ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಮಳೆಯ ಅಬ್ಬರದಿಂದ ಇಡುಕ್ಕಿ, ಕೊಟ್ಟಾಯಂ ಹಾಗೂ ಪಟ್ಟಣಂತಿಟ್ಟ ಜಿಲ್ಲೆಗಳಲ್ಲಿ ಭೀಕರ ಭೂಕುಸಿತಗಳು ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಹಲವರು ನಾಪತ್ತೆಯಾಗಿರುವ ಹಿನ್ನೆಲೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಭಾಗಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಆಡಳಿತ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.
ಭಾರಿ ಮಳೆಯ ಪರಿಣಾಮ ಇಡುಕ್ಕಿ ಜಿಲ್ಲೆಯ ಮುಟ್ಟೋಮ್ ಚಲ್ಲವಾಯಲ್ ಹಾಗೂ ಅಡೂರ್ ಬೆಟ್ಟದ ತೋಡುಪುಳ ಸಮೀಪ ಎರಡು ಕಡೆ ಭೂಕುಸಿತ ಸಂಭವಿಸಿದೆ. ಇದೇ ರೀತಿ ಕೊಟ್ಟಾಯಂ ಜಿಲ್ಲೆಯ ಪೂಂಜಾರ್ ಪಯ್ಯನಿತೋಟ್ಟಂ ಮತ್ತು ಪಟ್ಟಣಂತಿಟ್ಟ ಜಿಲ್ಲೆಯ ಥೂಂಪಕುಲಂ ಪ್ರದೇಶಗಳಲ್ಲಿಯೂ ಗುಡ್ಡ ಕುಸಿದು ಮನೆಗಳು ಹಾಗೂ ರಸ್ತೆಗಳಿಗೆ ಭಾರೀ ಹಾನಿಯಾಗಿದೆ.
ಕುಡಯತ್ತೂರಿನ ಅಡೂರ್ ಬೆಟ್ಟದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಭೂಕುಸಿತದ ವೇಳೆ ಅವರ ಮಗ ರತೀಶ್ ಅವರನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಇನ್ನೊಂದೆಡೆ ವಾಗಮೋನ್ನ ಕೊಲಾಹಲಮೇಡುವಿನಲ್ಲಿ ಪ್ರದೇಶದಲ್ಲಿ ಸಂಭವಿಸಿದ ಇನ್ನೊಂದು ಭೂಕುಸಿತದಲ್ಲಿ ವೈಕಂ ಮೂಲದ ಪ್ರಭಾಕರನ್ ನಾಯರ್ (72) ಎಂಬುವವರು ಮೃತಪಟ್ಟಿದ್ದಾರೆ. ಅವರು ತಮ್ಮ ಸಂಬಂಧಿಕರ ಮನೆಯಲ್ಲಿ ಮಲಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಹಲವು ಗಂಟೆಗಳ ಕಾಲ ನಡೆದ ಶೋಧ ಕಾರ್ಯಾಚರಣೆಯ ಬಳಿಕ ಅವರ ಮೃತದೇಹ ಪತ್ತೆಯಾಗಿದೆ.
ಕೊಟ್ಟಾಯಂ ಜಿಲ್ಲೆಯ ಪೂಂಜಾರ್ ಪ್ರದೇಶದಲ್ಲಿ ಸಂಭವಿಸಿದ ಮತ್ತೊಂದು ಭೂಕುಸಿತದಲ್ಲಿ ಮನೆಯೇ ಮಣ್ಣಿನಡಿ ಹೂತುಹೋಗಿದೆ. ಘಟನೆಯ ವೇಳೆ ಮನೆಯಲ್ಲಿದ್ದ ಕುಟುಂಬ ಸದಸ್ಯರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ನಡುವೆ ಯುವತಿ ಜೋಸೆಫೀನ್ ಜಾನಿ ಅವರ ಮೃತದೇಹವನ್ನು ರಕ್ಷಣಾ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ನಿರಂತರವಾಗಿ ನಡೆಯುತ್ತಿದೆ.
ಭಾರಿ ಮಳೆಯಿಂದ ರಾಜ್ಯದ ಹಲವೆಡೆ ಭೂಕುಸಿತ ಮಾತ್ರವಲ್ಲದೆ ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಕೊಟ್ಟರಕರ–ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯ ಕೆಲವು ಭಾಗಗಳಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಹಲವಾರು ಪ್ರಮುಖ ರಸ್ತೆಗಳಲ್ಲಿ ಮಣ್ಣು ಮತ್ತು ಮರಗಳು ಬಿದ್ದು ಸಂಪರ್ಕ ಕಡಿತಗೊಂಡಿದ್ದು, ಜನರ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.
ಇದೇ ವೇಳೆ ಪಂಪಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಅನೇಕ ಗ್ರಾಮಗಳು ಪ್ರವಾಹದ ನೀರಿನಲ್ಲಿ ಮುಳುಗಿವೆ. ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಅನೇಕ ಕುಟುಂಬಗಳು ಮನೆಗಳ ಮೇಲ್ಚಾವಣಿ ಹಾಗೂ ಟೆರೇಸ್ಗಳ ಮೇಲೆ ಆಶ್ರಯ ಪಡೆದು ರಕ್ಷಣೆಗೆ ಕಾಯುತ್ತಿರುವ ದೃಶ್ಯಗಳು ಮನಕಲಕುವಂತಿವೆ. ಸ್ಥಳೀಯ ಆಡಳಿತ ದೋಣಿಗಳ ಮೂಲಕ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದೆ.
ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾಡಳಿತಗಳಿಗೆ ತುರ್ತು ಸೂಚನೆಗಳನ್ನು ನೀಡಿದೆ. ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ಸಿಬ್ಬಂದಿ ಹಾಗೂ ಯಂತ್ರೋಪಕರಣಗಳನ್ನು ನಿಯೋಜಿಸಲಾಗಿದ್ದು, ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಗುಡ್ಡ ಪ್ರದೇಶಗಳು ಮತ್ತು ನದಿಪಾತ್ರಗಳ ಸಮೀಪ ವಾಸಿಸುವವರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.





