ನವದೆಹಲಿ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಜವಾಬ್ದಾರಿಗಳನ್ನು ವಹಿಸಿಕೊಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ತಮಿಳುನಾಡಿನ ರಾಜಕೀಯದಲ್ಲಿ ಅವರ ಪಾತ್ರವನ್ನು ಮುಂದುವರಿಸುವುದರ ಜೊತೆಗೆ, ಬಿಜೆಪಿಯ ರಾಷ್ಟ್ರೀಯ ಚೌಕಟ್ಟಿನಲ್ಲಿ ಅವರ ಸಂಘಟನಾ ಕೌಶಲ್ಯವನ್ನು ಬಳಸಿಕೊಳ್ಳಲಾಗುವುದು ಎಂದು ಶಾ ತಿಳಿಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ತಮಿಳುನಾಡಿನಲ್ಲಿ ಸರ್ಕಾರ ರಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೆ. ಅಣ್ಣಾಮಲೈ ಅವರು ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ತೋರಿದ ನಾಯಕತ್ವವನ್ನು ಅಮಿತ್ ಶಾ “ಶ್ಲಾಘನೀಯ” ಎಂದು ಬಣ್ಣಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಪಕ್ಷದ ಹೆಜ್ಜೆಗುರುತನ್ನು ವಿಸ್ತರಿಸುವಲ್ಲಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೀತಿಗಳನ್ನು ಜನರಿಗೆ ಮುಟ್ಟಿಸುವಲ್ಲಿ ಅಣ್ಣಾಮಲೈ ಕೆಲಸ ಮಾಡಿದ್ದಾರೆ ಎಂದು ಅಮಿತ್ ಶಾ ಶ್ಲಾಘಿಸಿದ್ದಾರೆ. “ತಮಿಳುನಾಡಿನಲ್ಲಿ ಬಿಜೆಪಿಯ ಬೆಳವಣಿಗೆಗೆ ಅಣ್ಣಾಮಲೈ ಅವರ ಕೊಡುಗೆ ಅಪಾರವಾದುದ್ದು. ಅವರ ಸಾಮರ್ಥ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಬಳಸಿಕೊಳ್ಳಲು ನಾವು ಯೋಜನೆ ರೂಪಿಸುತ್ತಿದ್ದೇವೆ,” ಎಂದು ಅಮಿತ್ ಶಾ ಒಂದು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಏಪ್ರಿಲ್ನಲ್ಲಿ ಅಣ್ಣಾಮಲೈ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿದಾಗ, ನೈನಾರ್ ನಾಗೇಂದ್ರನ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಆ ಸಂದರ್ಭದಲ್ಲಿ ಅಮಿತ್ ಶಾ, ಅಣ್ಣಾಮಲೈ ಅವರ ಕಾರ್ಯವೈಖರಿಯನ್ನು ಮೆಚ್ಚಿಕೊಂಡಿದ್ದರು. “ಅಣ್ಣಾಮಲೈ ಅವರ ಸಂಘಟನಾ ಕೌಶಲ್ಯವು ಬಿಜೆಪಿಯ ರಾಷ್ಟ್ರೀಯ ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸಲಿದೆ,” ಎಂದು ಶಾ ಆಗಲೇ ಸೂಚಿಸಿದ್ದರು.
ಇತ್ತೀಚಿನ ಸಂದರ್ಶನವೊಂದರಲ್ಲಿ, ಅಮಿತ್ ಶಾ ಎನ್ಡಿಎ ಮೈತ್ರಿಕೂಟವು 2026ರಲ್ಲಿ ತಮಿಳುನಾಡಿನಲ್ಲಿ ಸರ್ಕಾರ ರಚಿಸಲಿದೆ ಎಂದು ಪುನರುಚ್ಚರಿಸಿದ್ದಾರೆ. ಬಿಜೆಪಿ ಮತ್ತು ಎಐಎಡಿಎಂಕೆಯ ಸಹಯೋಗದಿಂದ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಸಾಧ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಯು ಎಐಎಡಿಎಂಕೆಯಿಂದ ಆಯ್ಕೆಯಾಗಲಿದ್ದಾರೆ ಎಂದು ಶಾ ತಿಳಿಸಿದ್ದಾರೆ.