ಅಯೋಧ್ಯೆ (ಜೂನ್, 21): ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯ ರಾಮಮಂದಿರಕ್ಕೆ ಸಂಬಂಧಿಸಿದ ದೇಣಿಗೆ ನಿರ್ವಹಣೆ ಕುರಿತು ಇದೀಗ ವಿವಾದಯೊಂದು ಸೃಷ್ಟಿಯಾಗಿದೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ದೇಣಿಗೆ ಸಂಗ್ರಹ ಮತ್ತು ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದೆ.
ರಾಮಮಂದಿರ ದೇಣಿಗೆ ನಿರ್ವಹಣೆಯಲ್ಲಿ ಅಕ್ರಮ ಆರೋಪ
SIT ತನಿಖೆ ಚುರುಕು, ಹಲವರ ವಿಚಾರಣೆ
ಬ್ಯಾಂಕ್ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ
ಟ್ರಸ್ಟ್ಗೆ ಸಂಬಂಧಿಸಿದ ಕೆಲ ವ್ಯಕ್ತಿಗಳ ವಿರುದ್ಧ ಅನುಮಾನ
ಈ ಅಕ್ರಮ ಆರೋಪಗಳ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ ಮದ್ಯಪ್ರವೇಶಿಸಿದ್ದು, SIT ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಭಕ್ತರು ರಾಮಮಂದಿರಕ್ಕೆ ದೇಣಿಗೆಯಾಗಿ ನೀಡಿದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ನಿರ್ವಹಣೆಯಲ್ಲಿ ಗಂಭೀರ ಅಕ್ರಮಗಳು ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಕೆಲವು ವರದಿಗಳ ಪ್ರಕಾರ, ಮೂಲ ಆಭರಣಗಳ ಬದಲಿಗೆ ನಕಲಿ ಆಭರಣಗಳನ್ನು ಇರಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಇದರೊಂದಿಗೆ ದೇಣಿಗೆಯಾಗಿ ಬಂದ ನಗದು ಹಣದ ಲೆಕ್ಕಪತ್ರಗಳ ಬಗ್ಗೆಯೂ ಪ್ರಶ್ನೆಗಳು ಉದ್ಭವಿಸಿವೆ.
ತನಿಖೆಯ ಭಾಗವಾಗಿ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿಯ ಆಪ್ತ ವ್ಯಕ್ತಿಯಾಗಿರುವ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನುವನ್ನು SIT ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎನ್ನಲಾಗಿದೆ. ಅಲ್ಲದೆ, ದೇಣಿಗೆ ಹಣ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದ ಕೆಲ ಸಿಬ್ಬಂದಿಗಳ ಪಾತ್ರದ ಬಗ್ಗೆಯೂ ತನಿಖಾಧಿಕಾರಿಗಳು ಮಾಹಿತಿ ಕಳೆಹಾಕುತ್ತಿದ್ದಾರೆ.
ಮೂಲಗಳ ಪ್ರಕಾರ, ದೇಣಿಗೆ ಹಣದ ನಿರ್ವಹಣೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಪಾತ್ರವೂ ಇರಬಹುದೇ ಎಂಬ ಅನುಮಾನವನ್ನು ಕೂಡಾ SIT ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಹಣದ ವರ್ಗಾವಣೆ, ದಾಖಲೆ ನಿರ್ವಹಣೆ ಹಾಗೂ ಲೆಕ್ಕಪತ್ರಗಳ ಪರಿಶೀಲನೆಗೆ ಸಂಬಂಧಿಸಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಆದಾಗ್ಯೂ, ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗಬೇಕಿದೆ. ಸಂಬಂಧಿತ ಅಧಿಕಾರಿಗಳು ಹಾಗೂ ಟ್ರಸ್ಟ್ ಪ್ರತಿನಿಧಿಗಳಿಂದಲೂ ಸ್ಪಷ್ಟನೆ ಪಡೆಯುವ ಕಾರ್ಯ ಮುಂದುವರಿದಿದೆ. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಂಶ ಬಹಿರಂಗವಾಗುವ ನಿರೀಕ್ಷೆಯಿದ್ದು, ಯಾವುದೇ ಅಕ್ರಮ ದೃಢಪಟ್ಟಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತನಿಖಾ ಮೂಲಗಳು ತಿಳಿಸಿವೆ. ಮಾಹಿತಿ ಪ್ರಕಾರ, SIT ತನಿಖಾ ತಂಡವು ಸೋಮವಾರದಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ತನಿಖಾ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಇನ್ನು ತನಿಖಾ ತಂಡದ ವಿಚಾರಣೆಗೆ ಒಳಪಟ್ಟಿರುವ ಯಾವುದೇ ವ್ಯಕ್ತಿಗಳು ಮುಂದಿನ ಆದೇಶ ಬರುವ ವರೆಗೆ ನಗರವನ್ನು ಬಿಟ್ಟು ಹೋಗದಂತೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ. ಈ ಬೆಳವಣಿಗೆ ದೇಶದಾದ್ಯಂತ ಭಕ್ತರ ಗಮನ ಸೆಳೆದಿದ್ದು, ದೇಣಿಗೆ ನಿರ್ವಹಣೆಯಲ್ಲಿ ಪಾರದರ್ಶಕತೆ, ಸಮರ್ಥ ನಿರ್ವಹಣೆ ಮತ್ತು ನಂಬಿಕೆಗಳ ಅಗತ್ಯತೆಗಳನ್ನು ಮತ್ತೊಮ್ಮೆ ಚರ್ಚೆಗೆ ತಂದಿದೆ.





