ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

ನವದೆಹಲಿ, ಜುಲೈ 22: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಮತ್ತೊಮ್ಮೆ ಗಲಭೆ ಸೃಷ್ಟಿಸಿದ್ದಾರೆ. ಪ್ರತಿಭಟನಾಕಾರರಲ್ಲಿ ಕೆಲ ದುಷ್ಕರ್ಮಿಗಳು ಆರ್‌ಎಎಫ್ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಎಸಿಪಿಗಳು ಸೇರಿದಂತೆ 5 ಪೊಲೀಸರು ಗಾಯಗೊಂಡಿದ್ದಾರೆ. ಈ ಘಟನೆಯು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಯು ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾತ್ರಿ ಸುಮಾರು 8.30ರ ವೇಳೆಗೆ ಪ್ರತಿಭಟನಾ ಸ್ಥಳದಲ್ಲಿ ಪರಿಸ್ಥಿತಿ ಏಕಾಏಕಿ ಉದ್ವಿಗ್ನಗೊಂಡಿತ್ತು. ಪ್ರತಿಭಟನಾಕಾರರ ಗುಂಪಿನಲ್ಲಿದ್ದ ಕೆಲವರು ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ಆರಂಭಿಸಿದ್ದು, ಬಳಿಕ ಬಾಟಲಿಗಳನ್ನೂ ಎಸೆದಿದ್ದಾರೆ. ಕೆಲವರು ಲಾಠಿಗಳಿಂದಲೂ ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ದಾಳಿಯಲ್ಲಿ ಕನ್ನಾಟ್ ಪ್ಲೇಸ್ ವಿಭಾಗದ ಎಸಿಪಿ ವಿವೇಕ್ ಭಗತ್ ಸೇರಿದಂತೆ ಇಬ್ಬರು ಎಸಿಪಿಗಳು, ಇಬ್ಬರು ಇನ್ಸ್‌ಪೆಕ್ಟರ್‌ಗಳು ಹಾಗೂ ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಗಾಯಗೊಂಡಿದ್ದಾರೆ. ಗಾಯಗೊಂಡ ಅಧಿಕಾರಿಗಳನ್ನು ತಕ್ಷಣವೇ ರಾಮ್ ಮನೋಹರ್ ಲೋಹಿಯಾ (RML) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಹಾಗೂ RAF ಸಿಬ್ಬಂದಿ ತಕ್ಷಣವೇ ಕಾರ್ಯಾಚರಣೆ ನಡೆಸಿದರು. ಕೆಲವೆಡೆ ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿ ಗುಂಪನ್ನು ಚದುರಿಸಲಾಯಿತು. ಬಳಿಕ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಿ ಜಂತರ್ ಮಂತರ್, ಟಾಲ್‌ಸ್ಟಾಯ್ ಮಾರ್ಗ, ಜನಪಥ್ ಹಾಗೂ ಕನ್ನಾಟ್ ಪ್ಲೇಸ್ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಪ್ರತಿಭಟನೆಯ ಮಧ್ಯೆ ಹಿಂಸಾಚಾರ ಹೇಗೆ ಉಂಟಾಯಿತು, ಇದರಲ್ಲಿ ಹೊರಗಿನ ದುಷ್ಕರ್ಮಿಗಳ ಕೈವಾಡ ಇದೆಯೇ ಎಂಬ ಎಲ್ಲಾ ಆಯಾಮಗಳಿಂದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 

ಇನ್ನೊಂದೆಡೆ, ಜಂತರ್ ಮಂತರ್ ಪ್ರದೇಶದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಆದರೂ ಎಸ್‌ಎಂಎಸ್ ಸೇವೆಗಳ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಸಂದೇಶಗಳ ವಿನಿಮಯ ನಡೆದಿರುವ ಮಾಹಿತಿ ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ. ಟಾಲ್‌ಸ್ಟಾಯ್ ಮಾರ್ಗ ಮತ್ತು ಜನಪಥ್ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಂಪರ್ಕ ಹಾಗೂ ಸಂದೇಶ ರವಾನೆ ಹೆಚ್ಚಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ಕಳೆದ ಕೆಲವು ದಿನಗಳಿಂದ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘಟನೆಗಳು ನಿರಂತರ ಪ್ರತಿಭಟನೆ ನಡೆಸುತ್ತಿವೆ. ಮಂಗಳವಾರ ನಡೆದ ಹಿಂಸಾತ್ಮಕ ಘಟನೆ ಬಳಿಕ ಪ್ರದೇಶದಲ್ಲಿ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ಮರುಕಳಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ.

 

Exit mobile version