ಅಯೋಧ್ಯೆ ರಾಮ ಮಂದಿರದ ಕಾಣಿಕೆ ಮತ್ತು ದೇಣಿಗೆ ದುರುಪಯೋಗ ಪ್ರಕರಣದ ತನಿಖೆ ತೀವ್ರಗೊಂಡಿರುವ ಬೆನ್ನಲ್ಲೇ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಮಾಜಿ ಟ್ರಸ್ಟಿ ಅನಿಲ್ ಮಿಶ್ರಾ ಅವರ ಆಪ್ತರೆಂದು ಹೇಳಲಾಗಿರುವ ಕೆ.ಡಿ. ತಿವಾರಿ ಮತ್ತು ಬಜರಂಗ್ ಪಾಠಕ್ ಅವರನ್ನು ಮಂದಿರ ನಿರ್ವಹಣಾ ವ್ಯವಸ್ಥೆಯಿಂದ ವಜಾಗೊಳಿಸಿ, ರಾಮ ಮಂದಿರ ಸಂಕೀರ್ಣ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದೇ ವೇಳೆ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸಲು ನೂತನ ಸಿಇಒ ನೇಮಕ ಪ್ರಕ್ರಿಯೆಯೂ ಅಂತಿಮ ಹಂತದಲ್ಲಿದೆ.
ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಕಾಣಿಕೆ ಹಾಗೂ ದೇಣಿಗೆ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದ ತನಿಖೆ ಮುಂದುವರಿದಿರುವ ನಡುವೆಯೇ ದೇವಾಲಯದ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳು ನಡೆದಿವೆ. ಮಂದಿರ ನಿರ್ವಹಣೆಯಲ್ಲಿ ಪ್ರಮುಖ ಜವಾಬ್ದಾರಿ ಹೊಂದಿದ್ದ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ.
ರಾಮಲಲ್ಲಾ ವಿಗ್ರಹಕ್ಕೆ ಭಕ್ತರು ಅರ್ಪಿಸುವ ಬೆಲೆಬಾಳುವ ಆಭರಣಗಳು ಮತ್ತು ಚಿನ್ನಾಭರಣಗಳ ಲೆಕ್ಕಪತ್ರ ನಿರ್ವಹಣೆ ನೋಡಿಕೊಳ್ಳುತ್ತಿದ್ದ ಕೆ.ಡಿ. ತಿವಾರಿ ಹಾಗೂ ವಿಐಪಿ ಭಕ್ತರಿಗೆ ಶಾಲು, ಪ್ರಸಾದ ಮತ್ತು ಉಡುಗೊರೆಗಳನ್ನು ವಿತರಿಸುವ ಜವಾಬ್ದಾರಿ ಹೊಂದಿದ್ದ ಬಜರಂಗ್ ಪಾಠಕ್ ಅವರನ್ನು ವಜಾಗೊಳಿಸಲಾಗಿದೆ. ಇಬ್ಬರಿಗೂ ಈ ಹಿಂದೆ ಶೋಕಾಸ್ ನೋಟಿಸ್ ನೀಡಲಾಗಿತ್ತು ಎನ್ನಲಾಗಿದೆ.
ನಂತರ ಅವರನ್ನು ಮಂದಿರದ ನೇರ ನಿರ್ವಹಣೆಯಿಂದ ಬಿಡುಗಡೆಗೊಳಿಸಿ ಬಾಗ್ ಬಿಜಾಸಿಯದಲ್ಲಿರುವ ‘ತೀರ್ಥ ಕ್ಷೇತ್ರ ಪುರಂ’ಗೆ ವರ್ಗಾಯಿಸಲಾಗಿದೆ. ಜೊತೆಗೆ ರಾಮ ಮಂದಿರ ಸಂಕೀರ್ಣಕ್ಕೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.
ಬಜರಂಗ್ ಪಾಠಕ್ ವಿರುದ್ಧ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಪ್ರಸಾದ ನೀಡುವ ವಿಚಾರದಲ್ಲಿ ಅನುಚಿತವಾಗಿ ವರ್ತಿಸಿದ ಆರೋಪವೂ ಕೇಳಿಬಂದಿತ್ತು. ಮಹಿಳಾ ಅಧಿಕಾರಿಯ ದೂರಿನ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
ಇದರ ನಡುವೆ ಉತ್ತರ ಪ್ರದೇಶ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದ ಅಂತಿಮ ವರದಿಯಲ್ಲಿ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಮಾಜಿ ಟ್ರಸ್ಟಿ ಅನಿಲ್ ಮಿಶ್ರಾ ಅವರ ಹೆಸರುಗಳನ್ನು ಆರೋಪಿಗಳ ಪಟ್ಟಿಯಿಂದ ಕೈಬಿಡಲಾಗಿದೆ. ಆದರೆ ಆಡಳಿತಾತ್ಮಕ ಲೋಪಗಳಿಗೆ ಸಂಬಂಧಿಸಿದ ವಿಚಾರಗಳ ಕುರಿತು ಪ್ರತ್ಯೇಕ ತನಿಖೆ ಮುಂದುವರಿದಿದೆ.
ಮಂದಿರದ ನಗದು ಎಣಿಕೆ ಕೊಠಡಿಯಲ್ಲಿ ಕಳ್ಳತನ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಹೊರಗುತ್ತಿಗೆ ನೌಕರರನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆ ಆಡಳಿತಾತ್ಮಕ ಮಟ್ಟದಲ್ಲೂ ಹಲವು ಬದಲಾವಣೆಗಳನ್ನು ಕೈಗೊಳ್ಳಲಾಗುತ್ತಿದೆ.
ಇದೇ ವೇಳೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ನೇಮಕ ಮಾಡುವ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಶೋಧನಾ ಸಮಿತಿ ಈಗಾಗಲೇ 16 ಅಭ್ಯರ್ಥಿಗಳ ಸಂದರ್ಶನ ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ನೂತನ ಸಿಇಒ ನೇಮಕವಾಗುವ ಸಾಧ್ಯತೆಯಿದೆ. ಮಂದಿರದ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ವ್ಯವಸ್ಥಿತ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಈ ಬದಲಾವಣೆಗಳನ್ನು ಕೈಗೊಳ್ಳಲಾಗುತ್ತಿದೆ.
