ದೆಹಲಿ (ನ.10): ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಭೀಕರ ಕಾರು ಸ್ಫೋಟ ಸಂಭವಿಸಿ, 10ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಹಿನ್ನೆಲೆ ದೆಹಲಿ ಸೇರಿದಂತೆ ಮುಂಬೈ, ಚೆನ್ನೈ, ಬೆಂಗಳೂರು ಹಾಗೂ ಕೋಲ್ಕತ್ತಾ ನಗರಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಪ್ರಮುಖ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಸಂಜೆ ವೇಳೆ ಸಂಭವಿಸಿದ ಈ ಘಟನೆಯಿಂದ ದೆಹಲಿಯಾದ್ಯಂತ ಆತಂಕದ ವಾತಾವರಣ ನಿರ್ಮಾಣಗೊಂಡಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಇದು ಭಯೋತ್ಪಾದಕ ಕೃತ್ಯವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಪಾರ್ಕ್ ಮಾಡಲಾಗಿದ್ದ ಕಾರು ಸ್ಫೋಟಗೊಂಡಿದೆ. ಪಕ್ಕದಲ್ಲಿದ್ದ ಮತ್ತೊಂದು ಕಾರಿಗೂ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ. ಜ್ವಾನಂತರ ಹಲವಾರು ವಾಹನಗಳು ಹೊತ್ತಿ ಉರಿದಿವೆ.
ಅಗ್ನಿಶಾಮಕ ದಳದ 7 ವಾಹನಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದವು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆದ ಬಳಿಕ ಬೆಂಕಿಯನ್ನು ಸಂಪೂರ್ಣ ನಂದಿಸಲಾಯಿತು. ಪೊಲೀಸರು ಹಾಗೂ ಎನ್ಐಎ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿವೆ.
ಫರಿದಾಬಾದ್ ಉಗ್ರರ ಪ್ಲಾನ್ ವಿಫಲ ಬೆನ್ನಲ್ಲೇ ಸ್ಫೋಟ
ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ಫರಿದಾಬಾದ್ನಲ್ಲಿ ಭಯೋತ್ಪಾದಕರ ಯೋಜನೆಯನ್ನು ಭದ್ರತಾ ಪಡೆಗಳು ತಡೆಹಿಡಿದಿದ್ದವು. ಎರಡು ಮನೆಗಳ ಮೇಲೆ ನಡೆದ ದಾಳಿಯಲ್ಲಿ 2,500 ಕೆಜಿ ಸ್ಫೋಟಕ ವಸ್ತುಗಳು, ಎಕೆ-47 ರೈಫಲ್ಗಳು ಮತ್ತು ಮದ್ದುಗುಂಡುಗಳು ವಶಪಡಿಸಿಕೊಳ್ಳಲಾಗಿತ್ತು.
ಅಧಿಕಾರಿಗಳು ಈ ಎರಡೂ ಘಟನೆಗಳ ಸಂಬಂಧ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ದೆಹಲಿ ಸೇರಿದಂತೆ ಮುಂಬೈ, ಚೆನ್ನೈ, ಬೆಂಗಳೂರು ಹಾಗೂ ಕೋಲ್ಕತ್ತಾ ನಗರಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಪ್ರಮುಖ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಸ್ಫೋಟದ ನಂತರ ರಾಜಧಾನಿ ದೆಹಲಿಯಾದ್ಯಂತ ತೀವ್ರ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ದೆಹಲಿಗೆ ಪ್ರವೇಶಿಸುವ ಹಾಗೂ ಹೊರಹೋಗುವ ಎಲ್ಲಾ ಪ್ರಮುಖ ಮಾರ್ಗಗಳಲ್ಲಿ ವಾಹನಗಳ ತಪಾಸಣೆ ನಡೆಯುತ್ತಿದೆ. ಅನುಮಾನಸ್ಪದ ವ್ಯಕ್ತಿಗಳ ಮೇಲೆ ಕಣ್ಗಾವಲು ಇಡಲಾಗಿದೆ.
ದೆಹಲಿಯ ಪೊಲೀಸ್ ಆಯುಕ್ತರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಈ ಸ್ಫೋಟದ ಮೂಲ ಹಾಗೂ ಹಿನ್ನೆಲೆ ಕುರಿತು ತನಿಖೆ ಆರಂಭಿಸಲಾಗಿದೆ. ಯಾವುದೇ ರೀತಿಯ ಊಹಾಪೋಹದಿಂದ ಜನರು ದೂರವಿರಬೇಕು. ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ,” ಎಂದು ತಿಳಿಸಿದ್ದಾರೆ.
