ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್ ಲೋಕಾರ್ಪಣಾ ಸಮಾರಂಭಕ್ಕೆ ತುಂಗಭದ್ರೆಯ ಅಂಗಳ ಸಂಪೂರ್ಣವಾಗಿ ಸಜ್ಜಾಗಿದೆ. ಇಂದು (ಜೂನ್ 25 ಗುರುವಾರ) ನಡೆಯಲಿರುವ ಈ ಮಹತ್ವದ ಉದ್ಘಾಟನಾ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಇಂದು ಬೆಳಗ್ಗೆ 10 ಗಂಟೆಗೆ ನೂತನ ಕ್ರಸ್ಟ್ ಗೇಟ್ಗಳ ಭವ್ಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ದಶಕಗಳ ಬಳಿಕ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ ಸೇರಿರುವುದು ವಿಶೇಷವಾಗಿದೆ.
ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಆಗಮಿಸುವುದು ವಿಶೇಷವಾಗಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಚಿವರು, ಶಾಸಕರು ಹಾಗೂ ಉನ್ನತ ಮಟ್ಟದ ಸರ್ಕಾರಿ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಒಂದೇ ವೇದಿಕೆಯಲ್ಲಿ ಮೂವರು ರಾಜ್ಯಗಳ ಮುಖ್ಯಮಂತ್ರಿಗಳು
ಈ ಐತಿಹಾಸಿಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಭಾಗವಹಿಸಲಿದ್ದಾರೆ. ಜೊತೆಗೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಸಹ ಉಪಸ್ಥಿತರಿರಲಿದ್ದಾರೆ.
ಮೂರು ರಾಜ್ಯಗಳ ಪ್ರಮುಖ ನಾಯಕರು ಒಂದೇ ವೇದಿಕೆಯಲ್ಲಿ ಸೇರುವ ಈ ಸಂದರ್ಭವನ್ನು ಜಲ ನಿರ್ವಹಣೆ ಹಾಗೂ ಪ್ರಾದೇಶಿಕ ಸಹಕಾರದ ದೃಷ್ಟಿಯಿಂದ ಅತ್ಯಂತ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.
19ನೇ ಗೇಟ್ ದುರಂತದಿಂದ ಪುನರ್ ನಿರ್ಮಾಣದವರೆಗೆ
1953ರಲ್ಲಿ ಅಳವಡಿಸಲಾಗಿದ್ದ 20 ಅಡಿ ಎತ್ತರ, 60 ಅಡಿ ಅಗಲ ಹಾಗೂ 48.50 ಟನ್ ತೂಕದ ಹಳೆಯ ಕ್ರಸ್ಟ್ ಗೇಟ್ಗಳು ದೀರ್ಘಕಾಲದ ಬಳಕೆಯಿಂದ ಗಂಭೀರವಾಗಿ ಸವಕಳಿಯಾಗಿದ್ದವು. 2024ರ ಆಗಸ್ಟ್ನಲ್ಲಿ 19ನೇ ಗೇಟ್ ಕೊಚ್ಚಿಹೋದ ಘಟನೆ ಜಲಾಶಯದ ಸುರಕ್ಷತೆಯ ಬಗ್ಗೆ ಆತಂಕವನ್ನು ಹೆಚ್ಚಿಸಿತ್ತು.
ಈ ಘಟನೆ ಬಳಿಕ ಡ್ಯಾಂ ಸುರಕ್ಷತಾ ತಂಡ ಹಾಗೂ ಕೇಂದ್ರ ಜಲಶಕ್ತಿ ಆಯೋಗವು ಪರಿಶೀಲನೆ ನಡೆಸಿ, ಜಲಾಶಯದ ಎಲ್ಲಾ 33 ಗೇಟ್ಗಳನ್ನು ಬದಲಾಯಿಸುವಂತೆ ಶಿಫಾರಸು ಮಾಡಿತ್ತು. ಅದರಂತೆ ತುರ್ತು ಮತ್ತು ಯುದ್ಧೋಪಾದಿಯಲ್ಲಿ ಕೈಗೊಂಡ ಕಾರ್ಯಾಚರಣೆಯ ಫಲವಾಗಿ ನೂತನ ಗೇಟ್ಗಳ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ.
ಭದ್ರತೆ ಮತ್ತು ಸಿದ್ಧತೆಗಳಿಗೆ ವಿಶೇಷ ಆದ್ಯತೆ
ಕಾರ್ಯಕ್ರಮ ಶಿಸ್ತುಬದ್ಧವಾಗಿ ನಡೆಯಲು ಭದ್ರತಾ ವ್ಯವಸ್ಥೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮದ ಸಿದ್ಧತೆಗಳು ವೇಗವಾಗಿ ಮುಂದುವರಿದಿದ್ದು, ಸಂಬಂಧಿತ ಅಧಿಕಾರಿಗಳು ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ.
