ವಾಲ್ಮೀಕಿ ಹಗರಣ: ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬೃಹತ್ ಪಾದಯಾತ್ರೆಗೆ ಸಜ್ಜು!

Untitled design 2026 08 14T082112.642

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ನೂತನ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೃಹತ್ ಪಾದಯಾತ್ರೆ ನಡೆಸಲು ಸಿದ್ಧತೆ ಆರಂಭಿಸಿದೆ. ಪಕ್ಷದ ವರಿಷ್ಠರಿಂದ ಅಂತಿಮ ಅನುಮೋದನೆ ದೊರೆತರೆ, ಮುಂದಿನ ವಾರವೇ ಮಾಜಿ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ರಾಯಚೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಆರಂಭವಾಗುವ ಸಾಧ್ಯತೆ ಇದೆ.

ಬಿಜೆಪಿ ರೂಪಿಸಿರುವ ಪ್ರಾಥಮಿಕ ಯೋಜನೆಯ ಪ್ರಕಾರ, ಪಾದಯಾತ್ರೆ ರಾಯಚೂರು ಜಿಲ್ಲೆಯಿಂದ ಆರಂಭವಾಗಿ ಯಾದಗಿರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ಮೂಲಕ ಬಳ್ಳಾರಿ ತಲುಪಲಿದೆ. ಕಲ್ಯಾಣ ಕರ್ನಾಟಕದ ವಿವಿಧ ಭಾಗಗಳಲ್ಲಿ ಸಾರ್ವಜನಿಕ ಸಭೆಗಳು, ಪ್ರತಿಭಟನೆಗಳು ಮತ್ತು ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶವೂ ಪಕ್ಷ ಹೊಂದಿದೆ.

ರಾಜ್ಯ ನಾಯಕರ ಸಭೆಯಲ್ಲಿ ಚರ್ಚೆ

ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಬಿ. ಶ್ರೀರಾಮುಲು, ಮಾಜಿ ಸಚಿವ ಶಿವನಗೌಡ ನಾಯಕ ಸೇರಿದಂತೆ ಹಲವು ಹಿರಿಯ ನಾಯಕರು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಪಾದಯಾತ್ರೆಯ ರೂಪುರೇಷೆಗಳ ಕುರಿತು ಚರ್ಚಿಸಿದರು. ಸಭೆಯಲ್ಲಿ ತಾತ್ವಿಕ ಒಪ್ಪಿಗೆ ವ್ಯಕ್ತವಾಗಿದ್ದು, ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್‌ಗೆ ಕಳುಹಿಸಲಾಗುತ್ತದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಪಾದಯಾತ್ರೆಯ ಮಾರ್ಗ, ದಿನಾಂಕ, ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಗಳು ಹಾಗೂ ಭಾಗವಹಿಸುವ ನಾಯಕರ ಪಟ್ಟಿಯನ್ನು ಸಿದ್ಧಪಡಿಸುವಂತೆ ರಾಜ್ಯ ಘಟಕಕ್ಕೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ರಾಜ್ಯ ರಾಜಕಾರಣದಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಆರೋಪ ಎದುರಿಸಿದ್ದ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತಿದೆ. ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂಬುದು ಬಿಜೆಪಿ ಪ್ರಮುಖ ಬೇಡಿಕೆಯಾಗಿದ್ದು, ಅದನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಪಕ್ಷ ಆರೋಪಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಗೇಂದ್ರ ಅವರ ಸೇರ್ಪಡೆಯನ್ನು ಸಮರ್ಥಿಸಿಕೊಂಡಿರುವ ಹಿನ್ನೆಲೆಯಲ್ಲಿ, ಸರ್ಕಾರದ ಮೇಲೆ ರಾಜಕೀಯ ಒತ್ತಡ ಹೆಚ್ಚಿಸಲು ಪಾದಯಾತ್ರೆಯನ್ನು ಪ್ರಮುಖ ಹೋರಾಟದ ಅಸ್ತ್ರವನ್ನಾಗಿ ಬಿಜೆಪಿ ಬಳಸಲು ಮುಂದಾಗಿದೆ.

ಪಕ್ಷದ ಹೈಕಮಾಂಡ್‌ನಿಂದ ಅಧಿಕೃತ ಅನುಮೋದನೆ ದೊರೆತ ಬಳಿಕ ಪಾದಯಾತ್ರೆಯ ದಿನಾಂಕ, ಮಾರ್ಗ ಹಾಗೂ ಸಮಗ್ರ ಕಾರ್ಯಕ್ರಮವನ್ನು ಬಿಜೆಪಿ ಘೋಷಿಸುವ ನಿರೀಕ್ಷೆಯಿದೆ.

Exit mobile version