ನವದೆಹಲಿ, ಆ.24: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಹಲವು ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ಇದರ ಪರಿಣಾಮ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ವಿಮಾನ ಕಾರ್ಯಾಚರಣೆಗೆ ಅಡಚಣೆ ಎದುರಾಗಿದೆ.
ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ 250ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬವಾಗಿದೆ. ಜೊತೆಗೆ, ದೆಹಲಿಗೆ ಆಗಮಿಸಬೇಕಿದ್ದ ಹಾಗೂ ಇಲ್ಲಿಂದ ನಿರ್ಗಮಿಸಬೇಕಿದ್ದ 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಮಾರ್ಗ ಬದಲಾಯಿಸಲಾದ ವಿಮಾನಗಳಲ್ಲಿ ಮೂರು ಅಂತಾರಾಷ್ಟ್ರೀಯ ವಿಮಾನಗಳೂ ಸೇರಿವೆ.
ಮಾರ್ಗ ಬದಲಾಯಿಸಲಾದ 15 ವಿಮಾನಗಳ ಪೈಕಿ 12 ವಿಮಾನಗಳನ್ನು ಜೈಪುರಕ್ಕೆ, ಎರಡು ವಿಮಾನಗಳನ್ನು ಚಂಡೀಗಢಕ್ಕೆ ಹಾಗೂ ಒಂದು ವಿಮಾನವನ್ನು ಲಖನೌಗೆ ಕಳುಹಿಸಲಾಗಿದೆ. ನಿರಂತರ ಮಳೆ ಮತ್ತು ಗಾಳಿಯ ವೇಗ ಹೆಚ್ಚಿರುವುದರಿಂದ ವಿಮಾನ ಕಾರ್ಯಾಚರಣೆ ಸಹಜ ಸ್ಥಿತಿಗೆ ಮರಳಲು ಸಮಯ ಬೇಕಾಗುವ ಸಾಧ್ಯತೆಯಿದೆ.
ಈ ನಡುವೆ ಭಾರತೀಯ ಹವಾಮಾನ ಇಲಾಖೆ (IMD) ದೆಹಲಿ-ಎನ್ಸಿಆರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇನ್ನಷ್ಟು ಮಳೆಯಾಗುವ ಮುನ್ಸೂಚನೆ ನೀಡಿದೆ. ಉತ್ತರಾಖಂಡ, ಒಡಿಶಾ ಮತ್ತು ತೆಲಂಗಾಣದ ಹಲವು ಭಾಗಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗುರುಗ್ರಾಮ ಮತ್ತು ಫರೀದಾಬಾದ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳ ಎಚ್ಚರಿಕೆ
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಇಂಡಿಗೋ, ಸ್ಪೈಸ್ಜೆಟ್ ಮತ್ತು ಆಕಾಸಾ ಏರ್ ಸೇರಿದಂತೆ ಹಲವು ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಮುನ್ನೆಚ್ಚರಿಕೆ ನೀಡಿವೆ. ವಿಮಾನ ವಿಳಂಬ ಅಥವಾ ರದ್ದತಿ ಮಾತ್ರವಲ್ಲದೆ, ಕನೆಕ್ಟಿಂಗ್ ವಿಮಾನಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಸಂಸ್ಥೆಗಳು ತಿಳಿಸಿವೆ.
ದೆಹಲಿಯ ಪ್ರತಿಕೂಲ ಹವಾಮಾನವು ವಿಮಾನಗಳ ಸಮಯಪಾಲನೆ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ಹೇಳಿದೆ.
ಹವಾಮಾನ ವೈಪರೀತ್ಯದ ಕುರಿತು ಸ್ಪೈಸ್ಜೆಟ್ ಸಂಸ್ಥೆ ತನ್ನ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ, ದೆಹಲಿಯಲ್ಲಿನ ಕೆಟ್ಟ ಹವಾಮಾನದಿಂದಾಗಿ ಆಗಮನ, ನಿರ್ಗಮನ ಹಾಗೂ ಮುಂದಿನ ಸಂಪರ್ಕಿಸುವ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ ಉಂಟಾಗಬಹುದು ಎಂದು ಪ್ರಯಾಣಿಕರಿಗೆ ಎಚ್ಚರಿಸಿದೆ. ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಿಕೊಳ್ಳುವಂತೆ ಸೂಚಿಸಿದೆ.
ಆಕಾಸಾ ಏರ್ ಕೂಡ ತೀವ್ರ ಹವಾಮಾನ ಪರಿಸ್ಥಿತಿಯಿಂದಾಗಿ ತನ್ನ ಜಾಲದ ಹಲವು ವಿಮಾನಗಳ ಮೇಲೆ ಪರಿಣಾಮ ಬೀರಿರುವುದಾಗಿ ತಿಳಿಸಿದೆ. ಹೀಗಾಗಿ ಪ್ರಯಾಣಿಕರು ತಮ್ಮ ಪ್ರಯಾಣಕ್ಕೂ ಮುನ್ನ ವಿಮಾನದ ಇತ್ತೀಚಿನ ಸ್ಥಿತಿಯನ್ನು ಪರಿಶೀಲಿಸುವುದು ಸೂಕ್ತವಾಗಿದೆ.





