ಪ್ರೇಮಿಗಳೇ ಹೆದರಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ; ಯುವ ಕಾಂಗ್ರೆಸ್

Untitled design 2026 02 13T223057.697

ಬೆಂಗಳೂರು, ಫೆ.13: ಫೆಬ್ರವರಿ 14ರ ಪ್ರೇಮಿಗಳ ದಿನದಂದು ನಡೆಯುವ ನೈತಿಕ ಪೊಲೀಸ್‌ಗಿರಿ ವಿರುದ್ಧ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಟ್ಟುನಿಟ್ಟಿನ ನಿಲುವು ತಳೆದಿದೆ. ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ಪ್ರೇಮಿಗಳಿಗೆ ಕಿರುಕುಳ ನೀಡುವ ಘಟನೆಗಳನ್ನು ತಡೆಯಲು ಯುವ ಕಾಂಗ್ರೆಸ್ ಕಾರ್ಯಕರ್ತರು ‘ಪ್ರೀತಿಯ ಸೈನಿಕರಾಗಿ’ ನಿಲ್ಲಲಿದ್ದಾರೆ ಎಂದು ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ತಿಳಿಸಿದ್ದಾರೆ.

ಪ್ರತಿ ವರ್ಷ ವ್ಯಾಲೆಂಟೈನ್ಸ್ ಡೇ ಸಂದರ್ಭ ಪಾರ್ಕ್‌ಗಳು, ಮಾಲ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳಿಗೆ ಕಿರುಕುಳ ನೀಡಲಾಗುತ್ತದೆ ಎಂಬ ಆರೋಪಗಳು ಕೇಳಿಬರುತ್ತವೆ. ವಿಶ್ವ ಹಿಂದೂ ಪರಿಷತ್‌, ಭಜರಂಗ ದಳ ಹಾಗೂ ಇತರೆ ಹಿಂದೂ ಪರ ಸಂಘಟನೆಗಳು ಸಂಸ್ಕೃತಿ ಹೆಸರಿನಲ್ಲಿ ಪ್ರತಿಭಟನೆ ನಡೆಸಿ, ಕೆಲವೆಡೆ ದಾಂಧಲೆ ನಡೆಸಿದ ಉದಾಹರಣೆಗಳಿವೆ. ಈ ಬಾರಿ ಅಂತಹ ಯಾವುದೇ ಸಮಾಜಘಾತುಕ ಕೃತ್ಯಗಳಿಗೆ ಅವಕಾಶ ನೀಡುವುದಿಲ್ಲ ಎಂದು ಮಂಜುನಾಥ್ ಗೌಡ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆ ಮತ್ತು ಬ್ಲಾಕ್ ಮಟ್ಟದ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಪ್ರೇಮಿಗಳ ಸುರಕ್ಷತೆಯ ಹೊಣೆಗಾರಿಕೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.

ಸಂವಿಧಾನದ 21ನೇ ವಿಧಿ ಪ್ರತಿ ಪ್ರಜೆಗೆ ‘ಜೀವನ ಮತ್ತು ವೈಯಕ್ತಿಕ ಸ್ವಾತಂತ್ರ್ಯ’ದ ಹಕ್ಕನ್ನು ನೀಡುತ್ತದೆ. ಗೌರವಯುತವಾಗಿ ಬದುಕುವ ಹಕ್ಕು ಮತ್ತು ಸಂಗಾತಿಯನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವೂ ಅದರಲ್ಲಿ ಒಳಗೊಂಡಿದೆ. ಸುಪ್ರೀಂ ಕೋರ್ಟ್ ಸಹ ಪ್ರೀತಿ ಮತ್ತು ವಿವಾಹ ಆಯ್ಕೆ ವೈಯಕ್ತಿಕ ಸ್ವಾತಂತ್ರ್ಯದ ಭಾಗ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ ಪ್ರೇಮಿಗಳ ಹಕ್ಕುಗಳಿಗೆ ಧಕ್ಕೆ ತರುವ ಯಾವುದೇ ಕಾನೂನುಬಾಹಿರ ಕೃತ್ಯಗಳನ್ನು ಸಹಿಸಲಾಗುವುದಿಲ್ಲ ಎಂದು ಮಂಜುನಾಥ್ ಗೌಡ ತಿಳಿಸಿದ್ದಾರೆ.

“ಪ್ರೇಮಿಗಳು ಧೈರ್ಯದಿಂದ ಹಾಗೂ ಮುಕ್ತವಾಗಿ ಓಡಾಡಬಹುದು. ಯಾರಿಗೂ ಹೆದರಬೇಕಿಲ್ಲ. ನಿಮ್ಮ ರಕ್ಷಣೆಗೆ ನಾವು ಇದ್ದೇವೆ,” ಎಂದು ಅವರು ಭರವಸೆ ನೀಡಿದ್ದಾರೆ. ಪೊಲೀಸ್ ಇಲಾಖೆ ಕೂಡ ಇಂತಹ ಗೂಂಡಾಗಿರಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಇಲಾಖೆ ವಿಫಲವಾದರೆ ಯುವ ಕಾಂಗ್ರೆಸ್ ಕಾರ್ಯಕರ್ತರೇ ಪ್ರೇಮಿಗಳ ಪರವಾಗಿ ನಿಲ್ಲಲಿದ್ದಾರೆ ಎಂದು ಹೇಳಿದ್ದಾರೆ.

ಪ್ರತಿ ವರ್ಷ ಪ್ರೇಮಿಗಳ ದಿನದಂದು ಕೆಲವು ಸಂಘಟನೆಗಳು ಹೂವು ಮತ್ತು ಉಡುಗೊರೆ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸುವ ಘಟನೆಗಳು ವರದಿಯಾಗಿವೆ. ಇದರಿಂದ ಬಡ ವ್ಯಾಪಾರಿಗಳಿಗೆ ನಷ್ಟವಾಗುತ್ತದೆ. ಈ ಬಾರಿ ಅಂತಹ ದಾಳಿಗಳನ್ನು ತಡೆಯಲು ಯುವ ಕಾಂಗ್ರೆಸ್ ಸಜ್ಜಾಗಿದೆ.

ಸಮಾಜದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಭಯದ ವಾತಾವರಣ ಸೃಷ್ಟಿಸಲು ಯತ್ನಿಸುವ ಶಕ್ತಿಗಳಿಗೆ ತಕ್ಕ ಉತ್ತರ ನೀಡಲಾಗುತ್ತದೆ. ಪರಸ್ಪರ ಸಮ್ಮತಿಯೊಂದಿಗೆ ಪ್ರೀತಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಅದನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಯುವ ಕಾಂಗ್ರೆಸ್ ಸ್ಪಷ್ಟಪಡಿಸಿದೆ.

Exit mobile version