ಯಾದಗಿರಿಯಲ್ಲಿ ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾ*ವು

Untitled design 2026 06 12T181043.725

ಯಾದಗಿರಿ: ಅತಿಯಾಗಿ ಕೂಲ್ ಡ್ರಿಂಕ್ಸ್ ಮತ್ತು ಎನರ್ಜಿ ಡ್ರಿಂಕ್ಸ್ ಸೇವನೆಯಿಂದಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ನಿವಾಸಿ ಬಾಲಪ್ಪ (18) ಎಂದು ಗುರುತಿಸಲಾಗಿದೆ. ಬಾಲಪ್ಪ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದನು ಎಂದು ತಿಳಿದುಬಂದಿದೆ.

ಬಾಲಪ್ಪ ಕಳೆದ ಕೆಲವು ತಿಂಗಳುಗಳಿಂದ ಅತಿಯಾಗಿ ಕೂಲ್ ಡ್ರಿಂಕ್ಸ್ ಹಾಗೂ ಎನರ್ಜಿ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದ ಎನ್ನಲಾಗಿದೆ. ನಂತರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ ಬಾಲಪ್ಪನನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಚಿಕಿತ್ಸೆ ನೀಡಿದರೂ, ಕಿಡ್ನಿ ವೈಫಲ್ಯ ಉಂಟಾದ ಹಿನ್ನೆಲೆ ಅವರ ಸ್ಥಿತಿ ಗಂಭೀರವಾಗಿತ್ತು. ಕೊನೆಗೆ ಇಂದು ಬೆಳಿಗ್ಗೆ (ಜೂನ್ 12) ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಘಟನೆಯ ನಂತರ ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಗನನ್ನು ಕಳೆದುಕೊಂಡ ದುಃಖದಲ್ಲಿ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಾರಾಯಣಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಗ್ರಾಮಸ್ಥರು ಈ ಘಟನೆ ನಂತರ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. “ಅಪಾಯಕಾರಿ ತಂಪು ಪಾನೀಯಗಳ ಮೇಲೆ ನಿಯಂತ್ರಣ ಬೇಕು” ಎಂಬ ಆಗ್ರಹವನ್ನು ಅವರು ಸರ್ಕಾರದ ಮುಂದೆ ಇಟ್ಟಿದ್ದಾರೆ.

ಮಾವಿನ ಹಣ್ಣು ಸೇವಿಸಿ ಅಸ್ವಸ್ಥ, ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು

 

ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ರಾತ್ರಿ ಊಟದ ಬಳಿಕ ಮಾವಿನ ಹಣ್ಣು ತಿಂದ ಒಂದೇ ಕುಟುಂಬದ ಇಬ್ಬರು ಸಹೋದರಿಯರು ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೇ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃತಕ ರಾಸಾಯನಿಕಗಳಿಂದ ಮಾಗಿಸಲಾದ ಮಾವಿನ ಹಣ್ಣೇ ಈ ದಾರುಣ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಮೃತರಾದವರು ಶೆಂಬಳ್ಳಿ ಗ್ರಾಮದ ನಿವಾಸಿಗಳಾದ ಭವಾನಿ ವೈಜಿನಾಥ್ ಮೇತ್ರೆ (17) ಹಾಗೂ ಸಂಧ್ಯಾರಾಣಿ ಮೇತ್ರೆ (14).

ಊಟದ ಬಳಿಕ ಹಣ್ಣು ಸೇವನೆ, ತಕ್ಷಣ ಅಸ್ವಸ್ಥತೆ

ಮಾಹಿತಿಯ ಪ್ರಕಾರ, ಇಂದುಮತಿ ಎಂಬ ಮಹಿಳೆ ಹಾಗೂ ಅವರ ಮೂರು ಹೆಣ್ಣುಮಕ್ಕಳು ಮನೆಯಲ್ಲಿ ರಾತ್ರಿ ಊಟ ಮುಗಿಸಿದ್ದಾರೆ. ಊಟದ ನಂತರ ಎಲ್ಲರೂ ಸೇರಿ ಮಾವಿನ ಹಣ್ಣು ಸೇವಿಸಿದ್ದಾರೆ. ಆದರೆ ಹಣ್ಣು ತಿಂದ ಕೆಲವೇ ಸಮಯದೊಳಗೆ ಕುಟುಂಬದ ಎಲ್ಲರಿಗೂ ತೀವ್ರ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ.

ಸ್ಥಿತಿ ಗಂಭೀರವಾಗುತ್ತಿದ್ದಂತೆ ಕುಟುಂಬ ಸದಸ್ಯರು ತಕ್ಷಣವೇ ಎಲ್ಲರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ನಾರಾಯಣ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಚಿಕಿತ್ಸೆ ಫಲಿಸದೇ ಇಬ್ಬರ ಸಾವು

ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದ್ದರೂ, ಭವಾನಿ ಮತ್ತು ಸಂಧ್ಯಾರಾಣಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಕೊನೆಗೆ ಇಬ್ಬರೂ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ದುರಂತದಿಂದ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

ಮೃತರ ತಾಯಿ ಇಂದುಮತಿ ಹಾಗೂ ಮತ್ತೊಬ್ಬ ಪುತ್ರಿ ವಿಜಯಶ್ರೀ ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ತೀವ್ರ ನಿಗಾದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಆಹಾರ ವಿಷಕ್ರಿಯೆಯೇ (Food Poisoning) ಕಾರಣ ಎಂದು ಶಂಕೆ ವ್ಯಕ್ತವಾಗಿದೆ. ಮಾವಿನ ಹಣ್ಣು ಅಥವಾ ಇತರ ಆಹಾರದಲ್ಲಿ ಸಮಸ್ಯೆ ಇದ್ದಿರಬಹುದೆಂಬ ಸಾಧ್ಯತೆಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಕುಟುಂಬ ಸದಸ್ಯರು ಸೇವಿಸಿದ ಆಹಾರ ಮತ್ತು ಹಣ್ಣುಗಳ ಮಾದರಿಗಳನ್ನು ಸಂಗ್ರಹಿಸುವ ಸಾಧ್ಯತೆ ಇದೆ.

ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಆಡಳಿತ ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದೆ. ನಿಖರ ಕಾರಣ ತಿಳಿಯಲು ಪ್ರಯೋಗಾಲಯ ವರದಿಗಾಗಿ ಕಾಯಲಾಗುತ್ತಿದೆ.

Exit mobile version