NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆ ಅಕ್ರಮ ಆರೋಪದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆಗಳು ತೀವ್ರಗೊಂಡಿರುವ ನಡುವೆಯೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯನ್ನು ಡಿಆಕ್ಟಿವೇಟ್ (Deactivate) ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಹೆಚ್ಚುತ್ತಿರುವ ಟೀಕೆ ಮತ್ತು ಟ್ರೋಲಿಂಗ್ ನಡುವೆಯೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕಳೆದ ಕೆಲವು ದಿನಗಳಿಂದ ನೀಟ್ ಪರೀಕ್ಷೆ ಅಕ್ರಮ, ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಹಾಗೂ ಶಿಕ್ಷಣ ನೀತಿ ಕುರಿತು ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದು, ರಾಜಕೀಯ ವಾತಾವರಣವೂ ಕಾವೇರಿದೆ.

ಈ ಬೆಳವಣಿಗೆಗಳ ನಡುವೆಯೇ ಸಚಿವರ ಪುತ್ರಿ ನೈಮಿಷಾ ಪ್ರಧಾನ್ ಅವರ ಶಿಕ್ಷಣ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ವಿಷಯವಾಯಿತು. ಅವರು ಭಾರತದಲ್ಲಿ ಉನ್ನತ ಶಿಕ್ಷಣ ಮುಂದುವರಿಸುವ ಬದಲು ಅಮೆರಿಕದ ಟಫ್ಟ್ಸ್ ವಿಶ್ವವಿದ್ಯಾಲಯ (Tufts University)ದಲ್ಲಿ ಎಲ್‌ಎಲ್‌ಎಂ (LLM) ಪದವಿ ಪಡೆದಿರುವ ವಿಚಾರವನ್ನು ಮುಂದಿಟ್ಟುಕೊಂಡು ಕೆಲವರು ಟೀಕಿಸಿದರು. “ಭಾರತದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿ ಹೊತ್ತಿರುವ ಸಚಿವರ ಕುಟುಂಬವೇ ವಿದೇಶಿ ಶಿಕ್ಷಣವನ್ನು ಆಯ್ಕೆ ಮಾಡಿಕೊಂಡಿದೆ” ಎಂದು ಕೆಲ ನೆಟ್ಟಿಗರು ಪ್ರಶ್ನೆ ಎತ್ತಿದರು.

2023ರಲ್ಲಿ ಅಮೆರಿಕದ ಮ್ಯಾಸಚೂಸೆಟ್ಸ್‌ನ ಟಫ್ಟ್ಸ್ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಎಂ ಪದವಿ ಪಡೆದಿರುವ ನೈಮಿಷಾ ಪ್ರಧಾನ್, ಪ್ರಸ್ತುತ US-India Strategic Partnership Forum (USISPF)ನಲ್ಲಿ ಹಿರಿಯ ಸಹೋದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ವೃತ್ತಿಪರ ಸಾಧನೆಗಿಂತಲೂ, ಅವರು ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿರುವ ವಿಚಾರವೇ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ನೈಮಿಷಾ ಪ್ರಧಾನ್ ಅವರ ಪೋಸ್ಟ್‌ಗಳ ಕಾಮೆಂಟ್ ವಿಭಾಗದಲ್ಲಿ ಅನೇಕ ಮಂದಿ ತೀವ್ರ ಟೀಕೆಗಳನ್ನು ಮಾಡತೊಡಗಿದರು. ಕೆಲವರು ಅವರ ಶಿಕ್ಷಣ ಆಯ್ಕೆಯನ್ನು ಪ್ರಶ್ನಿಸಿದರೆ, ಮತ್ತಷ್ಟು ಮಂದಿ ಅವರು ವ್ಯಾಸಂಗ ಮಾಡಿದ ಟಫ್ಟ್ಸ್ ವಿಶ್ವವಿದ್ಯಾಲಯದ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿಯೂ ಕಾಮೆಂಟ್ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಬೆಳವಣಿಗೆಗಳ ಬಳಿಕ ಅವರ ಇನ್‌ಸ್ಟಾಗ್ರಾಮ್ ಖಾತೆ ಡಿಆಕ್ಟಿವೇಟ್ ಆಗಿರುವುದು ಗಮನ ಸೆಳೆದಿದೆ.

ಆದರೆ ಈ ವಿಚಾರದಲ್ಲಿ ಅಭಿಪ್ರಾಯಗಳು ಎರಡು ಭಾಗಗಳಾಗಿ ವಿಭಜನೆಯಾಗಿವೆ. ಕೆಲವರು, ಸಾರ್ವಜನಿಕ ಹುದ್ದೆಯಲ್ಲಿರುವ ವ್ಯಕ್ತಿಯ ಕುಟುಂಬ ಸದಸ್ಯರನ್ನು ಗುರಿಯಾಗಿಸಿಕೊಂಡು ವೈಯಕ್ತಿಕವಾಗಿ ಟ್ರೋಲ್ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ, ಸಾರ್ವಜನಿಕ ನೀತಿಗಳ ಬಗ್ಗೆ ಪ್ರಶ್ನೆ ಕೇಳುವುದು ಪ್ರಜಾಪ್ರಭುತ್ವದಲ್ಲಿ ಸಹಜ ಪ್ರಕ್ರಿಯೆ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ.

ಈ ಮಧ್ಯೆ ನೀಟ್ ಪರೀಕ್ಷೆ ಅಕ್ರಮ ಪ್ರಕರಣದ ಕುರಿತು ರಾಜಕೀಯ ವಾಗ್ವಾದವೂ ಮುಂದುವರಿದಿದೆ. ಪ್ರತಿಪಕ್ಷಗಳು ಪರೀಕ್ಷಾ ವ್ಯವಸ್ಥೆಯಲ್ಲಿ ನಡೆದಿರುವ ಲೋಪಗಳಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಆರೋಪಿಸುತ್ತಿವೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾತ್ರ, ವಿದ್ಯಾರ್ಥಿಗಳ ಸಮಸ್ಯೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Exit mobile version