ಜಮ್ಮು-ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಭೂಕುಸಿತಗಳು ಭಾರೀ ಅನಾಹುತಕ್ಕೆ ಕಾರಣವಾಗಿದ್ದು, ರಾಜ್ಯದ ಹಲವು ಜಿಲ್ಲೆಗಳು ಪ್ರವಾಹದ ಅಬ್ಬರಕ್ಕೆ ತತ್ತರಿಸಿವೆ. ಪೂಂಚ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ದುರ್ಘಟನೆಯೊಂದಿಗೆ ಮಳೆ ಸಂಬಂಧಿತ ಸಾವಿನ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.
ಪೂಂಚ್ ಜಿಲ್ಲೆಯ ಲೋರನ್ ದುಮಿಲಾನ್ ಗ್ರಾಮದಲ್ಲಿ ಬೆಟ್ಟದ ಮೇಲ್ಭಾಗದಲ್ಲಿದ್ದ ಮಣ್ಣಿನ ಮನೆಯ ಮೇಲೆ ಭೂಕುಸಿತ ಸಂಭವಿಸಿದೆ. ಘಟನೆ ವೇಳೆ ಮನೆಯೊಳಗಿದ್ದ ಏಳು ಮಂದಿ ಮಣ್ಣಿನಡಿ ಸಿಲುಕಿದ್ದು, ಸ್ಥಳೀಯರು, ಪೊಲೀಸರು ಹಾಗೂ ನಾಗರಿಕ ಆಡಳಿತದ ಸಿಬ್ಬಂದಿ ದಿನವಿಡೀ ನಡೆಸಿದ ಕಾರ್ಯಾಚರಣೆಯ ಬಳಿಕ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತಪಟ್ಟವರಲ್ಲಿ ಜಾಹಿದಾ ಬೇಗಂ, ಅವರ ಇಬ್ಬರು ಮಕ್ಕಳು, ಸಂಬಂಧಿಕರು ಹಾಗೂ ಕುಟುಂಬದ ಇತರ ಸದಸ್ಯರು ಸೇರಿದ್ದಾರೆ. ಮೃತರೆಲ್ಲರೂ ಮಂಡಿ ತಹಸೀಲಿನ ಅರಿಗಾಂ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ, ರಾಜೌರಿ ಜಿಲ್ಲೆಯಲ್ಲೂ ಪ್ರವಾಹದಿಂದ ಭಾರೀ ಹಾನಿಯಾಗಿದೆ. ಸುರಾನ್ ನದಿಯ ಪ್ರವಾಹಕ್ಕೆ ಮನೆವೊಂದು ಕೊಚ್ಚಿಹೋಗಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದರು. ಕಳೆದ ಎರಡು ದಿನಗಳ ಮಳೆಯಿಂದ ರಾಜೌರಿ ಮತ್ತು ಪೂಂಚ್ ಜಿಲ್ಲೆಗಳಲ್ಲಿ ಅನೇಕ ಮನೆಗಳು ಧ್ವಂಸವಾಗಿದ್ದು, ರಸ್ತೆ ಸಂಪರ್ಕ, ವಿದ್ಯುತ್ ಹಾಗೂ ದೂರಸಂಪರ್ಕ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಂತ್ರಸ್ತರಿಗೆ ಆಹಾರ ಮತ್ತು ಅಗತ್ಯ ವಸ್ತುಗಳನ್ನು ತಲುಪಿಸುವ ಕಾರ್ಯ ಮುಂದುವರಿದಿದೆ.
ಡೋಡಾ ಜಿಲ್ಲೆಯಲ್ಲೂ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜಮ್ಮು–ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ರಗ್ಗಿ ನಲ್ಲಾ ಬಳಿ ಬೆಟ್ಟದಿಂದ ಉರುಳಿದ ಬಂಡೆ ಬಸ್ಗೆ ಅಪ್ಪಳಿಸಿದ ಪರಿಣಾಮ ಒಬ್ಬ ಪ್ರಯಾಣಿಕ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಮನೆಯ ಮೇಲೆ ಬಂಡೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ರಾಜೌರಿ ಪಟ್ಟಣದ ಬೇಲಾ ಕಾಲೋನಿಯಲ್ಲಿ ದರ್ಹಾಲಿ ನದಿಯ ಪ್ರವಾಹಕ್ಕೆ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸುಮಾರು 30 ವಾಹನಗಳು ಕೊಚ್ಚಿಹೋಗಿವೆ. ಅನೇಕ ಮನೆಗಳು, ಅಂಗಡಿಗಳು ಹಾಗೂ ಕೃಷಿಭೂಮಿಗೂ ಹಾನಿಯಾಗಿದೆ. ಸುರನ್ಕೋಟೆ, ದರ್ಹಾಲ್, ಥಾನಮಂಡಿ, ಮಂಜಕೋಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮೊಬೈಲ್ ಟವರ್ಗಳು, ಆಪ್ಟಿಕಲ್ ಫೈಬರ್ ಕೇಬಲ್ಗಳು ಮತ್ತು ವಿದ್ಯುತ್ ಕಂಬಗಳು ಹಾನಿಗೊಳಗಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಭಾರತೀಯ ಹವಾಮಾನ ಇಲಾಖೆ ಜುಲೈ 25ರವರೆಗೆ ಭಾರೀ ಮಳೆ ಹಾಗೂ ಕೆಲವೆಡೆ ಮೇಘಸ್ಫೋಟ ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ನದಿ ತೀರ ಹಾಗೂ ತಗ್ಗು ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದ್ದು, ಅನಗತ್ಯವಾಗಿ ಅಪಾಯದ ಪ್ರದೇಶಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಪಹಲ್ಗಾಮ್ ಮತ್ತು ಬಾಲ್ತಾಲ್ ಮಾರ್ಗಗಳಿಂದ ನಡೆಯುತ್ತಿದ್ದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾತ್ರಾರ್ಥಿಗಳು ಸಮೀಪದ ಶಿಬಿರಗಳಲ್ಲಿ ಉಳಿದುಕೊಂಡು ಆಡಳಿತದ ಸೂಚನೆ ಪಾಲಿಸುವಂತೆ ಮನವಿ ಮಾಡಲಾಗಿದೆ.
ರಾಜ್ಯದ ಗಂಭೀರ ಪರಿಸ್ಥಿತಿಯನ್ನು ಗಮನಿಸಿದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ತಮ್ಮ ದೆಹಲಿ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಜಮ್ಮುವಿಗೆ ಮರಳಿದ್ದಾರೆ. ಪರಿಸ್ಥಿತಿಯ ಮೇಲೆ ನೇರ ನಿಗಾ ವಹಿಸುವುದಾಗಿ ಅವರು ತಿಳಿಸಿದ್ದಾರೆ. ಇದೇ ವೇಳೆ, ಬಿಜೆಪಿ ನಿಯೋಗವೂ ಪ್ರವಾಹಪೀಡಿತ ರಾಜೌರಿ ಹಾಗೂ ಪೂಂಚ್ ಜಿಲ್ಲೆಗಳಿಗೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿದೆ.
