ನವದೆಹಲಿ, ಜುಲೈ 22: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ಆಕ್ರೋಶ ಮುಂದುವರಿದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಂಗಳವಾರ 32ನೇ ದಿನಕ್ಕೆ ಕಾಲಿಟ್ಟಿದೆ. ಸಾವಿರಾರು ವಿದ್ಯಾರ್ಥಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳ ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿನ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಒತ್ತಾಯಿಸಿದ್ದಾರೆ.
ಇದೇ ವೇಳೆ, ಜೂನ್ 28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಕುರಿತು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಪ್ರಧಾನಮಂತ್ರಿ ಕಚೇರಿಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ದೆಹಲಿ ಹೈಕೋರ್ಟ್ ನಿರ್ದೇಶನದಂತೆ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಉಪವಾಸದ ಪರಿಣಾಮವಾಗಿ ಆರೋಗ್ಯ ಕ್ಷೀಣಿಸುತ್ತಿದ್ದ ಹಿನ್ನೆಲೆಯಲ್ಲಿ ಅವರ ಪತ್ನಿ ಗೀತಾಂಜಲಿ ಆಂಗ್ಮೋ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಆದೇಶದ ಬಳಿಕ ಭದ್ರತಾ ವ್ಯವಸ್ಥೆಯ ನಡುವೆ ಅವರನ್ನು ಗುರುಗ್ರಾಮದ ಆಸ್ಪತ್ರೆಗೆ ದಾಖಲಿಸಲಾಯಿತು. ಹಿರಿಯ ವೈದ್ಯೆ ಡಾ. ಸುಶೀಲಾ ಕಟಾರಿಯಾ ಅವರ ನೇತೃತ್ವದಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆಯಾದರೂ, ವಾಂಗ್ಚುಕ್ ತಮ್ಮ ಉಪವಾಸ ಸತ್ಯಾಗ್ರಹವನ್ನು ಆಸ್ಪತ್ರೆಯಲ್ಲಿಯೇ ಮುಂದುವರಿಸಿದ್ದಾರೆ.
ಇನ್ನೊಂದೆಡೆ, ಸೋಮವಾರ ನಡೆದ “ಸಂಸತ್ ಚಲೋ” ಪ್ರತಿಭಟನೆಯ ವೇಳೆ ಪೊಲೀಸ್ ಲಾಠಿಚಾರ್ಜ್ ಮತ್ತು ನೂಕಾಟ ನಡೆದಿದ್ದರೂ, ಪ್ರತಿಭಟನಾಕಾರರ ಉತ್ಸಾಹ ಕಡಿಮೆಯಾಗಿಲ್ಲ. ಮಂಗಳವಾರ ಮತ್ತೆ 5,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಬೆಂಬಲಿಗರು ಜಂತರ್ ಮಂತರ್ಗೆ ಆಗಮಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.
CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಮಾತನಾಡಿ, ಇನ್ನು ಮುಂದೆ ಸರ್ಕಾರದ ಸಚಿವರ ನಿವಾಸಗಳಿಗೆ ತೆರಳಿ ಮಾತುಕತೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. “ಸರ್ಕಾರ ಮಾತುಕತೆಗೆ ಸಿದ್ಧವಿದ್ದರೆ, ಅವರೇ ಜಂತರ್ ಮಂತರ್ಗೆ ಬಂದು ಪ್ರತಿಭಟನಾಕಾರರನ್ನು ಭೇಟಿ ಮಾಡಬೇಕು. ನಮ್ಮ ಹೋರಾಟವನ್ನು ನಿರ್ಲಕ್ಷಿಸುವ ಪ್ರಯತ್ನಗಳನ್ನು ನಾವು ಒಪ್ಪುವುದಿಲ್ಲ,” ಎಂದು ಅವರು ಹೇಳಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಇದೀಗ ಬೀದಿಯಿಂದ ಸಂಸತ್ತಿನವರೆಗೆ ತೀವ್ರ ಚರ್ಚೆಗೆ ಕಾರಣವಾಗಿದೆ. ಸಂಸತ್ತಿನ ಉಭಯ ಸದನಗಳಲ್ಲೂ ವಿಪಕ್ಷಗಳು ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಪರೀಕ್ಷಾ ಅಕ್ರಮಕ್ಕೆ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿವೆ.
ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಪರೀಕ್ಷಾ ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಜೊತೆಗೆ, ಸೂಕ್ಷ್ಮ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವುದು ವಿಪಕ್ಷಗಳೇ ಎಂದು ಆರೋಪಿಸಿದ್ದು, ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪ್ರತಿಯುತ್ತರ ನೀಡಿದೆ. ಈ ಬೆಳವಣಿಗೆಗಳ ನಡುವೆ ನೀಟ್ ವಿವಾದ ದೇಶದ ರಾಜಕೀಯ ಮತ್ತು ಶೈಕ್ಷಣಿಕ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.





