ನವದೆಹಲಿ, ಜುಲೈ 16: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿವಿಧ ಕೇಂದ್ರಗಳಿಂದ ಸುಮಾರು 100 ವಿಜ್ಞಾನಿಗಳು ಮತ್ತು ತಾಂತ್ರಿಕ ಸಿಬ್ಬಂದಿ ರಾಜೀನಾಮೆ ಸಲ್ಲಿಸಿರುವುದು ಕೇಂದ್ರ ಸರ್ಕಾರದ ಗಮನ ಸೆಳೆದಿದೆ. ಇದರ ಪರಿಣಾಮವಾಗಿ ಗಗನಯಾನ ಸೇರಿದಂತೆ ರಾಷ್ಟ್ರೀಯ ಮಹತ್ವದ ಯೋಜನೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ವಿಜ್ಞಾನಿಗಳ ರಾಜೀನಾಮೆ ಹಾಗೂ ಸ್ವಯಂ ನಿವೃತ್ತಿಗೆ ಸಂಬಂಧಿಸಿದ ನಿಯಮಗಳನ್ನು ಕೇಂದ್ರ ಸರ್ಕಾರ ಕಠಿಣಗೊಳಿಸಲು ನಿರ್ಧಸಿದೆ.
ಬಾಹ್ಯಾಕಾಶ ಇಲಾಖೆಯ ಜಂಟಿ ಕಾರ್ಯದರ್ಶಿ ಎಸ್.ಆರ್. ರಾಜಶೇಖರ್ ಅವರು ಜುಲೈ 14ರಂದು ಹೊರಡಿಸಿರುವ ಆದೇಶದಲ್ಲಿ, ಇತ್ತೀಚಿನ ದಿನಗಳಲ್ಲಿ ಗಗನಯಾನ ಸೇರಿದಂತೆ ಪ್ರಮುಖ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್–ಎ ವೈಜ್ಞಾನಿಕ ಮತ್ತು ತಾಂತ್ರಿಕ ಸಿಬ್ಬಂದಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಜೀನಾಮೆ ಹಾಗೂ ಸ್ವಯಂ ನಿವೃತ್ತಿ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಇದು ದೇಶದ ಮಹತ್ವದ ಯೋಜನೆಗಳ ಅನುಷ್ಠಾನದ ಮೇಲೆ ತೀವ್ರವಾದ ಪರಿಣಾಮವನ್ನು ಬೀರುತ್ತಿದೆ ಎಂದು ಉಲ್ಲೇಖಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಗಗನಯಾನ ಅಥವಾ ಇತರ ಪ್ರಮುಖ ಯೋಜನೆಗಳು ಪೂರ್ಣಗೊಳ್ಳುವವರೆಗೆ ಆ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಗಳ ರಾಜೀನಾಮೆಗಳನ್ನು ಸಾಮಾನ್ಯವಾಗಿ ಅಂಗೀಕರಿಸಬಾರದು ಎಂದು ಇಸ್ರೋದ ವಿವಿಧ ಕೇಂದ್ರಗಳ ನಿರ್ದೇಶಕರು ಹಾಗೂ ಘಟಕಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ. ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಸಂಬಂಧಿತ ಕೇಂದ್ರದ ಮುಖ್ಯಸ್ಥರ ಸ್ಪಷ್ಟ ಶಿಫಾರಸಿನೊಂದಿಗೆ ಅರ್ಜಿಯನ್ನು ಅಂತಿಮ ನಿರ್ಧಾರಕ್ಕಾಗಿ ಬಾಹ್ಯಾಕಾಶ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ತಿಳಿಸಿದೆ.
