ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ

ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತಾನು ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆದುಕೊಂಡಿರುವುದಾಗಿ ಮಂಗಳವಾರ ಸುಪ್ರೀಂ ಕೋರ್ಟ್‌‌ಗೆ ತಿಳಿಸಿದೆ. ಕೇಂದ್ರ ಸರ್ಕಾರವು ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪಕ್ಷದ ವಕ್ತಾರರು ನ್ಯಾಯಪೀಠಕ್ಕೆ ವಿವರಿಸಿದರು.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲಾ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆ ನಡೆಯಿತು. ಈ ವೇಳೆ ಸಿಜೆಪಿ ಪರ ವಕ್ತಾರ ಸೌರವ್ ದಾಸ್ ಅವರು ಪಕ್ಷದ ಅಧಿಕೃತ ಹೇಳಿಕೆಯನ್ನು ನ್ಯಾಯಾಲಯದಲ್ಲಿ ಓದಿ, ಸೆಪ್ಟೆಂಬರ್ 5ರ ಮೆರವಣಿಗೆಯನ್ನು ಹಿಂಪಡೆದಿರುವುದನ್ನು ಸ್ಪಷ್ಟಪಡಿಸಿದರು.

ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಜುಲೈನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಮತ್ತು ಇತರ ಪ್ರತಿಭಟನಾಕಾರರ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದರೂ, ಅದನ್ನು ಈಡೇರಿಸಿಲ್ಲ ಎಂದು ಸಿಜೆಪಿ ಈ ಹಿಂದೆ ಆರೋಪಿಸಿತ್ತು. ಇದೇ ಕಾರಣಕ್ಕೆ ಸೆಪ್ಟೆಂಬರ್ 5ರಂದು ‘ದೆಹಲಿ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ಪಕ್ಷ ಕರೆ ನೀಡಿತ್ತು.

ಆದರೆ, ಇದೀಗ ಕೇಂದ್ರ ಸರ್ಕಾರ ಪ್ರಕರಣಗಳನ್ನು ಹಿಂಪಡೆಯಲು ಒಪ್ಪಿಕೊಂಡಿರುವುದಾಗಿ ಸಿಜೆಪಿ ತಿಳಿಸಿದ್ದು, ಅದರ ಬೆನ್ನಲ್ಲೇ ಪ್ರತಿಭಟನಾ ಕಾರ್ಯಕ್ರಮವನ್ನು ಕೈಬಿಟ್ಟಿದೆ.

ವಿಚಾರಣೆ ವೇಳೆ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಮಾತುಕತೆಗಳ ಕುರಿತು ನ್ಯಾಯಪೀಠಕ್ಕೆ ಮಾಹಿತಿ ನೀಡಿದ ಅವರು, ಈ ವಿಚಾರಕ್ಕೆ ಸಂಬಂಧಿಸಿದಂತೆ ಐದು ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದರು.

ದೆಹಲಿ ಪೊಲೀಸರ ಪರವಾಗಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಅಪರಾಧ ಹಿನ್ನೆಲೆ ಹೊಂದಿರುವ 2,873 ವ್ಯಕ್ತಿಗಳ ವಿವರಗಳನ್ನು ಉಲ್ಲೇಖಿಸಲಾಗಿದೆ. ಇಂತಹ ವ್ಯಕ್ತಿಗಳ ವಿರುದ್ಧ ಅಗತ್ಯವಿದ್ದರೆ ಹೊಸದಾಗಿ ಎಫ್‌ಐಆರ್ ದಾಖಲಿಸಲಾಗುವುದು ಎಂದು ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು. ಇದೇ ವಿಚಾರಕ್ಕೆ ಸಂಬಂಧಿಸಿ ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳೂ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿರುವುದಾಗಿ ಅವರು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಮೃತಪಟ್ಟ NEET ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರವೂ ನ್ಯಾಯಾಲಯದಲ್ಲಿ ಪ್ರಸ್ತಾಪವಾಯಿತು. ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರದ ಪರ ವಕೀಲರು ತಿಳಿಸಿದರು. ಆದರೆ, ಪರಿಹಾರದ ಮೊತ್ತ, ನಿಯಮಗಳು ಮತ್ತು ಅದನ್ನು ನೀಡುವ ಪ್ರಕ್ರಿಯೆ ಕುರಿತು ಇನ್ನಷ್ಟು ಚರ್ಚೆ ಅಗತ್ಯವಿದೆ ಎಂದು ಸ್ಪಷ್ಟಪಡಿಸಿದರು.

ಸೆಪ್ಟೆಂಬರ್ 5ರಂದು ನಡೆಯಬೇಕಿದ್ದ ಮೆರವಣಿಗೆಗೆ ಸಂಬಂಧಿಸಿದಂತೆ ದೆಹಲಿಯ ನಿವೃತ್ತ ಪೊಲೀಸ್ ಅಧಿಕಾರಿ ರಾಜೇಂದ್ರ ಸಿಂಗ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರತಿಭಟನೆಗೆ ನಿರ್ಬಂಧ ವಿಧಿಸುವಂತೆ ಅವರು ಮನವಿ ಮಾಡಿದ್ದರು. ಸೂಕ್ಷ್ಮ ಪ್ರದೇಶಗಳಲ್ಲಿ ಬೃಹತ್ ಪ್ರತಿಭಟನೆಗಳನ್ನು ನಡೆಸಲು ಮುಂಚಿತವಾಗಿ ಪೊಲೀಸ್ ಅನುಮತಿ ಕಡ್ಡಾಯಗೊಳಿಸಬೇಕು ಎಂಬ ಬೇಡಿಕೆಯನ್ನೂ ಅವರು ಮುಂದಿಟ್ಟಿದ್ದರು.

ಇದರ ಜೊತೆಗೆ, ಸೆಪ್ಟೆಂಬರ್ 12 ಮತ್ತು 13ರಂದು ದೆಹಲಿಯಲ್ಲಿ BRICS ಶೃಂಗಸಭೆ ನಡೆಯಲಿರುವ ಹಿನ್ನೆಲೆ ಸೆಪ್ಟೆಂಬರ್ 5ರ ಮೆರವಣಿಗೆಯಿಂದ ಭದ್ರತಾ ಸಮಸ್ಯೆಗಳು ಉಂಟಾಗುವ ಸಾಧ್ಯತೆಯಿದೆ ಎಂದು ಅರ್ಜಿದಾರರ ಪರ ವಕೀಲ ರಿಜಾನ್ ಅಹ್ಮದ್ ವಾದಿಸಿದ್ದರು. ಈ ಹಿನ್ನೆಲೆ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಮನವಿ ಮಾಡಲಾಗಿತ್ತು.

ಆದರೆ, ಸೋಮವಾರ ಸುಪ್ರೀಂ ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿತ್ತು. ಪ್ರತಿಭಟನೆಯಿಂದ ಅಹಿತಕರ ಘಟನೆಗಳು ಸಂಭವಿಸುತ್ತವೆ ಎಂದು ಊಹಿಸಲು ಯಾವುದೇ ಬಲವಾದ ಕಾರಣಗಳಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಅಲ್ಲದೆ, ಪ್ರತಿಭಟನೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಹಾಗೂ ಪೊಲೀಸರ ಜವಾಬ್ದಾರಿ ಎಂದು ಸ್ಪಷ್ಟಪಡಿಸಿತ್ತು.

Exit mobile version