ಭುವನೇಶ್ವರ: ಒಡಿಶಾದ ಬಾಲಸೋರ್ನ ಕಾಲೇಜೊಂದರಲ್ಲಿ ಲೈಂಗಿಕ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಪ್ರಾಂಶುಪಾಲರ ಕೊಠಡಿ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ವಿಭಾಗದ ಮುಖ್ಯಸ್ಥ (HOD) ಸಮೀರ್ ಕುಮಾರ್ ಸಾಹೋ ಲೈಂಗಿಕತೆಗೆ ಸಹಕರಿಸುವಂತೆ ನಿರಂತರವಾಗಿ ಕಿರುಕುಳ ನೀಡಿದ್ದು, ಒಪ್ಪದಿದ್ದರೆ ಭವಿಷ್ಯವನ್ನು ಹಾಳುಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯು ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ. ಇದರಿಂದ ನೊಂದಿದ್ದ ಆಕೆ, ಕಾಲೇಜು ಆವರಣದಲ್ಲಿ ಬೆಂಕಿ ಹಚ್ಚಿಕೊಂಡಿದ್ದಾಳೆ. ಆಕೆಗೆ ಶೇ.95 ಸುಟ್ಟ ಗಾಯಗಳಾಗಿದ್ದು, ಆಕೆಯನ್ನು ಉಳಿಸಲು ಯತ್ನಿಸಿದ ಮತ್ತೊಬ್ಬ ವಿದ್ಯಾರ್ಥಿನಿಗೆ ಶೇ.70 ಸುಟ್ಟ ಗಾಯಗಳಾಗಿವೆ. ಇಬ್ಬರೂ ಭುವನೇಶ್ವರದ ಏಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಡಿಶಾ ಪೊಲೀಸರು ಆರೋಪಿ ಸಮೀರ್ ಕುಮಾರ್ ಸಾಹೋ ಮತ್ತು ಕ್ರಮ ಕೈಗೊಳ್ಳದಿರುವ ಪ್ರಾಂಶುಪಾಲ ದೀಲಿಪ್ ಕುಮಾರ್ ಘೋಷ್ ಇಬ್ಬರನ್ನೂ ಬಂಧಿಸಿದ್ದಾರೆ. ಒಡಿಶಾದ ಉನ್ನತ ಶಿಕ್ಷಣ ಇಲಾಖೆಯು ಪ್ರಾಂಶುಪಾಲರನ್ನು ಅಮಾನತುಗೊಳಿಸಿದ್ದು, ರಾಜ್ಯದ ಉನ್ನತ ಶಿಕ್ಷಣ ಸಚಿವ ಸೂರ್ಯಬಂಶಿ ಸೂರಜ್ ಕಠಿಣ ಕ್ರಮಕ್ಕೆ ಭರವಸೆ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.