ತಮಿಳುನಾಡು: ಉತ್ತರ ಚೆನ್ನೈನ ಎನ್ನೋರ್ನಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ, ಉಷ್ಣ ವಿದ್ಯುತ್ ಸ್ಥಾವರದ ನಿರ್ಮಾಣ ಸ್ಥಳದಲ್ಲಿ ಕಮಾನು ಕುಸಿದು ಒಂಬತ್ತು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ದುರಂತ ಮಂಗಳವಾರ ನಡೆದಿದ್ದು, ಐದು ಮಂದಿ ಗಾಯಗೊಂಡಿದ್ದಾರೆ. ಒಬ್ಬ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಗಾಯಾಳುಗಳನ್ನು ತಕ್ಷಣವೇ ಉತ್ತರ ಚೆನ್ನೈನ ಸ್ಮಾನಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತ ಸಂಭವಿಸಿದ ಸ್ಥಳವು ತಮಿಳುನಾಡು ಉತ್ಪಾದನೆ ಮತ್ತು ವಿತರಣಾ ನಿಗಮ ಲಿಮಿಟೆಡ್ (TANGEDCO) ಒಡೆತನದ ಉಷ್ಣ ವಿದ್ಯುತ್ ಸ್ಥಾವರದ ನಿರ್ಮಾಣ ಸ್ಥಳವಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 30 ಅಡಿ ಎತ್ತರದಿಂದ ನಿರ್ಮಾಣವಾಗುತ್ತಿದ್ದ ಕಮಾನು ಏಕಾಏಕಿ ಕುಸಿದಿದ್ದು, ಈ ವೇಳೆ ಹಲವಾರು ವಲಸೆ ಕಾರ್ಮಿಕರು ಒಳಗೆ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಆರಂಭಿಸಲಾಯಿತು. ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (NDRF) ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಸಿಲುಕಿಕೊಂಡವರನ್ನು ರಕ್ಷಿಸುವ ಪ್ರಯತ್ನ ನಡೆಸಿದೆ.
ತಮಿಳುನಾಡು ವಿದ್ಯುತ್ ಮಂಡಳಿಯ ಕಾರ್ಯದರ್ಶಿ ಮತ್ತು TANGEDCO ಅಧ್ಯಕ್ಷರಾದ ಡಾ. ಜೆ. ರಾಧಾಕೃಷ್ಣನ್ ಅವರು ಘಟನೆಯ ಸ್ಥಳಕ್ಕೆ ಭೇಟಿ ನೀಡಿ, ಗಾಯಾಳುಗಳ ಚಿಕಿತ್ಸೆಯ ಸ್ಥಿತಿಯನ್ನು ವೀಕ್ಷಿಸಿದರು. ಸ್ಮಾನಿ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿಯಾದ ಅವರು, ಆಸ್ಪತ್ರೆಯ ವೈದ್ಯರೊಂದಿಗೆ ಚರ್ಚಿಸಿ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಈ ಘಟನೆಯಿಂದ ಕಾರ್ಮಿಕರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡುವ ಭರವಸೆಯನ್ನು ಡಾ. ರಾಧಾಕೃಷ್ಣನ್ ನೀಡಿದ್ದಾರೆ.





