ಕಾಶ್ಮೀರದ ಪೆಹಲ್ಗಾಮ್ನಲ್ಲಿ ಉಗ್ರರ ದಾಳಿಯ ಬೆನ್ನಲ್ಲೇ ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಅಡಗುತಾಣಗಳನ್ನು ಧ್ವಂಸಗೊಳಿಸಿದೆ. ಆಪರೇಷನ್ ಸಿಂದೂರ್ ಎಂಬ ಈ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತದ ಮೂರು ಸೇನಾಪಡೆಗಳಾದ ವಾಯುಸೇನೆ, ಭೂಸೇನೆ ಮತ್ತು ನೌಕಾಪಡೆಯ ಮುಖ್ಯಸ್ಥರು ಜಂಟಿ ಸುದ್ದಿಗೋಷ್ಠಿ ನಡೆಸಿ, ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿದ್ದಾರೆ.
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ನಂತರ ಭಾರತವು ತಕ್ಷಣವೇ ಕಾರ್ಯಪ್ರವೃತ್ತವಾಗಿ, ಪಾಕಿಸ್ತಾನದ ರಹಿಮ್ಯಾರ್ ಖಾನ್ ವಾಯುನೆಲೆಯಲ್ಲಿರುವ ಭಯೋತ್ಪಾದಕರ ತಾಣಗಳನ್ನು ಗುರಿಯಾಗಿಸಿತು. ಈ ಕಾರ್ಯಾಚರಣೆಯಲ್ಲಿ ಭಾರತೀಯ ವಾಯುಸೇನೆಯು ಪ್ರಮುಖ ಪಾತ್ರವಹಿಸಿದ್ದು, ತಾಣಗಳನ್ನು ಸಂಪೂರ್ಣವಾಗಿ ನಾಶಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ಕಾರ್ಯಾಚರಣೆಯ ವೀಡಿಯೊವನ್ನು ಪ್ರದರ್ಶಿಸಲಾಯಿತು.
ವಾಯುಸೇನೆಯ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ ಅವರು ಮಾತನಾಡಿ, “ನಮ್ಮ ಹೋರಾಟ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ವಿರುದ್ಧವೇ ಇದೆ, ಪಾಕಿಸ್ತಾನ ಸೇನೆಯ ವಿರುದ್ಧವಲ್ಲ. ಆದರೆ, ಕಾರ್ಯಾಚರಣೆ ವೇಳೆ ಪಾಕಿಸ್ತಾನ ಸೇನೆಯು ಉಗ್ರರ ಪರವಾಗಿ ಮಧ್ಯಪ್ರವೇಶಿಸಿದ ಕಾರಣ, ಆಪರೇಷನ್ ಸಿಂದೂರ್ ನಡೆಸಲಾಯಿತು,” ಎಂದು ತಿಳಿಸಿದರು.
ಏರ್ ಮಾರ್ಷಲ್ ಭಾರ್ತಿ ಅವರು ಮುಂದುವರೆದು, “ವೈರಿಗಳನ್ನು ಸದೆಬಡಿಯಲು ನಮ್ಮ ಎಲ್ಲಾ ಸೇನಾ ನೆಲೆಗಳು ಸಂಪೂರ್ಣವಾಗಿ ಸಿದ್ಧವಾಗಿವೆ. ಪಾಕಿಸ್ತಾನದಿಂದ ಡ್ರೋನ್ ದಾಳಿಗಳನ್ನು ನಾಶಪಡಿಸಲಾಗಿದ್ದು, ನಮ್ಮ ಮಿಲಿಟರಿ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ,” ಎಂದು ಒತ್ತಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಭೂಸೇನೆಯ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮತ್ತು ನೌಕಾಪಡೆಯ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಕೂಡ ಉಪಸ್ಥಿತರಿದ್ದರು. ಈ ಕಾರ್ಯಾಚರಣೆಯು ಇನ್ನೂ ಮುಂದುವರೆದಿದ್ದು, ಭಾರತವು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಮುಂದುವರೆಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಸೇನಾಪಡೆ ಮುಖ್ಯಸ್ಥರೊಂದಿಗೆ ನಿರಂತರ ಸಭೆಗಳನ್ನು ನಡೆಸಿ, ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಪರಿಶೀಲಿಸುತ್ತಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಹೊರತಾಗಿಯೂ, ಭಾರತವು ತನ್ನ ರಕ್ಷಣಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಿದೆ.