ದೆಹಲಿಯಲ್ಲಿ ಭಾರೀ ಮಳೆ, ಬಿರುಗಾಳಿ: ಮನೆ ಕುಸಿದು ನಾಲ್ವರು ಸಾವು, ರೆಡ್ ಅಲರ್ಟ್ ಘೋಷಣೆ

ಮಳೆಯ ಆರ್ಭಟ: 100ಕ್ಕೂ ಅಧಿಕ ವಿಮಾನಗಳು ವಿಳಂಬ

02 (9)

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಬೆಳಿಗ್ಗೆಯಿಂದ ಸುರಿಯುತ್ತಿರುವ ಭಾರೀ ಮಳೆ ಮತ್ತು ಬಿರುಗಾಳಿಯಿಂದಾಗಿ ದ್ವಾರಕಾದ ನಜಾಫ್‌ಗಢ ಪ್ರದೇಶದಲ್ಲಿ ಮನೆಯ ಮೇಲೆ ಮರ ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಿಗ್ಗೆಯಿಂದ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದ್ದು, ಗಂಟೆಗೆ 80 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಿದೆ. ಇದರಿಂದ ಮನೆಯೊಂದು ಕುಸಿದು, ಜ್ಯೋತಿ (26) ಎಂಬ ಮಹಿಳೆ ಮತ್ತು ಆಕೆಯ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಜ್ಯೋತಿಯ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದ್ವಾರಕಾ, ಗುರುಗ್ರಾಮ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮರಗಳು ನೆಲಕ್ಕುರುಳಿವೆ.

ದೆಹಲಿಯ ಪ್ರಮುಖ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ಸಂಗ್ರಹವಾಗಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದ್ದು, ಬಿರುಗಾಳಿಯ ತೀವ್ರತೆಯಿಂದ 100ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಏರ್ ಇಂಡಿಯಾವು ವಿಮಾನ ವಿಳಂಬ ಹಾಗೂ ಮಾರ್ಗ ಬದಲಾವಣೆಯ ಕುರಿತು ಮಾಹಿತಿ ಹಂಚಿಕೊಂಡಿವೆ.

Exit mobile version