ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದರೂ, ಸರ್ಕಾರ ರಚನೆ ಪ್ರಕ್ರಿಯೆ ಮಾತ್ರ ಇನ್ನೂ ಗೊಂದಲದಲ್ಲೇ ಮುಂದುವರಿದಿದೆ. ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆ ಇದೀಗ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲೇ ದೊಡ್ಡ ಚರ್ಚೆಗೆ ಕಾರಣವಾಗಿದೆ. ಯುಡಿಎಫ್ ಗೆಲುವಿನ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಹಲವು ನಾಯಕರ ಹೆಸರುಗಳು ಕೇಳಿಬರುತ್ತಿದ್ದರೂ, ಪ್ರಮುಖವಾಗಿ ಕೆಸಿ ವೇಣುಗೋಪಾಲ್ ಮತ್ತು ವಿಪಕ್ಷ ನಾಯಕ ವಿಡಿ ಸತೀಶನ್ ನಡುವಿನ ಪೈಪೋಟಿ ನಡೆಯುತ್ತಿದೆ.
ಅಲಪ್ಪಿ ಸಂಸದರಾಗಿರುವ ಕೆಸಿ ವೇಣುಗೋಪಾಲ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಟ್ಟದ ಪ್ರಭಾವಿ ನಾಯಕರಲ್ಲಿ ಒಬ್ಬರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವೇಣುಗೋಪಾಲ್ ಅವರಿಗೆ ಹೈಕಮಾಂಡ್ ಬೆಂಬಲವಿದೆ ಎನ್ನಲಾಗುತ್ತಿದೆ. ದೆಹಲಿ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ವೇಣುಗೋಪಾಲ್ ಅವರನ್ನು ಕೇರಳ ಸಿಎಂ ಆಗಿ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ.
ಕೇರಳದಲ್ಲಿ ಎಲ್ಡಿಎಫ್ ಸರ್ಕಾರದ ವಿರುದ್ಧ ಹೋರಾಟ ಸಂಘಟಿಸಿ ಯುಡಿಎಫ್ ಮೈತ್ರಿಕೂಟವನ್ನು ಅಧಿಕಾರಕ್ಕೆ ತರಲು ಪ್ರಮುಖ ಪಾತ್ರವಹಿಸಿದ್ದ ವಿಪಕ್ಷ ನಾಯಕ ವಿಡಿ ಸತೀಶನ್ ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಸಿ ವೇಣುಗೋಪಾಲ್ ಹೆಸರು ಮುನ್ನೆಲೆಗೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಒಳಗೆ ಭಿನ್ನಾಭಿಪ್ರಾಯಗಳು ತೀವ್ರಗೊಂಡಿವೆ. ವಿಡಿ ಸತೀಶನ್ ಬಣವು ವೇಣುಗೋಪಾಲ್ ಆಯ್ಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ ಎಂದು ಹೇಳಲಾಗುತ್ತಿದೆ. ಶಾಸಕರ ಮೇಲೆ ಹೈಕಮಾಂಡ್ ಪ್ರಭಾವ ಬಳಸಿಕೊಂಡು ವೇಣುಗೋಪಾಲ್ ಪರ ಒತ್ತಡ ತರಲಾಗುತ್ತಿದೆ ಎಂಬ ಆರೋಪಗಳು ಕೂಡ ಕೇಳಿಬರುತ್ತಿವೆ.
ಈ ಬೆಳವಣಿಗೆಗಳ ನಡುವೆ ವಿಡಿ ಸತೀಶನ್ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. “ವಿಪಕ್ಷ ನಾಯಕರಾಗಿ ಕೆಲಸ ಮಾಡಿದ ಅವಧಿಯಲ್ಲಿ ನಾನು ಪಕ್ಷದೊಳಗೆ ಯಾವುದೇ ಗುಂಪುಗಾರಿಕೆ ಮಾಡಿಲ್ಲ. ಕಾಂಗ್ರೆಸ್ ಏಕತೆಯ ಪರವಾಗಿ ಕೆಲಸ ಮಾಡಿದ್ದೇನೆ,” ಎಂದು ಸತೀಶನ್ ಹೇಳಿದ್ದಾರೆ.
ಇನ್ನೊಂದೆಡೆ, ಕೆಸಿ ವೇಣುಗೋಪಾಲ್ ಪರ ಕಾರ್ಯಕರ್ತರನ್ನು ಮನವೊಲಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಿನ ಎರಡು ದಿನಗಳಲ್ಲಿ ಮಹತ್ವದ ಸಭೆಗಳನ್ನು ನಡೆಸುವ ಸಾಧ್ಯತೆ ಇದೆ.