ಇತ್ತೀಚಿನ ವರದಿಗಳ ಪ್ರಕಾರ, ಬೆಂಗಳೂರಿನ ಯು.ಆರ್. ರಾವ್ ಉಪಗ್ರಹ ಕೇಂದ್ರ (URSC) ಹಾಗೂ ತಿರುವನಂತಪುರಂನ ವಿಕ್ರಮ್ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ (VSSC)ಗಳಿಂದ ಹೆಚ್ಚು ರಾಜೀನಾಮೆಗಳು ದಾಖಲಾಗಿವೆ. ಗಗನಯಾನ ಯೋಜನೆಯಲ್ಲಿ ಬಳಸಲಾಗುವ LVM3 ಉಡಾವಣಾ ವಾಹನ ಯೋಜನೆಯ ಮುಖ್ಯಸ್ಥರಾಗಿ ಸುಮಾರು 13 ತಿಂಗಳು ಸೇವೆ ಸಲ್ಲಿಸಿದ ಜೋಸೆಫ್ ಕೂಡ ಈ ವರ್ಷ ಫೆಬ್ರವರಿಯಲ್ಲಿ ಸಂಸ್ಥೆಯಿಂದ ಹೊರನಡೆದಿದ್ದಾರೆ.
2020ರಲ್ಲಿ ಕೇಂದ್ರ ಸರ್ಕಾರ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಅವಕಾಶ ನೀಡಿದ ನಂತರ ಹಾಗೂ 2023ರಲ್ಲಿ ಭಾರತೀಯ ಬಾಹ್ಯಾಕಾಶ ನೀತಿ ಜಾರಿಯಾದ ಬಳಿಕ ಹಲವು ಖಾಸಗಿ ಬಾಹ್ಯಾಕಾಶ ಸ್ಟಾರ್ಟ್ಅಪ್ಗಳು ವೇಗವಾಗಿ ಬೆಳೆಯುತ್ತಿವೆ. ಪಿಕ್ಸೆಲ್, ಧ್ರುವ ಸ್ಪೇಸ್, ಸ್ಕೈರೂಟ್ ಏರೋಸ್ಪೇಸ್, ಅಗ್ನಿಕುಲ್ ಕಾಸ್ಮೋಸ್ ಮತ್ತು ಬೆಲ್ಲಾಟ್ರಿಕ್ಸ್ ಏರೋಸ್ಪೇಸ್ ಸೇರಿದಂತೆ ಹಲವು ಸಂಸ್ಥೆಗಳು ದೊಡ್ಡ ಪ್ರಮಾಣದ ಹೂಡಿಕೆಗಳನ್ನು ಆಕರ್ಷಿಸುತ್ತಿವೆ. ಉತ್ತಮ ಸಂಬಳ ಮತ್ತು ಹೊಸ ಅವಕಾಶಗಳ ಕಾರಣ ಕೆಲವು ವಿಜ್ಞಾನಿಗಳು ಖಾಸಗಿ ವಲಯದತ್ತ ಮುಖ ಮಾಡುತ್ತಿರುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.
ಈ ರಾಜೀನಾಮೆಗಳ ಜೊತೆಗೆ, ಇಸ್ರೋ ಇತ್ತೀಚೆಗೆ ಕೆಲವು ತಾಂತ್ರಿಕ ಸವಾಲುಗಳನ್ನೂ ಎದುರಿಸಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಗಗನಯಾನ, ಚಂದ್ರಯಾನ–4 ಹಾಗೂ ಮಂಗಳಯಾನ–2 ಸೇರಿದಂತೆ ಭಾರತದ ಮಹತ್ವಾಕಾಂಕ್ಷಿ ಬಾಹ್ಯಾಕಾಶ ಯೋಜನೆಗಳು ಮುಂದುವರಿದಿದ್ದು, ಅವುಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವತ್ತ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ನಮ್ಮ ದೇಶವನ್ನು ಸ್ವತಂತ್ರವಾಗಿ ಬಾಹ್ಯಾಕಾಶಕ್ಕೆ ಮಾನವರನ್ನು ಕಳುಹಿಸುವ ನಾಲ್ಕನೇ ದೇಶವನ್ನಾಗಿ ಮಾಡುವ ಗುರಿಯನ್ನು ಇಸ್ರೋ ಹೊಂದಿದೆ.
