ದೆಹಲಿಯಲ್ಲಿ ವರುಣನ ಆರ್ಭಟ: 200 ವಿಮಾನಗಳ ಸಂಚಾರ ವ್ಯತ್ಯಯ

Untitled design 2025 05 26t103657.670

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುಡುಗು ಸಹಿತ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದ್ದು, ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದಿವೆ. ಸಫ್ದರ್‌ಜಂಗ್, ಪಾಲಂ, ಪುಸಾ, ಮಯೂರ್ ವಿಹಾರ್, ನರೇಲಾ ಮತ್ತು ದೆಹಲಿ ವಿಶ್ವವಿದ್ಯಾಲಯದಂತಹ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಈ ಮಳೆಯ ಆರ್ಭಟದಿಂದ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಸುಮಾರು 49 ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದ್ದು, ಬಿರುಗಾಳಿಯಿಂದ ವಿಮಾನ ನಿಲ್ದಾಣದ ಮೇಲ್ಛಾವಣಿಯೂ ಕುಸಿದಿದೆ.

ಕೇರಳದಲ್ಲಿ ಮುಂಗಾರು ಮಳೆಯ ರೌದ್ರನರ್ತನ

ತಿರುವನಂತಪುರಂ: ಕೇರಳಕ್ಕೆ ಶನಿವಾರ ಪ್ರವೇಶಿಸಿದ ಮುಂಗಾರು ಮಾರುತಗಳು ಭಾನುವಾರ ರಾಜ್ಯಾದ್ಯಂತ ಭಾರೀ ಮಳೆ ಸುರಿಸಿವೆ. ಈ ಆರ್ಭಟದಿಂದ ಹಲವು ನಗರಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಲ್ಲಿಕೋಟೆಯಲ್ಲಿ ತೆಂಗಿನ ಮರ ಬಿದ್ದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ತ್ರಿಶೂರ್ ಜಿಲ್ಲೆಯ ಚೆರುತುರುತಿಯ ರೈಲ್ವೆ ಸೇತುವೆ ಬಳಿ ಮರವೊಂದು ಚಲಿಸುತ್ತಿದ್ದ ರೈಲಿನ ಮೇಲೆ ಉರುಳಿಬಿದ್ದಿದೆ. ಲೋಕೋ ಪೈಲಟ್ ತಕ್ಷಣ ರೈಲನ್ನು ನಿಲ್ಲಿಸಿದ್ದರಿಂದ ದೊಡ್ಡ ದುರಂತ ತಪ್ಪಿದೆ.

ವಯನಾಡಿನ ಚೂರಲ್ಮಲಾ-ಮುಂಡಕ್ಕೈ ಪ್ರದೇಶದ ಪುನ್ನಪುಳ ಮತ್ತು ಕೋಝಿಕೋಡ್‌ನ ಕೊರಪುಳ ನದಿಗಳ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಇಡುಕ್ಕಿ ಜಿಲ್ಲೆಯ ಮಲಂಕರ ಅಣೆಕಟ್ಟಿನ ಐದು ಗೇಟ್‌ಗಳನ್ನು ತೆರೆದು ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದೆ. ತೋಡುಪುಳ ಮತ್ತು ಮೂವಾಟ್ಟುಪುಳ ನದಿಗಳ ದಡದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಅತಿಭಾರೀ ಮಳೆಯ ಮುನ್ಸೂಚನೆ ನೀಡಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್ ಮತ್ತು ಪಾಲಕ್ಕಾಡ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಹಾರಾಷ್ಟ್ರಕ್ಕೆ 35 ವರ್ಷಗಳ ದಾಖಲೆಯಲ್ಲಿ ಮುಂಗಾರು

ಮುಂಬೈ: ಮಹಾರಾಷ್ಟ್ರಕ್ಕೆ ಭಾನುವಾರ ಮುಂಗಾರು ಕಾಲಿಟ್ಟಿದ್ದು, ಕಳೆದ 35 ವರ್ಷಗಳಲ್ಲಿ ಇಷ್ಟು ಬೇಗ ಮಾನ್ಸೂನ್ ಆಗಮಿಸಿದ್ದು ಇದೇ ಮೊದಲು. 1990ರಲ್ಲಿ ಮೇ 20ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಿತ್ತು. ಮುಂದಿನ ಮೂರು ದಿನಗಳಲ್ಲಿ ಮುಂಬೈ ಸೇರಿದಂತೆ ರಾಜ್ಯದ ಇತರ ಭಾಗಗಳಿಗೆ ಮಾನ್ಸೂನ್ ತಲುಪುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Exit mobile version