ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಅವರು ಬಿಜೆಪಿ ಹಾಗೂ RSS ಸಂಘಟನಾ ಶಕ್ತಿಯನ್ನು ಬಹಿರಂಗವಾಗಿ ಶ್ಲಾಘಿಸಿರುವುದು ರಾಜಕೀಯ ವಲಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊಂಡ ಹಳೆಯ ಫೋಟೋವೊಂದರ ಮೂಲಕ ಅವರು ಈ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಪಕ್ಷದೊಳಗಿನ ಆಂತರಿಕ ಸುಧಾರಣೆಗಳ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಅವರಿಗೆ ಇತ್ತೀಚೆಗೆ ಸೂಚಿಸಿದ್ದ ದಿಗ್ವಿಜಯ್ ಸಿಂಗ್, ಇದೀಗ ತಮ್ಮದೇ ಪಕ್ಷದ ವಿರುದ್ಧ ತೀಕ್ಷ್ಣ ಸಂದೇಶ ರವಾನಿಸಿದಂತಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಶನಿವಾರ ಬೆಳಿಗ್ಗೆ ದಿಗ್ವಿಜಯ್ ಸಿಂಗ್ ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ (ಹಳೆಯ ಟ್ವಿಟರ್) 1990ರ ದಶಕದ ಒಂದು ಕಪ್ಪು–ಬಿಳುಪು ಚಿತ್ರವನ್ನು ಹಂಚಿಕೊಂಡಿದ್ದರು. ಆ ಚಿತ್ರದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರ ಸಮೀಪ ನೆಲದ ಮೇಲೆ ಕುಳಿತಿರುವ ಯುವ ನರೇಂದ್ರ ಮೋದಿ ಕಾಣಿಸುತ್ತಾರೆ. ಈ ಚಿತ್ರವನ್ನು ಉಲ್ಲೇಖಿಸಿದ ಸಿಂಗ್, ಸಂಘ–ಬಿಜೆಪಿ ಪರಿಸರ ವ್ಯವಸ್ಥೆಯಲ್ಲಿ ತಳಮಟ್ಟದ ಕಾರ್ಯಕರ್ತನಿಗೂ ಉನ್ನತ ಸ್ಥಾನಕ್ಕೇರಲು ಅವಕಾಶವಿದೆ ಎಂಬುದನ್ನು ಹೊಗಳಿದ್ದಾರೆ.
“ಒಮ್ಮೆ ನೆಲದ ಮೇಲೆ ಕುಳಿತಿದ್ದ ಕಾರ್ಯಕರ್ತನೊಬ್ಬ ಸಂಘ–ಬಿಜೆಪಿ ವ್ಯವಸ್ಥೆಯಲ್ಲಿ ಬೆಳೆದು ಮುಖ್ಯಮಂತ್ರಿಯಾಗಿ, ನಂತರ ಪ್ರಧಾನಿಯಾಗುವ ಮಟ್ಟಕ್ಕೆ ಏರುತ್ತಾನೆ” ಎಂದು ಹೇಳಿರುವ ದಿಗ್ವಿಜಯ್ ಸಿಂಗ್, ಸಂಘಟನೆಯ ಶಿಸ್ತು ಮತ್ತು ಅವಕಾಶ ವ್ಯವಸ್ಥೆಯನ್ನು ಶ್ಲಾಘಿಸಿದ್ದಾರೆ. ಈ ಪೋಸ್ಟ್ನ ಅಂತ್ಯದಲ್ಲಿ ಅವರು “ಜೈ ಶಿಯಾ ರಾಮ್” ಎಂದು ಬರೆದಿರುವುದು ಚರ್ಚೆಗೆ ಕಾರಣವಾಗಿದೆ.
ಈ ಹೇಳಿಕೆಯನ್ನು ಬಿಜೆಪಿ ತಕ್ಷಣವೇ ತಮ್ಮ ರಾಜಕೀಯ ಅಸ್ತ್ರವಾಗಿ ಬಳಸಿಕೊಂಡಿದೆ. ಬಿಜೆಪಿ ವಕ್ತಾರ ಸಿಆರ್ ಕೇಶವನ್, “ಇದು ಕಾಂಗ್ರೆಸ್ನ ಆಂತರಿಕ ನಿರಂಕುಶತೆ ಮತ್ತು ಪ್ರಜಾಪ್ರಭುತ್ವ ವಿರೋಧಿ ನಿಲುವಿನ ಮೇಲೆ ಸಿಡಿದ ಸತ್ಯದ ಬಾಂಬ್” ಎಂದು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. “ರಾಹುಲ್ ಗಾಂಧಿ ಈ ಸತ್ಯವನ್ನು ಎದುರಿಸಲು ಧೈರ್ಯ ತೋರಿಸುತ್ತಾರೆಯೇ?” ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.
ಇನ್ನೊಬ್ಬ ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ, ದಿಗ್ವಿಜಯ್ ಸಿಂಗ್ ಅವರ ಪೋಸ್ಟ್ ಕಾಂಗ್ರೆಸ್ನೊಳಗಿನ ಭಿನ್ನಾಭಿಪ್ರಾಯಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. “ಕಾಂಗ್ರೆಸ್ ನಾಯಕರು ಈಗ ತಮ್ಮದೇ ಪಕ್ಷದ ವೈಫಲ್ಯಗಳನ್ನು ಬಹಿರಂಗವಾಗಿ ಒಪ್ಪಿಕೊಳ್ಳುತ್ತಿದ್ದಾರೆ” ಎಂಬ ವ್ಯಂಗ್ಯ ಮಾಡಿದ್ದಾರೆ.
ದಿಗ್ವಿಜಯ್ ಸಿಂಗ್ ಅವರ ಈ ಪೋಸ್ಟ್ ಕಾಂಗ್ರೆಸ್ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಪೋಸ್ಟ್ ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ, ಬದಲಾಗಿ ಪಕ್ಷದ ಹೈಕಮಾಂಡ್ಗೆ ನೀಡಿರುವ ನೇರ ಸಂದೇಶ ಎಂದು ಅನೇಕರು ವಿಶ್ಲೇಷಿಸುತ್ತಿದ್ದಾರೆ. ಅವರು ತಮ್ಮ ಪೋಸ್ಟ್ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಅಧಿಕೃತ ಕಾಂಗ್ರೆಸ್ ಎಕ್ಸ್ ಹ್ಯಾಂಡಲ್ ಅನ್ನು ಟ್ಯಾಗ್ ಮಾಡಿದ್ದಾರೆ.





