮಕೂರು ಜಿಲ್ಲೆಯ ಬಹುತೇಕ ತಾಲ್ಲೂಕುಗಳಲ್ಲಿ ಮಳೆಯ ಕೊರತೆಯಿಂದ ಬರದ ಛಾಯೆ ಆವರಿಸಿದೆ ಎಂದು ತಿಳಿಸಿದರು.

ಅವರ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಕೃಷಿ ಬಿತ್ತನೆ ಕೇವಲ 9.34% ಮಾತ್ರ ಪೂರ್ಣಗೊಂಡಿದೆ. ತುಮಕೂರು ಜಿಲ್ಲೆಯ ಪಾವಗಡ ಹೊರತುಪಡಿಸಿ ಉಳಿದ ತಾಲ್ಲೂಕುಗಳಲ್ಲಿ ಸಮರ್ಪಕ ಮಳೆಯಾಗಿಲ್ಲ. ಕೆರೆಗಳು ಬತ್ತುತ್ತಿದ್ದು, ಬೋರ್‌ವೆಲ್‌ಗಳಲ್ಲೂ ನೀರಿನ ಮಟ್ಟ ಕುಸಿದಿದೆ. ಜಲಜೀವನ್ ಮಿಷನ್ (JJM) ಕಾಮಗಾರಿ ಪೂರ್ಣಗೊಂಡಿರುವ ಪ್ರದೇಶಗಳಲ್ಲೂ ನೀರಿನ ಮೂಲಗಳ ಕೊರತೆಯಿಂದ ಸಮಸ್ಯೆ ಉಂಟಾಗಿದೆ ಎಂದು ಹೇಳಿದರು.

ಬರ ನಿರ್ವಹಣೆಗೆ ಸರ್ಕಾರ ಈಗಾಗಲೇ ಕುಡಿಯುವ ನೀರಿಗಾಗಿ 5 ಕೋಟಿ ರೂ, ತಹಶೀಲ್ದಾರರ ಪಿಡಿ ಖಾತೆಗಳಲ್ಲಿ 3.5 ಕೋಟಿ ರೂ. ಹಾಗೂ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 15 ಕೋಟಿ ರೂ. ಮೀಸಲಿಟ್ಟಿದೆ. ಈ ಹಣವನ್ನು ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸಲು ಬಳಸುವಂತೆ ಸೂಚಿಸಲಾಗಿದೆ ಎಂದರು.

ಪ್ರತಿ ತಾಲ್ಲೂಕಿನಲ್ಲಿ ಟಾಸ್ಕ್‌ಫೋರ್ಸ್ ರಚಿಸಿ, ನೋಡಲ್ ಅಧಿಕಾರಿಗಳ ಮೂಲಕ ಪರಿಸ್ಥಿತಿಯ ನಿರಂತರ ಪರಿಶೀಲನೆ ನಡೆಸಲಾಗುತ್ತಿದೆ. ಜನರು ಊರು ಬಿಟ್ಟು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕೋವಿಡ್ ಮತ್ತು ಡೆಂಗ್ಯೂ ಕುರಿತು ಎಚ್ಚರಿಕೆ

ಆಂಧ್ರಪ್ರದೇಶದ ಗಡಿಭಾಗದಲ್ಲಿ ಕೋವಿಡ್ ಪ್ರಕರಣಗಳು ಹಾಗೂ ಸಾವಿನ ವರದಿಗಳ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಆರೋಗ್ಯ ತಪಾಸಣೆ ಬಿಗಿಗೊಳಿಸಲಾಗಿದೆ. ಕೋವಿಡ್ ಜೊತೆಗೆ ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾ ಪ್ರಕರಣಗಳ ಮೇಲೂ ನಿಗಾ ವಹಿಸಲಾಗಿದೆ. ಸೋಂಕಿತರು ಪತ್ತೆಯಾದರೆ ತಕ್ಷಣ ಪ್ರತ್ಯೇಕ ಚಿಕಿತ್ಸೆ (ಐಸೋಲೇಷನ್) ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಶುದ್ಧ ಕುಡಿಯುವ ನೀರಿಗೆ ಒತ್ತು

ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಹಲವು ವರ್ಷಗಳಿಂದ ಸ್ವಚ್ಛಗೊಳಿಸದ ಓವರ್‌ಹೆಡ್ ಟ್ಯಾಂಕ್‌ಗಳನ್ನು ತಕ್ಷಣ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಳೆದ ಬಾರಿ ಕಲುಷಿತ ನೀರಿನಿಂದ ಮಧುಗಿರಿಯಲ್ಲಿ ಸಂಭವಿಸಿದ್ದ ದುರ್ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ ಎಂದರು.

ಕೇಂದ್ರಕ್ಕೆ ವಿಶೇಷ ಮನವಿ

ಬರದ ಪರಿಸ್ಥಿತಿ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ, ದೇಶದ ಹಲವು ಭಾಗಗಳಲ್ಲಿ ಬರದ ಛಾಯೆ ಆವರಿಸಿದೆ. ಆದ್ದರಿಂದ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, NDRF ನಿಯಮಗಳನ್ನು ಸಡಿಲಗೊಳಿಸಿ ಹೆಚ್ಚಿನ ನೆರವು ನೀಡುವಂತೆ ಪ್ರಧಾನಿ, ಗೃಹ ಸಚಿವರು ಮತ್ತು ಕೃಷಿ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ತಿಳಿಸಿದರು.

Exit mobile version