ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ: 14 ನಕ್ಸಲರು ಎನ್‌ಕೌಂಟರ್‌ನಲ್ಲಿ ಹತ್ಯೆ

Untitled design 2026 01 03T134917.497

ಛತ್ತೀಸ್‌ಗಢ: ರಾಜ್ಯದ ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 14 ನಕ್ಸಲರು ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಶನಿವಾರ (ಜನವರಿ 3) ಬೆಳಿಗ್ಗೆ ಸುಕ್ಕಾ ಮತ್ತು ಬಿಜಾಪುರ ಜಿಲ್ಲೆಗಳ ಅರಣ್ಯ ಪ್ರದೇಶಗಳಲ್ಲಿ ನಡೆದಿದೆ.

ಭದ್ರತಾ ಪಡೆಗಳ ಅಧಿಕಾರಿಗಳ ಪ್ರಕಾರ, ಸುಕ್ಕಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಸಾವನ್ನಪ್ಪಿದ್ದು, ನೆರೆಯ ಬಿಜಾಪುರ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳಗಳಿಂದ ಹೆಚ್ಚಿನ ಪ್ರಮಾಣದ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ನಕ್ಸಲ್ ಬಳಕೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸುಕ್ಕಾ ಜಿಲ್ಲೆಯಲ್ಲಿ ಎನ್‌ಕೌಂಟರ್

ಸುಕ್ಕಾ ಜಿಲ್ಲೆಯ ದಕ್ಷಿಣ ಭಾಗದ ದಟ್ಟ ಕಾಡು ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ನಕ್ಸಲ್‌ಗಳ ಅಡಗುದಾಣಗಳ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿ, ಭದ್ರತಾ ಪಡೆಗಳು ವಿಶೇಷ ಕಾರ್ಯಾಚರಣೆಗೆ ಮುಂದಾಗಿದ್ದವು. ಈ ವೇಳೆ ನಕ್ಸಲರು ಗುಂಡಿನ ದಾಳಿ ನಡೆಸಿದಾಗ, ಭದ್ರತಾ ಪಡೆಗಳು  ಪ್ರತಿದಾಳಿ ನಡೆಸಿದ್ದು, 12 ಕ್ಕೂ ಹೆಚ್ಚು ನಕ್ಸಲರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಇಲ್ಲಿಯವರೆಗೆ 12 ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಸಂಪೂರ್ಣ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಚುರುಕುಗೊಂಡಿದೆ. ಹೆಚ್ಚಿನ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದು” ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜಾಪುರದಲ್ಲಿ ಕಾರ್ಯಾಚರಣೆ

ಇನ್ನೊಂದೆಡೆ, ಬಿಜಾಪುರ ಜಿಲ್ಲೆಯ ದಕ್ಷಿಣ ಅರಣ್ಯ ಪ್ರದೇಶದಲ್ಲಿಯೂ ಶನಿವಾರ ಬೆಳಿಗ್ಗೆ ಸುಮಾರು 5 ಗಂಟೆ ಸುಮಾರಿಗೆ ಮತ್ತೊಂದು ಎನ್‌ಕೌಂಟರ್ ನಡೆದಿದೆ. ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಪಡೆ (DRG) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿದಾಳಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.

ಸ್ಥಳದಿಂದ ನಕ್ಸಲರ ಮೃತದೇಹಗಳ ಜೊತೆಗೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡಿನ ದಾಳಿ ಮುಂದುವರೆದಿರುವ ಸಾಧ್ಯತೆ ಇದ್ದು, ಭದ್ರತಾ ಪಡೆಗಳು ಸಂಪೂರ್ಣ ಪ್ರದೇಶವನ್ನು ವಶಕ್ಕೆ ತೆಗೆದುಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು

ಈ ಕಾರ್ಯಾಚರಣೆಯನ್ನು ಛತ್ತೀಸ್‌ಗಢದಲ್ಲಿ ಇತ್ತೀಚಿನ ದಿನಗಳಲ್ಲಿನ ಅತಿದೊಡ್ಡ ನಕ್ಸಲ್ ವಿರೋಧಿ ಯಶಸ್ಸು ಎಂದು ಪರಿಗಣಿಸಲಾಗುತ್ತಿದೆ. ಬಸ್ತಾರ್ ವಲಯದಲ್ಲಿ ನಕ್ಸಲರ ಪ್ರಭಾವವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿವೆ.

ಮುಂದುವರೆದ ಶೋಧ ಕಾರ್ಯ

ಎನ್‌ಕೌಂಟರ್ ನಡೆದ ಎರಡೂ ಜಿಲ್ಲೆಗಳ ಅರಣ್ಯ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಇನ್ನೂ ಶೋಧ ಕಾರ್ಯ ಮುಂದುವರೆಸಿದ್ದು, ಯಾವುದೇ ನಕ್ಸಲರು ತಪ್ಪಿಸಿಕೊಳ್ಳದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾದಂತೆ ಅಧಿಕೃತವಾಗಿ ಪ್ರಕಟಿಸಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.

Exit mobile version