ದೆಹಲಿ ಹೈಕೋರ್ಟ್ ಸೇರಿ 5 ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆ

Untitled design (33)

ನವದೆಹಲಿ  ಆಗಸ್ಟ್ 14: ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನ ಬಾಕಿಯಿರುವಾಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇದು ಆತಂಕದ ವಾತಾವರಣ ಸೃಷ್ಟಿಸಿವೆ. ಇಂದು ಶುಕ್ರವಾರ ದೆಹಲಿ ಹೈಕೋರ್ಟ್ ಸೇರಿದಂತೆ ಜಾಮ್‌ನಗರ ಹೌಸ್, ಝಂಡೆವಾಲನ್ ಕಟ್ಟಡ, ಎಂ.ಬಿ. ರಸ್ತೆ ಸಾಕೇತ್ ಕಚೇರಿ, ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್–3 ಹಾಗೂ ದೆಹಲಿ ಕಂಟೋನ್ಮೆಂಟ್‌ನ ಎಸ್‌ಡಿಎಂ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶಗಳು ಮತ್ತು ಕರೆಗಳು ಬಂದಿವೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ದೆಹಲಿ ಹೈಕೋರ್ಟ್‌ಗೆ ಇ-ಮೇಲ್ ಮೂಲಕ “Bomb Blast at Delhi High Court @ 2:11 PM” ಎಂಬ ಶೀರ್ಷಿಕೆಯ ಬೆದರಿಕೆ ಸಂದೇಶ ಬಂದಿದೆ. ಅದರಲ್ಲಿ ಆಗಸ್ಟ್ 15ರಂದು ಮಧ್ಯಾಹ್ನ 2.11ಕ್ಕೆ ಹೈಕೋರ್ಟ್‌ನಲ್ಲಿ ಹಾಗೂ 3.11ಕ್ಕೆ ದೆಹಲಿಯ ಜಿಲ್ಲಾ ನ್ಯಾಯಾಲಯಗಳಲ್ಲಿ ಸ್ಫೋಟ ಸಂಭವಿಸಲಿದೆ ಎಂದು ಉಲ್ಲೇಖಿಸಲಾಗಿತ್ತು. ಈ ಮಾಹಿತಿ ದೊರೆಯುತ್ತಿದ್ದಂತೆ ಭದ್ರತಾ ಸಂಸ್ಥೆಗಳು ತಕ್ಷಣ ಕಾರ್ಯಪ್ರವೃತ್ತವಾಗಿ ಹೈಕೋರ್ಟ್ ಆವರಣದ ಸಂಪೂರ್ಣ ಪರಿಶೀಲನೆ ನಡೆಸಿವೆ ಎಂದು ತಿಳಿದು ಬಂದಿದೆ.

ಇನ್ನೊಂದೆಡೆ, ಉಳಿದ ಐದು ಸ್ಥಳಗಳಿಗೆ ಬೆಳಿಗ್ಗೆ 11.18ರಿಂದ 11.40ರ ನಡುವೆ ದೂರವಾಣಿ ಕರೆಗಳ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಮಾಹಿತಿ ಪಡೆದ ತಕ್ಷಣ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಸಿಬ್ಬಂದಿಯನ್ನು ಸ್ಥಳಗಳಿಗೆ ರವಾನಿಸಿ ತೀವ್ರ ತಪಾಸಣೆ ನಡೆಸಲಾಗಿದೆ. ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಜಂಟಿ ಕಾರ್ಯದರ್ಶಿ ಕುನಾಲ್ ಮಲ್ಹೋತ್ರಾ, ಈ ಬೆದರಿಕೆ ನಕಲಿಯಾಗಿರುವ ಸಾಧ್ಯತೆ ಇದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಭದ್ರತಾ ಪ್ರೋಟೋಕಾಲ್‌ಗಳನ್ನು ಪಾಲಿಸಲಾಗಿದೆ ಎಂದು ತಿಳಿಸಿದ್ದಾರೆ. ನ್ಯಾಯಾಲಯದ ಕಲಾಪಗಳು ಎಂದಿನಂತೆ ನಡೆದಿದ್ದು, ಸಾರ್ವಜನಿಕರಿಗೆ ಅನಗತ್ಯ ಆತಂಕ ಬೇಡ ಎಂದು ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಈಗಾಗಲೇ ಹೈ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 15 ರಂದು ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿರುವುದರಿಂದ ನಗರಾದ್ಯಂತ ಭದ್ರತೆ ಮತ್ತಷ್ಟು ಬಿಗಿಗೊಳಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ವಾಹನ ತಪಾಸಣೆ, ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸ್ ನಿಯೋಜನೆ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ನಿರಂತರ ನಿಗಾ ವ್ಯವಸ್ಥೆ ಜಾರಿಯಲ್ಲಿದೆ.

ಗಮನಾರ್ಹ ಸಂಗತಿಯೆಂದರೆ, ಇತ್ತೀಚಿನ ದಿನಗಳಲ್ಲಿ ದೆಹಲಿಯಲ್ಲಿ ಇಂತಹ ಬೆದರಿಕೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಆಗಸ್ಟ್ 3 ರಂದು ದೆಹಲಿ ಮೇಯರ್ ಕಚೇರಿ ಹಾಗೂ ಹಲವು ಶಾಲೆಗಳಿಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದರೂ, ಆಗಲೂ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿರಲಿಲ್ಲ. ಸದ್ಯದ ಘಟನೆಯ ಬಗ್ಗೆಯೂ ಪೊಲೀಸರು ಸೈಬರ್ ಮೂಲವನ್ನು ಪತ್ತೆಹಚ್ಚುವ ತನಿಖೆ ಮುಂದುವರಿಸಿದ್ದಾರೆ.

Exit mobile version