ರಾಜ್ಯದ ಜಲಸಂಪನ್ಮೂಲ ಸಚಿವರು ಹಾಗೂ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಸಂಸದರು ಮತ್ತು ಶಾಸಕರು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡುತ್ತಾ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಬಳ್ಳಾರಿ ವಲಯದ ಐಜಿಪಿ ಡಾ. ಹರ್ಷ ಪಿ.ಎಸ್., ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಮತ್ತು ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ ಸೇರಿದಂತೆ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸಮನ್ವಯ ಸಭೆಗಳನ್ನು ನಡೆಸಿದ್ದಾರೆ.
ಹಬ್ಬದ ವಾತಾವರಣದಲ್ಲಿ ತುಂಗಭದ್ರಾ ಅಂಗಳ
ಸಮಾರಂಭದ ಹಿನ್ನೆಲೆ ತುಂಗಭದ್ರಾ ಜಲಾಶಯ ಸುತ್ತಮುತ್ತಲಿನ ಪ್ರದೇಶವು ಹಬ್ಬದ ವಾತಾವರಣವನ್ನು ಪಡೆದಿದೆ. ಸುಗಮ ಸಂಚಾರಕ್ಕಾಗಿ ರಸ್ತೆ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗಿದ್ದು, ಮುನಿರಾಬಾದ್ನ ಪ್ರಮುಖ ರಸ್ತೆಗಳನ್ನು ವಿಸ್ತರಿಸಲಾಗಿದೆ. ತುಂಗಭದ್ರಾ ನದಿ ತೀರದ ಹಸಿರು ಸಿರಿಯ ಮುನಿರಾಬಾದ್ ಗ್ರಾಮ ಸೇರಿದಂತೆ ಇಡೀ ಪ್ರದೇಶವು ಹಬ್ಬದ ಸಂಭ್ರಮದಲ್ಲಿ ಕಂಗೊಳಿಸುತ್ತಿದೆ.
ರೈತರಲ್ಲಿ ಹೊಸ ನಿರೀಕ್ಷೆ
ಕೊಪ್ಪಳ, ವಿಜಯನಗರ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳ ಸಾವಿರಾರು ಎಕರೆ ಕೃಷಿಭೂಮಿಗೆ ನೀರುಣಿಸುವ ತುಂಗಭದ್ರಾ ಜಲಾಶಯಕ್ಕೆ ನೂತನ ಕ್ರಸ್ಟ್ ಗೇಟ್ ಅಳವಡಿಕೆಯಾಗುತ್ತಿರುವುದು ಈ ಭಾಗದ ರೈತರಲ್ಲಿ ಸಂತಸ ಮೂಡಿಸಿದೆ. ಈ ವರ್ಷವೂ ಜಲಾಶಯ ಸಂಪೂರ್ಣವಾಗಿ ತುಂಬಿ, ಕೃಷಿಗೆ ಸಮರ್ಪಕ ನೀರು ದೊರೆತು ಹಸಿರು ಸಮೃದ್ಧಿಯಾಗಲಿ ಎಂಬುದು ಸ್ಥಳೀಯರ ಆಶಯವಾಗಿದೆ.
ಬೃಹತ್ ರೈತರ ಸಮಾವೇಶಕ್ಕೆ ವೇದಿಕೆ ಸಜ್ಜು
ಮುನಿರಾಬಾದ್ನ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಬೃಹತ್ ಸಮಾರಂಭ ನಡೆಯಲಿದ್ದು, ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ವಿಜಯನಗರ ಜಿಲ್ಲೆಗಳ ಸುಮಾರು 20 ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆಯಿದೆ.
ಈ ಕಾರ್ಯಕ್ರಮದಲ್ಲಿ ನವಲಿ ಜಲಾಶಯ ಯೋಜನೆ ಹಾಗೂ ಹೂಳು ತೆರವು ಕಾರ್ಯಗಳ ಕುರಿತು ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆ ಇದೆ. ಮೂರೂ ರಾಜ್ಯಗಳ ನಾಯಕರು ನವಲಿ ಸಮಾನಾಂತರ ಜಲಾಶಯ ನಿರ್ಮಾಣದ ಬಗ್ಗೆ ಅನೌಪಚಾರಿಕ ಮಾತುಕತೆ ನಡೆಸುವ ಸಾಧ್ಯತೆಯೂ ಇದೆ.
