ದೆಹಲಿಯಲ್ಲಿ ಭೀಕರ ಸ್ಫೋಟ: ಸ್ಥಳಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ

Untitled design 2025 11 10T221825.713

ನವದೆಹಲಿ (ನ.10): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಸಂಜೆ ಸಂಭವಿಸಿದ ಭಾರೀ ಸ್ಫೋಟ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಕೆಂಪು ಕೋಟೆ ಸಮೀಪದ ಮೆಟ್ರೋ ನಿಲ್ದಾಣದ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಅಮಿತ್ ಶಾ ತುರ್ತು ಸಭೆ – ಅಧಿಕಾರಿಗಳಿಂದ ವರದಿ ಪಡೆಯಲು ಆದೇಶ

ಸ್ಫೋಟದ ಸುದ್ದಿ ತಿಳಿಯುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ  ದೆಹಲಿ ಪೊಲೀಸ್ ಆಯುಕ್ತ ಹಾಗೂ ವಿಶೇಷ ಶಾಖೆಯ ಉಸ್ತುವಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. “ನಾನು ದೆಹಲಿ ಸಿಪಿ ಹಾಗೂ ವಿಶೇಷ ಶಾಖೆಯ ಉಸ್ತುವಾರಿಯೊಂದಿಗೆ ಮಾತನಾಡಿದ್ದೇನೆ. ಅವರು ಸ್ಥಳದಲ್ಲಿದ್ದಾರೆ. ತನಿಖೆ ಆರಂಭಿಸಲಾಗಿದೆ,” ಎಂದು ಅಮಿತ್ ಶಾ ತಿಳಿಸಿದ್ದಾರೆ.

“ ಎಲ್ಲಾ ಆಯಾಮಗಳನ್ನು ಪರಿಗಣಿಸಿ ತನಿಖೆ ಮುಂದುವರಿಸುತ್ತೇವೆ. ಎನ್‌ಐಎ, ಎನ್‌ಎಸ್‌ಜಿ, ಮತ್ತು ಎಫ್‌ಎಸ್‌ಎಲ್ ತಂಡಗಳು ಕೆಲಸ ಮಾಡುತ್ತಿವೆ. ಸಿಸಿಟಿವಿ ದೃಶ್ಯಾವಳಿಗಳ ವಿಶ್ಲೇಷಣೆಯೂ ಪ್ರಾರಂಭವಾಗಿದೆ. ಘಟನೆಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಬಹಿರಂಗವಾಗಲಿದೆ,” ಎಂದು ಅಮಿತ್‌ ಶಾ ಸ್ಪಷ್ಟಪಡಿಸಿದರು.

ಘಟನೆಯ ನಂತರ ಅಮಿತ್ ಶಾ ಅವರು, ಲೋಕನಾಯಕ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯ ವೈದ್ಯರು ನೀಡಿದ ಮಾಹಿತಿಯ ಪ್ರಕಾರ ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಅಮಿತ್ ಶಾ ಅವರು ಗಾಯಾಳುಗಳ ಕುಟುಂಬಗಳೊಂದಿಗೆ ಮಾತನಾಡಿ, ಅವರಿಗಾಗಿ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ಸ್ಫೋಟದ ಕೆಲವೇ ನಿಮಿಷಗಳಲ್ಲಿ ದೆಹಲಿ ಅಪರಾಧ ಶಾಖೆ, ವಿಶೇಷ ಶಾಖೆ, ಎಫ್‌ಎಸ್‌ಎಲ್ (ವಿಜ್ಞಾನ ಪ್ರಯೋಗಾಲಯ) ಹಾಗೂ ಎನ್‌ಐಎ (ರಾಷ್ಟ್ರೀಯ ತನಿಖಾ ಏಜೆನ್ಸಿ) ತಂಡಗಳು ಸ್ಥಳಕ್ಕೆ ಆಗಮಿಸಿವೆ. ಸ್ಫೋಟದ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹ ನಡೆಯುತ್ತಿದೆ.

ದೆಹಲಿ ಪೊಲೀಸ್ ಹೈ ಅಲರ್ಟ್ ಘೋಷಣೆ

ಸ್ಫೋಟದ ನಂತರ ದೆಹಲಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪ್ರಮುಖ ಸಾರಿಗೆ ಕೇಂದ್ರಗಳು, ವಿಮಾನ ನಿಲ್ದಾಣಗಳು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಭದ್ರತಾ ತಪಾಸಣೆ ಹೆಚ್ಚಿಸಲಾಗಿದೆ. ನಾಗರಿಕರಿಗೆ ಯಾವುದೇ ಸಂಶಯಾಸ್ಪದ ವಸ್ತು ಅಥವಾ ವ್ಯಕ್ತಿ ಕಂಡರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ವಿನಂತಿ ಮಾಡಲಾಗಿದೆ.

ಅಧಿಕಾರಿಗಳು ಸ್ಫೋಟದ ಉದ್ದೇಶ, ಹಿನ್ನೆಲೆ ಹಾಗೂ ಉಗ್ರ ಸಂಪರ್ಕಗಳ ಕುರಿತು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಸ್ಫೋಟ ನಡೆದ ಕಾರು ಕೆಲ ಗಂಟೆಗಳ ಮೊದಲು ಪಾರ್ಕ್ ಮಾಡಲಾಗಿತ್ತು ಎನ್ನಲಾಗಿದೆ.

Exit mobile version